ಡಿಸೆಂಬರ್ನಲ್ಲಿ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ- ಡಾ.ಮಹೇಶ್ ಜೋಷಿ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವು ಮಂಡ್ಯ ಜಿಲ್ಲೆಯಲ್ಲಿ ಆಗಬೇಕು ಎಂಬ ನಿರ್ಧಾರವನ್ನು ಹಾವೇರಿಯಲ್ಲಿ ನಡೆದ ಸಮ್ಮೇಳನದಲ್ಲಿ ತೀರ್ಮಾನಿಸಲಾಗಿದ್ದು, ಇದರ ಅಂಗವಾಗಿ ಮೊದಲನೆಯ ಪೂರ್ವಭಾವಿ ಸಭೆಯನ್ನು ಮಂಡ್ಯದಲ್ಲಿ ನಡೆಸಲಾಗಿದೆ.
ಮಂಡ್ಯ, ಫೆಬ್ರವರಿ 27: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಆಯೋಜಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಷಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವು ಮಂಡ್ಯ ಜಿಲ್ಲೆಯಲ್ಲಿ ಆಗಬೇಕು ಎಂಬ ನಿರ್ಧಾರವನ್ನು ಹಾವೇರಿಯಲ್ಲಿ ನಡೆದ ಸಮ್ಮೇಳನದಲ್ಲಿ ತೀರ್ಮಾನಿಸಲಾಗಿದೆ. ಇದರ ಅಂಗವಾಗಿ ಮೊದಲನೆಯ ಪೂರ್ವಭಾವಿ ಸಭೆಯನ್ನು ಮಂಡ್ಯದಲ್ಲಿ ನಡೆಸಿದ್ದೇವೆ ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಜೊತೆ ಚರ್ಚಿಸಿ ಸಲಹೆ ಸೂಚನೆ ಪಡೆದಿದ್ದೇವೆ. ಸಮ್ಮೇಳನ ಆಯೋಜನೆಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ಮುಗಿದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 87 ಕನ್ನಡ ಪುಸ್ತಕ ಬಿಡುಗಡೆಗೊಳಿಸಲಾಗುವುದು. ಕನ್ನಡದ 87 ಸಾಧಕರನ್ನು ಸನ್ಮಾನಿಸಲಾಗುವುದು. ಸಮ್ಮೇಳನಕ್ಕೂ ಮೊದಲು ಕಾರ್ಯಕ್ರಮಕ್ಕೆ ಪ್ರಚಾರ ನೀಡಲು ಭುವನೇಶ್ವರಿ ಭಾವಚಿತ್ರವುಳ್ಳ ಕನ್ನಡ ರಥದ ಮೆರವಣಿಗೆಯನ್ನು ಆಯೋಜಿಸಬೇಕು ನಡೆಸಬೇಕು ಎಂದು ಹೇಳಿದರು.

ಹಾವೇರಿಯಲ್ಲಿ ಐತಿಹಾಸಿಕ ಸಮ್ಮೇಳನ ನಡೆಸಿದ್ದೇವೆ. ಜೊತೆಗೆ ಹಾವೇರಿಯಲ್ಲಿ ಆದ ಲೋಪದೋಷಗಳು ಮಂಡ್ಯದಲ್ಲಿ ಆಗಬಾರದು ಎನ್ನುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಿಬೇಕಿದೆ. ಮುಂದಿನ ತಿಂಗಳಿನಿಂದಲೇ ಸಿದ್ಧತೆ ನಡೆಸಲಾಗುವುದು ಎಂದು ತಿಳಿಸಿದರು.
ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 9 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಕನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಪುಸ್ತಕ ಮಾರಾಟ ಸಂದರ್ಭದಲ್ಲಿ ಆನಲೈನ್ ಮೂಲಕ ವಹಿವಾಟು ನಡೆಸಲು ತೊಡಕಾಗಿತ್ತು. ಈ ಬಾರಿ ಇದನ್ನು ಸರಿಪಡಿಸಿಕೊಳ್ಳಬೇಕು. ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಸತಿ ಗೃಹ, ಆಹಾರ ಇವುಗಳ ಬಗ್ಗೆ ಯಾವುದೇ ಲೋಪದೋಷಗಳು ಆಗದಂತೆ ನೋಡಿಕೊಳ್ಳಲಾಗುವುದು. ತಂತ್ರಜ್ಞಾನದ ಅಳವಡಿಕೆ ಜತೆಗೆ ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಕನಿಷ್ಠ 150 ಎಕರೆ ಇರುವ ಸ್ಥಳವನ್ನು ಗುರುತಿಸಿದರೆ ಸಮ್ಮೇಳನ ಆಯೋಜನೆಗೆ ಉತ್ತಮವಾಗಿರುತ್ತದೆ. ಮೂರು ವೇದಿಕೆ, ಪಾರ್ಕಿಂಗ್ ವ್ಯವಸ್ಥೆ, ಅಡುಗೆ ಮನೆ, ಮಾರಾಟ ಮಳಿಗೆಗಳು ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಾಣ ಮಾಡಬಹುದು. ಪ್ಲಾಸ್ಟಿಕ್ ಮುಕ್ತ ಸಮ್ಮೇಳನ ಆಯೋಜನೆ ಮಾಡಬೇಕು ಎಂದರು
ಜಿಲ್ಲಾಧಿಕಾರಿ ಡಾ.ಹೆಚ್.ಎನ್. ಗೋಪಾಲಕೃಷ್ಣ ಮಾತನಾಡಿ, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಜಿಲ್ಲೆ ಆಯ್ಕೆಯಾಗಿರುವುದು ತುಂಬಾ ಸಂತಸದ ವಿಚಾರ. ಈ ಹಿಂದೆ ನಡೆದಿರುವ ಎಲ್ಲಾ ಸಮ್ಮೇಳನಕ್ಕಿಂತ ಉತ್ತಮವಾಗಿ ಹೊಸ ದಾಖಲೆ ಸೃಷ್ಟಿ ಮಾಡುವ ರೀತಿ ಸಮ್ಮೇಳವನ್ನು ಆಯೋಜಿಸೋಣ, ಇದಕ್ಕೆ ಎಲ್ಲರೂ ಕಾರ್ಯ ಪ್ರವೃತ್ತರಾಗಬೇಕು ಎಂದರು.
ಸಭೆೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವಿ ಚಾಮಾಲಪುರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್. ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು, ಉಪವಿಭಾಗಾಧಿಕಾರಿ ನಂದೀಶ್, ವಿವಿಧ ಸಂಘಟನೆಗಳ ಮುಖ್ಯಸ್ಥರು ಇದ್ದರು.
ಸಭೆೆಯ ನಂತರ ಚಿಕ್ಕ ಮಂಡ್ಯ ಬಳಿ ಮತ್ತು ಉಮ್ಮಡಹಳ್ಳಿ ಗೇಟ್ ಸಂಜೋ ಆಸ್ಪತ್ರೆ ಹತ್ತಿರ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಷಿ, ಜಿಲ್ಲಾಧಿಕಾರಿ ಡಾ. ಹೆಚ್.ಎನ್.ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್. ನಾಗರಾಜು ಅವರು ಸ್ಥಳ ಪರಿಶೀಲನೆ ನಡೆಸಿದರು.












Click it and Unblock the Notifications