ಭವಾನಿ ರೇವಣ್ಣ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ : ಸಾ.ರಾ.ಮಹೇಶ್
ಮಂಡ್ಯ, ಜೂನ್ 14 : 'ರಾಜ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಅನೇಕ ಪ್ರವಾಸಿ ತಾಣಗಳಿದ್ದು, ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದ ವತಿಯಿಂದ 3 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ' ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು.
ಶುಕ್ರವಾರ ಸಾ.ರಾ.ಮಹೇಶ್ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕೋಟೆಬೆಟ್ಟ ಕಂಬದ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತವಾಗಿ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, 'ಈಗಾಗಲೇ ರಾಜ್ಯದಲ್ಲಿ ಹೆಚ್ಚು ಪ್ರವಾಸಿಗರು ಬಂದು ಹೋಗುವ ಸುಮಾರು 20 ಸ್ಥಳಗಳನ್ನು ಗುರುತಿಸಲಾಗಿದೆ. ಈ ಸ್ಥಳಗಳ ಸಮಗ್ರ ಅಭಿವೃದ್ಧಿಗಾಗಿ ಸುಮಾರು ರೂ. 3000 ಕೋಟಿ ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ' ಎಂದರು.

'ಪ್ರವಾಸೋದ್ಯಮ ಅಭಿವೃದ್ಧಿ ಆಗಬೇಕಾದರೆ ಮೊದಲು ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಒದಗಿಸಬೇಕು. ರಾಜ್ಯದ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅಲ್ಲದೇ ಈಗಾಗಲೇ ಗುರುತಿಸಿರುವ 20 ಪ್ರವಾಸಿ ಸ್ಥಳಗಳಲ್ಲಿ ಆದಷ್ಟು ಬೇಗ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತದೆ' ಎಂದು ಹೇಳಿದರು.
ಯಾವುದೇ ಭಿನ್ನಾಭಿಪ್ರಾಯವಿಲ್ಲ : 'ನನ್ನ ಮತ್ತು ಭವಾನಿ ರೇವಣ್ಣ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ' ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಸ್ಪಷ್ಟಪಡಿಸಿದರು.
'ನಮ್ಮ ಕ್ಷೇತ್ರ ಮತ್ತು ಹೊಳೆನರಸೀಪುರ ಕ್ಷೇತ್ರ ಎರಡೂ ಒಂದಕ್ಕೊಂದು ಸನಿಹದಲ್ಲಿದ್ದು, ನಮ್ಮ ಕಾರ್ಯಕರ್ತರು ಕೆಲವು ಅಭಿಪ್ರಾಯಗಳನ್ನು ಅವರೊಂದಿಗೆ ಹಂಚಿಕೊಳ್ಳುತ್ತಾರೆ, ಅದನ್ನು ಹೊರತುಪಡಿಸಿ ಬೇರೆನಿಲ್ಲ' ಎಂದರು.
ಸಾಲಮನ್ನಾ ವಿಚಾರ : 'ರೈತರ ಸಾಲಮನ್ನಾ ವಿಚಾರವಾಗಿ, ಮುಖ್ಯಮಂತ್ರಿಗಳು ರೈತರು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಮಾತುಕೊಟ್ಟಂತೆ ಪೂರಕವಾಗಿ ಮಾತನಾಡಿದ್ದಾರೆ. ಬಜೆಟ್ ಮಂಡನೆ ಮೇಳೆ ಸಾಲಮನ್ನಾ ಕುರಿತ ವಿಷಯಕ್ಕೆ ಉತ್ತರ ಸಿಗಲಿದೆ' ಎಂದು ಹೇಳಿದರು.












Click it and Unblock the Notifications