ಕೆ. ಆರ್. ಪೇಟೆ ಉಪ ಚುನಾವಣೆಯಲ್ಲಿ ಯಾರಿಗೆ ಗೆಲುವು?
ಮಂಡ್ಯ, ಸೆಪ್ಟೆಂಬರ್ 22 : ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 2018ರಲ್ಲಿ ಜೆಡಿಎಸ್ನ ಕೆ. ಸಿ. ನಾರಾಯಣ ಗೌಡ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಈಗ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.
ಉಪ ಚುನಾವಣೆಗೆ ಮಂಡ್ಯ ಜಿಲ್ಲಾಡಳಿತ ಸಕಲ ರೀತಿಯ ವ್ಯವಸ್ಥೆ ಮಾಡಿಕೊಂಡಿದೆ. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಹೇಳಿದರು.
ಸೆಪ್ಟೆಂಬರ್ 23ರ ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಸೆಪ್ಟೆಂಬರ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಉಪ ಚುನಾವಣೆ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.
ಕೆ. ಆರ್. ಪೇಟೆ ಕ್ಷೇತ್ರದಲ್ಲಿ 258 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. 105848 ಪುರುಷ, 102533 ಮಹಿಳಾ, 3 ಇತರೆ ಮತದಾರರು ಇದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ ನೀಡಲಾಗಿದೆ.

2018ರ ಚುನಾವಣೆ
2018ರ ವಿಧಾನಸಭೆ ಚುನಾವಣೆಯಲ್ಲಿ ಕೆ. ಆರ್. ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನ ನಾರಾಯಣ ಗೌಡ 88016 ಮತಗಳನ್ನು ಪಡೆದು ಕಾಂಗ್ರೆಸ್ನ ಕೆ. ಬಿ. ಚಂದ್ರಶೇಖರ್ ಸೋಲಿಸಿದ್ದರು. ಶಾಸಕ ಸ್ಥಾನದಿಂದ ಅವರು ಅನರ್ಹಗೊಂಡಿರುವ ಕಾರಣ ಈಗ ಉಪ ಚುನಾವಣೆ ಎದುರಾಗಿದೆ.

ಬಿಜೆಪಿಗೆ ನೆಲೆಯೇ ಇಲ್ಲ
ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯೇ ಇಲ್ಲ. ಕಳೆದ ಚುನಾವಣೆಯಲ್ಲಿ ಬಿಜೆಪಿಯ ಬಿ. ಸಿ. ಮಂಜು ಕೇವಲ 9819 ಮತಗಳನ್ನು ಮಾತ್ರ ಪಡೆದಿದ್ದರು. ಈ ಉಪ ಚುನಾವಣೆಯಲ್ಲಿಯೂ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ನಡೆಯಲಿದೆ.

ಕ್ಷೇತ್ರ ಉಳಿಸಿಕೊಳ್ಳುತ್ತಾ ಜೆಡಿಎಸ್
ಮಂಡ್ಯ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ 2018ರ ಚುನಾವಣೆಯಲ್ಲಿ ಜೆಡಿಎಸ್ ಜಯಗಳಿಸಿತ್ತು. ಈಗ ಉಪ ಚುನಾವಣೆ ಘೋಷಣೆಯಾಗಿದ್ದು, ಕ್ಷೇತ್ರವನ್ನು ಉಳಿಸಿಕೊಳ್ಳುವ ಜೆಡಿಎಸ್ ತಂತ್ರ ರೂಪಿಸಬೇಕಾಗಿದೆ. ಪಕ್ಷದ ಟಿಕೆಟ್ನಿಂದ ಗೆದ್ದು ಪಕ್ಷಕ್ಕೆ ದ್ರೋಹ ಮಾಡಿದ ನಾರಾಯಣ ಗೌಡ ಸೋಲಿಸಲು ಎಚ್. ಡಿ. ಕುಮಾರಸ್ವಾಮಿ ವ್ಯೂಹ ರಚನೆ ಮಾಡುತ್ತಿದ್ದಾರೆ.

ಯಾರಿಗೆ ಟಿಕೆಟ್?
ಕೆ. ಆರ್. ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಕೆ. ಬಿ. ಚಂದ್ರಶೇಖರ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಒಂದು ವೇಳೆ ಸುಪ್ರೀಂಕೋರ್ಟ್ ತೀರ್ಪು ನಾರಾಯಣ ಗೌಡ ಪರವಾಗಿ ಬಾರದಿದ್ದರೆ ಅವರ ಪತ್ನಿಗೆ ಟಿಕೆಟ್ ನೀಡಲು ಬಿಜೆಪಿ ಮುಂದಾಗಿದೆ. ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.












Click it and Unblock the Notifications