Mandya MLA Election: ಮಂಡ್ಯದಲ್ಲಿ ಕಮಲ, ದಳ, ಕೈ ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಮಂಡ್ಯ, ಏಪ್ರಿಲ್, 20: ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾವಣೆ ನಿಗಧಿಯಾಗಿದ್ದು, ಗುರುವಾರ (ಏಪ್ರಿಲ್ 20) ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿತ್ತು. ಜಿಲ್ಲಾದ್ಯಂತ ಘಟಾನು ಘಟಿ ರಾಜಕಾರಣಿಗಳು ನಾಮಪತ್ರಗಳನ್ನು ಸಲ್ಲಿಸಿ ಅಖಾಡಕ್ಕೆ ದುಮುಕಿದರು.
ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಶೋಕ್ ಜಯರಾಂ ಅವರು ನಗರದ ಕಾಳಿಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದೆ ಸುಮಲತಾ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್ ಸೇರಿದಂತೆ ಹಲವರು ಹಾಜರಿದ್ದರು.

ಇನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ರವಿಕುಮಾರ್ ಗಣಿಗ ಅವರು ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನೇರವಾಗಿ ಕಾರಿನಲ್ಲಿ ತಮ್ಮ ಧರ್ಮಪತ್ನಿ ಹಾಗೂ ಕಾಂಗ್ರೆಸ್ ಮುಖಂಡರಾದ ಕೆ.ಕೆ. ರಾಧಾಕೃಷ್ಣ, ಸಿದ್ಧಾರೂಢ ಸತೀಶ್ಗೌಡ, ಎಂ.ಎಸ್. ಚಿದಂಬರ್ ಅವರೊಂದಿಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಇನ್ನು ಜೆಡಿಎಸ್ ಅಭ್ಯರ್ಥಿಯಾಗಿ ಮನ್ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರ ಅವರೂ ಸಹ ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಹಾಲಿ ಶಾಸಕ ಎಂ. ಶ್ರೀನಿವಾಸ್ ಅವರು ಜೆಡಿಎಸ್ನಿಂದ ಸಿಡಿದೆದ್ದು ತಮ್ಮ ಅಳಿಯ ಎಚ್.ಎನ್. ಯೋಗೀಶ್, ಬೆಂಬಲಿಗರಾದ ಕೆ.ಎಸ್. ವಿಜಯಾನಂದ, ಮುದ್ದನಘಟ್ಟ ಮಹಾಲಿಂಗೇಗೌಡ ಅವರು ಸ್ವಾಭಿಮಾನಿ ಪಡೆ ಹೆಸರಿನಲ್ಲಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿ ಜೆಡಿಎಸ್ಗೆ ಸಡ್ಡು ಹೊಡೆದರು.
ಕಾಂಗ್ರೆಸ್ ಮುಖಂಡ ಡಾ. ಎಚ್. ಕೃಷ್ಣ ಅವರೂ ಸಹ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಮತ್ತೆ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆಯಾಗುವ ಸೂಚನೆಯನ್ನು ಕೂಡ ನೀಡಿದ್ದಾರೆ.
ನಾಮಪತ್ರ ಸಲ್ಲಿಸಲು ಕೊನೆಯ ದಿನ
ಹಾಗೆಯೇ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೇ ದಿನವಾದ ಇಂದು ಸಾಕಷ್ಟು ಬೆಳವಣಿಗೆ ನಡೆಯುತ್ತಿವೆ. ಸಂಸದೆ ಸುಮಲತಾ ಮಂಡ್ಯದಿಂದ ವಿಧಾನಸಭೆ ಅಖಾಡಕ್ಕೆ ಎಂಟ್ರಿ ಕೊಡಲಿದ್ದಾರೆಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಇತ್ತೀಚೆಗೆ ಬಿಜೆಪಿಗೆ ಅಧಿಕೃತವಾಗಿ ಬೆಂಬಲ ಘೋಷಿಸಿದ್ದ ಸುಮಲತಾ ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಡಲಿದ್ದಾರಂತೆ ಎನ್ನುವ ಮಾತುಗಳು ಕೇಳಿಬಂದಿದ್ದವು.
