ಕುಮಾರಸ್ವಾಮಿ ಒಬ್ಬ ಊಸರವಳ್ಳಿ: ಸಚಿವ ಬಿ.ಸಿ ಪಾಟೀಲ್ ತಿರುಗೇಟು
ಮಂಡ್ಯ, ಸೆಪ್ಟೆಂಬರ್ 8: ಡ್ರಗ್ಸ್ ಮಾಫಿಯಾ ಹಣದಿಂದಲೇ ಮೈತ್ರಿ ಸರ್ಕಾರ ಪತನವಾಯಿತೆಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರೊಬ್ಬ ಊಸರವಳ್ಳಿ ಇದ್ದಂತೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು ನೀಡಿದರು.
Recommended Video
ಮೈಸೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆಗೆ ತೆರಳುವ ಮುನ್ನ ಮದ್ದೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಪಕ್ಷಗಳ ಊಹಾಪೋಹದ ಆರೋಪಗಳಿಗೆಲ್ಲ ಉತ್ತರಿಸಬೇಕಾಗಿಲ್ಲ. ಡ್ರಗ್ಸ್ ದಂಧೆಯಲ್ಲಿ ಪಾಲ್ಗೊಂಡವರು ಯಾರೇ ಇರಲಿ ಸರ್ಕಾರ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಡ್ರಗ್ಸ್ ಮಾಫಿಯಾ ಇತ್ತು ಎಂಬ ವಿಷಯ ಕಿವಿಗೆ ಬಿದ್ದಾಗಲೇ ಅಂದು ಸಿಎಂ ಆಗಿದ್ದ ಎಚ್.ಡಿ ಕುಮಾರಸ್ವಾಮಿ ಅದನ್ನು ಮಟ್ಟ ಹಾಕಬಹುದಿತ್ತು. ಆದರೆ ಒಂದು ವರ್ಷ ಸುಮ್ಮನಿದ್ದು, ಡ್ರಗ್ಸ್ ವಿಚಾರ ಸುದ್ದಿಯಲ್ಲಿರುವ ಈ ಸಂದರ್ಭದಲ್ಲಿ ಅವರು ಆರೋಪಿಸುತ್ತಿರುವುದೇಕೆ? ಎಂದು ಪ್ರಶ್ನಿಸಿದರು.

ಮೈತ್ರಿ ಸರ್ಕಾರದ ನಶೆಯಿಂದ ಹೊರಬರಲು ಕುಮಾರಸ್ವಾಮಿ ಅವರಿಗೆ ಒಂದು ವರ್ಷ ಬೇಕಾಯಿತೇ? ಮೈತ್ರಿ ಸರ್ಕಾರ ಅಸ್ಥಿರಗೊಂಡಾಗ ಏಕೆ ಕುಮಾರಸ್ವಾಮಿ ಹೇಳಲಿಲ್ಲ. ಕುಮಾರಸ್ವಾಮಿ ಆಗಾಗ ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಿರುತ್ತಾರೆ. ಮುಖ್ಯಮಂತ್ರಿಯಾಗಿದ್ದವರು ಜವಾಬ್ದಾರಿಯಿಂದ ಮಾತನಾಡಬೇಕಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಇಲ್ಲ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ. ಅಂತವರ ವಿರುದ್ಧ ಕ್ರಮವನ್ನೂ ಜರುಗಿಸಿ ಪರವಾನಿಗೆ ರದ್ದು ಮಾಡಲಾಗುತ್ತಿದೆ. ರೈತರಿಗಾಗಲೀ ಕೃಷಿ ಚಟುವಟಿಕೆಗಳಿಗಾಗಲೀ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.
ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಬಿತ್ತನೆಯಾಗಿದೆ. ಮಂಡ್ಯ ಸೇರಿದಂತೆ ಸುತ್ತಮುತ್ತಲ ಎಲ್ಲ ಜಿಲ್ಲೆಗಳ ಕೃಷಿ ಅಧಿಕಾರಿಗಳ ಜೊತೆಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಸ್ಪಷ್ಟಪಡಿಸಿದರು.












Click it and Unblock the Notifications