ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ 3 ಪ್ರತ್ಯೇಕ ಎಫ್ಐಆರ್ ದಾಖಲು
ಮಂಡ್ಯ, ಮಾರ್ಚ್ 28:ಮಂಡ್ಯದಲ್ಲಿ ರಾಜಕೀಯ ಜಿದ್ದಾಜಿದ್ದಿ ಆರಂಭವಾಗಿದ್ದು, ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ಜೆಡಿಎಸ್ ಇದೀಗ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಗುರಿಯಾಗಿದೆ. ಈ ಸಂಬಂಧ ಜೆಡಿಎಸ್ ವಿರುದ್ಧ 3 ಪ್ರತ್ಯೇಕ ಎಫ್ಐಆರ್ ದಾಖಲಾಗಿವೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮಂಡ್ಯ ಲೋಕಸಭಾ ಚುನಾವಣೆಯ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿ ಬಂದಿತ್ತು. ಇದರಿಂದ ಎಚ್ಚೆತ್ತ ಚುನಾವಣಾಧಿಕಾರಿಗಳು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಫ್ಲೈಯಿಂಗ್ ಸ್ಕ್ವಾಡ್ ರವಿ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿವೆ.
ಕಾವೇರಿ ಉದ್ಯಾನವನದಲ್ಲಿ ಸಮಾವೇಶಕ್ಕೆ ಬಂದಿದ್ದ ಕಾರ್ಯಕರ್ತರು ಹೂ ಕುಂಡಗಳು, ಹೂವಿನ ಗಿಡಗಳು, ಕಾರಂಜಿ, ವಿದ್ಯುತ್ ಸಂಪರ್ಕಗಳು, ಲಾನ್ ತುಳಿದು ಹಾಳು ಮಾಡಿದ್ದರು. ಜೊತೆಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆಯ ಪೋಲ್ಸ್ ಕೆಡವಿದ್ದರಿಂದ ಸುಮಾರು 8 ಲಕ್ಷ ರೂ. ಹಾನಿಯಾಗಿದೆ ಎಂದು ದೂರು ನೀಡಲಾಗಿದೆ.
ದೂರಿನ ಹಿನ್ನಲೆಯಲ್ಲಿ ಕಲಂ 427 ಐಪಿಸಿ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ನಿಯಂತ್ರಣ ಕಾಯ್ದೆ 1984ರ ಕಲಂ 3ರ ಅಡಿ ಪ್ರಕರಣ ದಾಖಲಾಗಿದೆ. ಮುಂದೆ ಓದಿ...

ದೂರು ಸಲ್ಲಿಸಿದ ಸ್ಕ್ವಾಡ್ ಸುಧಾಮ
ಜಯ ಚಾಮರಾಜೇಂದ್ರ ವೃತ್ತದಲ್ಲಿ ಅನುಮತಿ ಪಡೆಯದೆ ಹಸಿರು, ಬಿಳಿ ಬಣ್ಣದ ಪೇಪರ್ ಚೂರುಗಳನ್ನ ಸಿಡಿಸಿ ಮನರಂಜನೆ ಹೆಸರಲ್ಲಿ ಮತದಾರರನ್ನು ಸೆಳೆಯಲು ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಕಸಬಾ 1ರ ಫ್ಲೈಯಿಂಗ್ ಸ್ಕ್ವಾಡ್ ಸುಧಾಮ ದೂರು ಸಲ್ಲಿಸಿದ್ದರು.
ದೂರಿನ ಅನ್ವಯ ಐಪಿಸಿ 143, 342, ಆರ್.ಡಬ್ಲ್ಯೂ 149 ಐಪಿಸಿ ಅಡಿ ಪ್ರಕರಣ ದಾಖಲಿಸಲಾಗಿದೆ. ಮಾ.25 ರಂದು ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಮಧ್ಯಾಹ್ನ 2.30ರಿಂದ ಸಂಜೆ 4 ಗಂಟೆ ತನಕ ನಿಂತು ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸ್ಕ್ವಾಡ್ ಸುಧಾಮ ದೂರು ನೀಡಿದ್ದರು. ಈ ದೂರು ಆಧರಿಸಿ ಕಲಂ 171(ಬಿ) ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರತ್ಯೇಕ ದೂರು ನೀಡಿದ ಆರ್ಟಿಐ ಕಾರ್ಯಕರ್ತ
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಹಾಗೂ ಚುನಾವಣಾಕಾರಿಯೂ ಆದ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ವಿರುದ್ಧ ಆರ್ಟಿಐ ಕಾರ್ಯಕರ್ತ ಕೆ.ಆರ್. ರವೀಂದ್ರ ಮತ್ತು ಬಿ.ಎಸ್.ಗೌಡ ಎಂಬುವವರು ಪ್ರತ್ಯೇಕ ದೂರು ನೀಡಿದ್ದಾರೆ.

ಚುನಾವಣಾಧಿಕಾರಿಯನ್ನು ವರ್ಗಾವಣೆ ಮಾಡಿ
ಮತದಾರರಿಗೆ ಸಚಿವ ಪುಟ್ಟರಾಜು ಅವರು ಅನುದಾನದ ಅಮಿಷವೊಡ್ಡಿರುವ ಆರೋಪದ ಮೇಲೆ ಆರ್ಟಿಐ ಕಾರ್ಯಕರ್ತ ರವೀಂದ್ರ ದೂರು ಸಲ್ಲಿಸಿದ್ದು, ಚುನಾವಣೆ ಮುಗಿಯುವವರೆಗೂ ಜಿಲ್ಲೆಯ ಚುನಾವಣಾಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗಕ್ಕೆ ದೂರು
ಮತ್ತೊಂದು ಪ್ರಕರಣದಲ್ಲಿ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಬಿ.ಎಸ್.ಗೌಡ ಎಂಬುವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.












Click it and Unblock the Notifications