2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಪಿಯ ಪರೋಕ್ಷ ಬೆಂಬಲ ಕೂಡ ಅವರಿಗೆ ವರವಾಗಿತ್ತು. ಇನ್ನು ಕೆಲ ತಿಂಗಳ ಹಿಂದೆ ಸುಮಲತಾ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಹಬ್ಬಿದಾಗ, ದಿಢೀರ್ ಮಂಡ್ಯದಲ್ಲೇ ಸುದ್ದಿಗೋಷ್ಠಿ ಕರೆದು ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಆದರೆ ಈಗ ಬರುತ್ತಿರುವ ಸುದ್ದಿ ನೋಡಿದರೆ ಮಂಡ್ಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಕದನ ಫಿಕ್ಸ್ ಎಂಬ ಮಾತು ಕೇಳಿಬರುತ್ತಿವೆ. ಆದರೆ ಅಧಿಕೃತವಾಗಿ ಸಂಸದೆ ಸುಮಲತಾ ಚುನಾವಣೆಗೆ ನಿಲ್ಲುವ ಬಗ್ಗೆ ಹೇಳಿಕೆ ನೀಡಿಲ್ಲ.
ಜೆಡಿಎಸ್ ನಾಯಕರ ವಿರುದ್ಧ ಪದೇಪದೆ ವಾಗ್ದಾಳಿ ನಡೆಸುತ್ತಿರುವ ಸುಮಲತಾ ಅಂಬರೀಶ್ ಮಂಡ್ಯದಿಂದ ಸ್ಪರ್ಧೆ ಮಾಡಿದರೆ ಅದು ದಳಪತಿಗಳ ಕೋಟೆಗೆ ನೇರಪೆಟ್ಟು ನೀಡುವ ಸಾಧ್ಯತೆ ಹೆಚ್ಚು. ಹೀಗಾಗಿಯೇ ಕಮಲ ಪಡೆ ನಾಯಕರು ರಣತಂತ್ರ ರೂಪಿಸಿ ಸುಮಲತಾ ಸ್ಪರ್ಧೆಗೆ ಪ್ಲ್ಯಾನ್ ಹಾಕಿದ್ದಾರೆ ಎನ್ನಲಾಗಿದೆ. ಮತ್ತೊಂದು ಕಡೆ ಈಗಾಗಲೇ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ನಲ್ಲೇ ಭಾರಿ ಗೊಂದಲ ಏರ್ಪಟ್ಟಿದ್ದು, ಜೆಡಿಎಸ್ ಟಿಕೆಟ್ ಅನ್ನ ದಿಢೀರ್ ಬದಲಾವಣೆ ಮಾಡಲಾಗಿದೆ. ಶಾಸಕ ಎಂ.ಶ್ರೀನಿವಾಸ್ಗೆ ನೀಡಿದ್ದ ಟಿಕೆಟ್ ಹಿಂಪಡೆದು, ಮನ್ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರುಗೆ ಟಿಕೆಟ್ ನೀಡಿದೆ ಜೆಡಿಎಸ್.
ತಮಗೆ ಜೆಡಿಎಸ್ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಶ್ರೀನಿವಾಸ್ ಜೆಡಿಎಸ್ ಸದಸ್ಯತ್ವ ತೊರೆದು ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಜೆಡಿಎಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹೀಗೆ ಜೆಡಿಎಸ್ ಭಿನ್ನಮತದ ಲಾಭವನ್ನೂ ಪಡೆಯಲು ಕಮಲ ಪಾಳಯ ಮಾಸ್ಟರ್ ಪ್ಲ್ಯಾನ್ ರೂಪಿಸಿರಬಹುದು. ಸುಮಲತಾ ಸ್ಪರ್ಧೆಯಿಂದ ಮಾತ್ರ ಇದೆಲ್ಲಾ ಸಾಧ್ಯ. ಹೀಗಾಗಿ ಇನ್ನು ಕೆಲವೇ ಕ್ಷಣಗಳಲ್ಲಿ ಸುಮಲತಾ ಮಂಡ್ಯ ಕ್ಷೇತ್ರದಿಂದ ವಿಧಾನಸಭೆ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ.












Click it and Unblock the Notifications