ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ ರೇವಣ್ಣ ಹಾಗೂ ಜಯಚಂದ್ರ ದಂಪತಿ
ಮಂಡ್ಯ, ಆಗಸ್ಟ್ 21: ಪ್ರತಿ ಅಮಾವಾಸ್ಯೆಯಂದು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಿಂದ ಎಚ್.ಡಿ.ಕುಮಾರಸ್ವಾಮಿ, ಅನಿತಾಕುಮಾರಸ್ವಾಮಿ ದಂಪತಿ ಮಂಡ್ಯದ ನಾಗಮಂಗಲದ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದರು.
ಈ ಬಾರಿ ಅಂದರೆ ಸೋಮವಾರದಂದು ಎಚ್.ಡಿ.ರೇವಣ್ಣ, ಭವಾನಿ ದಂಪತಿ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು. ಬೆಳಗ್ಗೆ ದಂಪತಿ ಸಹಿತ ಕಾಲಭೈರವೇಶ್ವರಸ್ವಾಮಿ ದೇವಾಲಯಕ್ಕೆ ಆಗಮಿಸಿದ ರೇವಣ್ಣ ಪಂಚಾಮೃತಾಭಿಷೇಕ, ಭಸ್ಮಾಭಿಷೇಕ, ಬಿಲ್ವಾಭಿಷೇಕ, ಪುಷ್ಪಾಭಿಷೇಕ, ಸುಗಂಧ ದ್ರವ್ಯಾದಿಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.

ಆ ಬಳಿಕ ಕಾಲಭೈರವೇಶ್ವರಸ್ವಾಮಿ ದೇವಾಲಯದಲ್ಲಿ ನಡೆದ ಬೆಳ್ಳಿ ರಥೋತ್ಸವದಲ್ಲಿ ಪಾಲ್ಗೊಂಡರು. ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ನಡೆದ ವಿವಿಧ ಸೇವೆ, ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡ ರೇವಣ್ಣ ದಂಪತಿ ದೇವರಿಗೆ ನಮಿಸಿ ಇಷ್ಟಾರ್ಥ ನೆರವೇರಿಸುವಂತೆ ಪ್ರಾರ್ಥಿಸಿದರು.
ಈ ಬಾರಿ ದೇವಾಲಯಕ್ಕೆ ಕಾನೂನು ಸಚಿವ ಟಿ.ಬಿ.ಜಯಚಂದ್ರ ದಂಪತಿ ಕೂಡ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಇಬ್ಬರೂ ದಂಪತಿಯನ್ನು ನಿರ್ಮಲಾನಂದನಾಥ ಮಹಾಸ್ವಾಮೀಜಿ ಶಾಲು ಹೊದಿಸಿ ಸನ್ಮಾನಿಸಿದರು.
ಪೂಜಾ ಕಾರ್ಯದ ನಂತರ ಕೆಲಕಾಲ ಸ್ವಾಮೀಜಿಯೊಂದಿಗೆ ಉಭಯ ಕುಶಲೋಪರಿ ನಡೆಸಿದ ದಂಪತಿ ಮಠದಿಂದ ಮರಳಿದರು. ಅಮಾವಾಸ್ಯೆ ಪೂಜೆಯ ಕಾರಣಕ್ಕೆ ಆದಿಚುಂಚನಗಿರಿ ಕ್ಷೇತ್ರದಲ್ಲಿರುವ ಕಾಲಭೈರವೇಶ್ವರ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತ ಸಮೂಹ ಹರಿದು ಬಂದಿತ್ತು.












Click it and Unblock the Notifications