ಕಾವೇರಿ ವಿವಾದ: ಮಂಡ್ಯದಲ್ಲಿ ರೈತ ಸಂಘಟನೆಗಳಿಂದ ಮುಂದುವರೆದ ಪ್ರತಿಭಟನೆ
ಮಂಡ್ಯ, ಆಗಸ್ಟ್ 22: ಕೃಷ್ಣರಾಜಸಾಗರ (ಕೆಆರ್ಎಸ್) ಅಣೆಕಟ್ಟಿನಿಂದ ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಂಗಳವಾರ ಎರಡನೇ ದಿನವೂ ಮುಂದುವರಿದಿದೆ.
ಸೋಮವಾರ ಮಂಡ್ಯದಲ್ಲಿ ಬಿಜೆಪಿ ಸಂಸದೆ ಸುಮಲತಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಗೆ ಹಲವಾರು ರೈತ ಸಂಘಟನೆಗಳು ಮತ್ತು ಜೆಡಿಎಸ್ ಬೆಂಬಲ ನೀಡಿವೆ. ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್ಆರ್ಎಸ್) ಸದಸ್ಯರು ಮಂಗಳವಾರ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ತಡೆದು ಪ್ರತಿಭಟನೆ ನಡೆಸುವುದಾಗಿ ಘೋಷಿಸಿದರು.

ಎಕ್ಸ್ಪ್ರೆಸ್ವೇನಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದರಿಂದ, ಮಂಡ್ಯ ನಗರದ ಜಯಚಾಮರಾಜ (ಜೆಸಿ) ವೃತ್ತದಲ್ಲಿ ಸದಸ್ಯರು ಪ್ರತಿಭಟನೆ ಮುಂದುವರಿಸಿದರು. ರೈತ ಸಂಘ ಮಂಗಳವಾರ ಎಕ್ಸ್ಪ್ರೆಸ್ವೇ ನಿರ್ಗಮನ ಸ್ಥಳದ ಬಳಿ ಇರುವ ಇಂಡುವಾಳು ಗ್ರಾಮದಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿತ್ತು. ಪೊಲೀಸರು ಅನುಮತಿ ನಿರಾಕರಿಸಿದರೂ, ಮಂಡ್ಯ ತಾಲೂಕಿನ ಇಂಡುವಾಳು ಬಳಿ ರೈತರು ಜಮಾಯಿಸಿದರು.
ಹೀಗಾಗಿ ಇಂಡುವಾಳು ಬಳಿಯ ಎಕ್ಸ್ಪ್ರೆಸ್ವೇಯಲ್ಲಿ ಪೊಲೀಸರು ಭದ್ರತಾ ಕ್ರಮಗಳನ್ನು ಹೆಚ್ಚಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಮೂರು ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಇದೇ ವೇಳೆ ಬಿಜೆಪಿ ಮುಖಂಡ ಸಿಟಿ ರವಿ ಪತ್ರಿಕಾಗೋಷ್ಠಿಯಲ್ಲಿ, ಕಾಂಗ್ರೆಸ್ ಸರ್ಕಾರವು ಐಎನ್ಡಿಐಎ ಮೈತ್ರಿಕೂಟದ ಭಾಗವಾಗಿರುವ ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ಮೆಚ್ಚಿಸಲು ತಮಿಳುನಾಡಿಗೆ ನೀರು ಬಿಡುತ್ತಿದೆ ಎಂದು ಆರೋಪಿಸಿದರು.
ಸೋಮವಾರವು ಕೃಷ್ಣರಾಜಸಾಗರದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ವೃತ್ತದಲ್ಲಿ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಬೆಂಕಿ ನಂದಿಸಲು ಮುಂದಾದ ಪೊಲೀಸರ ಜೊತೆ ನೂಕಾಟ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಕಾರರು, ಸರ್ಕಾರ ಕಾವೇರಿ ಕೊಳ್ಳದ ಪ್ರದೇಶದ ರೈತರಿಗೆ ನೀರು ಕೊಡದೆ ಜಮೀನು ಒಣಗಿಸಿ ಹುರುಳಿ ಚೆಲ್ಲಿಸಲು ಮುಂದಾಗಿದೆ ಎಂದು ಕಿಡಿಕಾರಿದ್ದರು.












Click it and Unblock the Notifications