ಜೆಡಿಎಸ್ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆ ಮುಂದಕ್ಕೆ!
ಮಂಡ್ಯ, ನವೆಂಬರ್ 26 : 'ನಾವು ಏಳು ಜನ ಜೆಡಿಎಸ್ ಬಂಡಾಯ ಶಾಸಕರು ಜನವರಿ ಕೊನೆಯ ವಾರದಲ್ಲಿ ಕಾಂಗ್ರೆಸ್ ಸೇರಲಿದ್ದೇವೆ' ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದ್ದಾರೆ.
2018ರ ಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್ನಿಂದ ಅಮಾನತುಗೊಂಡಿರು ಶಾಸಕರು ಯಾವ ಪಕ್ಷ ಸೇರಲಿದ್ದಾರೆ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಶಾಸಕರು ಕಾಂಗ್ರೆಸ್ ಸೇರಲು ವಿರೋಧ ವ್ಯಕ್ತವಾಗುತ್ತಿದೆ.
ಶ್ರೀರಂಗಪಟ್ಟಣದಲ್ಲಿ ಶನಿವಾರ ಮಾತನಾಡಿದ ರಮೇಶ ಬಂಡಿಸಿದ್ದೇಗೌಡ ಅವರು, 'ಕಾಂಗ್ರೆಸ್ ಸೇರುವ ಕುರಿತು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಈಗಾಗಲೇ ಮಾತುಕತೆ ನಡೆಸಲಾಗಿದೆ' ಎಂದು ಹೇಳಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ಚರ್ಚೆ ನಡೆಸಿದ ಬಳಿಕ ಪಕ್ಷ ಸೇರುವ ದಿನಾಂಕವನ್ನು ನಿರ್ಧರಿಸಲಾಗುತ್ತದೆ. ಮೊದಲು ಡಿಸೆಂಬರ್ನಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಈಗ ಅದು ಮುಂದಕ್ಕೆ ಹೋಗಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದ 8 ಶಾಸಕರನ್ನು ಜೆಡಿಎಸ್ ಅಮಾನತುಗೊಳಿಸಿತ್ತು. ಇವರಲ್ಲಿ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ ಅವರನ್ನು ಪಕ್ಷಕ್ಕೆ ವಾಪಸ್ ಸೇರಿಸಿಕೊಳ್ಳಲಾಗಿದೆ. ಅಮಾನತುಗೊಂಡ ಶಾಸಕರು ಯಾರು? ..

ರಮೇಶ ಬಂಡಿಸಿದ್ದೇಗೌಡ
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಶಾಸಕ ರಮೇಶ ಬಂಡಿಸಿದ್ದೇಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅವರು ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ, ಕ್ಷೇತ್ರದ ಕಾಂಗ್ರೆಸ್ ನಾಯಕರಾದ ಇಂಡವಾಳು ಸಚ್ಚಿದಾನಂದ, ಮಾಧ್ಯಮ ವಿಭಾಗದ ಜಿಲ್ಲಾ ಸಂಚಾಲಕ ಎಂ.ಪುಟ್ಟೇಗೌಡ ಅವರು ನಮಗೆ ಟಿಕೆಟ್ ಎಂದು ಹೇಳುತ್ತಿದ್ದಾರೆ.

ಜಮೀರ್ ಅಹಮದ್ ಖಾನ್
ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಕ್ಷೇತ್ರದಲ್ಲಿ ಮೂರು ಬಾರಿ ಗೆಲುವು ಸಾಧಿಸಿರುವ ಜಮೀರ್ ಕಾಂಗ್ರೆಸ್ ಸೇರಲಿದ್ದಾರೆ.

ಬಾಲಕೃಷ್ಣ ವಿರುದ್ಧ ಅಭ್ಯರ್ಥಿ ಸಿದ್ಧವಾಗಿದ್ದಾರೆ
ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿದ್ದಾರೆ. ಬಾಲಕೃಷ್ಣ ಅವರ ಕಾಂಗ್ರೆಸ್ ಸೇರ್ಪಡೆಗೆ ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಮಾಗಡಿ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜು ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದು, ಬಾಲಕೃಷ್ಣ ವಿರುದ್ಧ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಚೆಲುವರಾಯಸ್ವಾಮಿ ವಿರುದ್ಧವೂ ಅಭ್ಯರ್ಥಿ ಸಿದ್ಧ
ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಚೆಲುವರಾಯಸ್ವಾಮಿ ಅವರು ಕಾಂಗ್ರೆಸ್ ಸೇರಲಿದ್ದಾರೆ. ಇವರ ವಿರುದ್ಧ ಸ್ಪರ್ಧಿಸಲು ಜೆಡಿಎಸ್ ಅಭ್ಯರ್ಥಿ ಸಿದ್ಧವಾಗಿದ್ದಾರೆ. ಮಾಜಿ ಶಾಸಕ ಕೆ.ಸುರೇಶ್ ಗೌಡ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದಾರೆ.

ಇಕ್ಬಾಲ್ ಅನ್ಸಾರಿ
ಗಂಗಾವತಿ ಕ್ಷೇತ್ರದ ಶಾಸಕ ಇಕ್ಬಾಲ್ ಅನ್ಸಾರಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅವರು ಸಹ ಕಾಂಗ್ರೆಸ್ ಸೇರಲಿದ್ದಾರೆ.

ಅಖಂಡ ಶ್ರೀನಿವಾಸಮೂರ್ತಿ
ಬೆಂಗಳೂರಿನ ಪುಲಿಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅವರು ಸಹ ಕಾಂಗ್ರೆಸ್ ಸೇರಲಿದ್ದಾರೆ.

ಭೀಮಾ ನಾಯಕ್
ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಭೀಮಾ ನಾಯಕ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅವರು ಸಹ ಕಾಂಗ್ರೆಸ್ ಸೇರಲಿದ್ದಾರೆ.












Click it and Unblock the Notifications