ಹಳೇ ಮೈಸೂರು ಭಾಗದ ಮೇಲೆ ಬಿಜೆಪಿ ವರಿಷ್ಠರ ಕಣ್ಣು: ಚುನಾವಣೆಗೆ ಹೊಸತಂತ್ರ
ಮಂಡ್ಯ, ಜನವರಿ 2: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಹಳೇ ಮೈಸೂರು ಭಾಗವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಶತಾಯಗತಾಯ ಕನಿಷ್ಠ 25 ಸ್ಥಾನಗಳಲ್ಲಿ ಗೆಲ್ಲುವ ಸಂಕಲ್ಪ ಮಾಡಿದೆ.
ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಜನಸಂಕಲ್ಪ ಯಾತ್ರೆ ಅದ್ಧೂರಿ ಯಶಸ್ಸನ್ನು ಕಂಡಿದ್ದು, ಕಾರ್ಯಕರ್ತರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಕಾಂಗ್ರೆಸ್-ಜೆಡಿಎಸ್ ನಡುವಿನ ಚುನಾವಣಾ ಸಮರಕ್ಕೆ ಸೀಮಿತವಾಗಿದ್ದ ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಈಗಾಗಲೇ ನೆಲೆ ಕಂಡುಕೊಂಡಿದ್ದು, ಅದನ್ನು ವಿಸ್ತರಿಸಿಕೊಳ್ಳುವ ಪೂರ್ವಸಿದ್ಧತೆಯನ್ನು ಪಕ್ಷ ಆರಂಭಿಸಿದೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲೇಬೇಕೆಂಬ ಹಠಕ್ಕೆ ಬಿದ್ದಿರುವ ಕೇಂದ್ರ ನಾಯಕರು ಹಳೇ ಮೈಸೂರು ಭಾಗದಿಂದಲೇ ಹೆಚ್ಚು ಸ್ಥಾನಗಳನ್ನು ಪಡೆಯಲು ನಿರ್ಧರಿಸಿದ್ದು, ಈ ಭಾಗದಲ್ಲಿ ಹೆಚ್ಚು ಪ್ರಾಬಲ್ಯ ಸಾಧಿಸಿರುವ ಜೆಡಿಎಸ್ ವಿರುದ್ಧ ನೇರವಾಗಿ ಚುನಾವಣಾ ಸಮರ ಘೋಷಿಸಿದ್ದಾರೆ.

ಹಳೇ ಮೈಸೂರು ಭಾಗಕ್ಕೆ ಪ್ರಭಾವಿ ನಾಯಕರ ಎಂಟ್ರಿ ಸಾಧ್ಯತೆ
ಈ ಹಿಂದಿನಿಂದಲೂ ಬಿಜೆಪಿ ಈ ಭಾಗದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿತ್ತಾದರೂ ಕನಿಷ್ಠ ಮತಗಳಿಕೆಗೆ ಸೀಮಿತವಾಗಿತ್ತು. ಬಿಜೆಪಿಯಲ್ಲಿ ಒಕ್ಕಲಿಗ ನಾಯಕರೆಂದು ಬಿಂಬಿಸಿಕೊಳ್ಳುತ್ತಿದ್ದ ಸಚಿವ ಆರ್.ಅಶೋಕ್ ಮತ್ತಿತರರು ಜೆಡಿಎಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಹೋಗುತ್ತಿದ್ದುದೇ ಬಿಜೆಪಿ ಹಿನ್ನಡೆಗೆ ಕಾರಣ ಎನ್ನುವುದು ಹಲವಾರು ನಾಯಕರ ಅಭಿಪ್ರಾಯವಾಗಿದೆ. ಹೀಗಾಗಿ ಕೇಂದ್ರ ನಾಯಕರು 2023ರ ಚುನಾವಣೆಗೆ ಹೊಸ ನಾಯಕತ್ವವನ್ನು ಸೃಷ್ಟಿಸಿದ್ದಾರೆ.
ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ, ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಹಾಸನ ಶಾಸಕ ಪ್ರೀತಂಗೌಡ ಮತ್ತಿತರ ಪಕ್ಷನಿಷ್ಠರನ್ನು ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆಗೆ ನಿಯೋಜನೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಮಂಡ್ಯದಲ್ಲಿ ಅಮಿತ್ ಶಾ ನೇತೃತ್ವದ ಜನಸಂಕಲ್ಪ ಯಾತ್ರೆ ಯಶಸ್ವಿಯಾದ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರಂತಹ ಪ್ರಭಾವಿ ನಾಯಕರನ್ನು ಹಳೇ ಮೈಸೂರು ಪ್ರಾಂತ್ಯಕ್ಕೆ ಕರೆತಂದು ಪ್ರಚಾರ ನಡೆಸುವ ಮೂಲಕ ಬಿಜೆಪಿ ಪರವಾದ ವಾತಾವರಣ ಸೃಷ್ಟಿಸುವ ಲೆಕ್ಕಾಚಾರಗಳು ನಡೆದಿವೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಗೆಲ್ಲುವ ಅಭ್ಯರ್ಥಿಯನ್ನು ಹುಡುಕುವ ಪ್ರಯತ್ನದಲ್ಲಿ ಕೇಂದ್ರ
ಈಗಾಗಲೇ ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದು, ಚುನಾವಣೆ ಅಂತಿಮ ಘಟ್ಟ ತಲುಪುವ ವೇಳೆ ಇನ್ನಷ್ಟು ಪ್ರಭಾವಿ ಹಾಗೂ ಗೆಲ್ಲುವ ಅಭ್ಯರ್ಥಿಗಳನ್ನು ಹುಡುಕಿ ತರುವ ಪ್ರಯತ್ನಗಳು ನಡೆದಿವೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನೇ ತನ್ನ ನೇರ ಎದುರಾಳಿ ಎಂದು ಘೋಷಿಸಿರುವ ಬಿಜೆಪಿ ಪರೋಕ್ಷವಾಗಿ ಜೆಡಿಎಸ್ ವಿರೋಧಿ ಮನಸ್ಥಿತಿಯ
ಕಾಂಗ್ರೆಸ್ಸಿಗರನ್ನು ಸೆಳೆಯುವ ಲೆಕ್ಕಾಚಾರವೂ ಇದರಲ್ಲಿ ಅಡಗಿದ್ದು, ಸ್ವತಃ ಕೇಂದ್ರ ನಾಯಕರೇ ಹಳೇ ಮೈಸೂರು ಭಾಗದ ಉಸ್ತುವಾರಿ ವಹಿಸಿರುವುದು ಸಹಜವಾಗಿಯೇ ಬಿಜೆಪಿಯೊಳಗಿನ ಹೊಂದಾಣಿಕೆ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ.

ಬಿಜೆಪಿಗೆ ಹೊಸ ಭರವಸೆ ಮೂಡಿಸಿದ ಕೆ.ಸಿ.ನಾರಾಯಣಗೌಡ ಗೆಲುವು
ಹಳೇ ಮೈಸೂರು ಭಾಗದಲ್ಲಿ ಅತ್ಯಂತ ದುರ್ಬಲ ಸ್ಥಿತಿಯಲ್ಲಿದ್ದ ಬಿಜೆಪಿಗೆ ಶಕ್ತಿ ತುಂಬಲು ಮತ್ತು ಈ ಭಾಗದಿಂದಲೇ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಬೇಕೆಂಬ ಕಟ್ಟಾಜ್ಞೆಯನ್ನು ಕೇಂದ್ರದ ನಾಯಕರು ರಾಜ್ಯದ ನಾಯಕರಿಗೆ ಹೊರಡಿಸಿದ್ದು, ಇದರಿಂದಾಗಿ ಈ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.
ಹಿಂದೆಲ್ಲಾ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಕಟ್ಟಲು ಸಾಧ್ಯವಿಲ್ಲವೆಂಬ ನಿರ್ಧಾರಕ್ಕೆ ಬಂದಿದ್ದ ಸ್ಥಳೀಯ ನಾಯಕರು ಈಗ ವರಿಷ್ಠರ ಆದೇಶದನ್ವಯ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಕಳೆದ ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಕ್ಷೇತ್ರದಿಂದ ಕೆ.ಸಿ.ನಾರಾಯಣಗೌಡ ಗೆಲುವು ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದಂತಾಗಿದೆ. ಈ ಚುನಾವಣೆಯಲ್ಲಿ ಕನಿಷ್ಠ 3 ಸ್ಥಾನಗಳಲ್ಲಿ ಗೆಲ್ಲುವ ಹಠಕ್ಕೆ ಬಿದ್ದಿದೆ.

ಕುತೂಹಲ ಕ್ಷೇತ್ರವಾದ ಹಳೇ ಮೈಸೂರು
ಕಳೆದ ನಾಲ್ಕೈದು ಚುನಾವಣೆಗಳಲ್ಲಿ ಕಾಂಗ್ರೆಸ್ ಮತಗಳಿಕೆ ಪ್ರಮಾಣ ಕಡಿಮೆಯಾಗುತ್ತಿದೆ. ಜೆಡಿಎಸ್ ಮತಗಳಿಕೆಯನ್ನು ಕಾಯ್ದುಕೊಂಡರೆ, ಕಾಂಗ್ರೆಸ್ ಮತಗಳಿಕೆಯನ್ನು ಬಿಜೆಪಿ ಸೆಳೆಯುತ್ತಿದೆ ಎನ್ನಲಾಗಿದೆ. ಅದನ್ನೇ ಆಧಾರವಾಗಿಟ್ಟುಕೊಂಡಿರುವ ಬಿಜೆಪಿ ಇದೀಗ ಜೆಡಿಎಸ್ ಮತಬುಟ್ಟಿಗೆ ಕೈ ಹಾಕುವ ಮೂಲಕ ಜೆಡಿಎಸ್ಗೆ ಚೆಕ್ಮೇಟ್ ಕೊಡಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಚುನಾವಣಾ ಚಟುವಟಿಕೆಗಳು ಬಿರುಸುಗೊಳ್ಳುವ ಸಾಧ್ಯತೆಗಳಿದ್ದು, ಮೂರು ಪಕ್ಷಗಳು ಯಾವ್ಯಾವ ತಂತ್ರಗಾರಿಕೆಯನ್ನು ಅನುಸರಿಸುತ್ತವೆ ಎನ್ನುವುದನ್ನು ಕಾದು ನೋಡಬೇಕಿದೆ.











Click it and Unblock the Notifications