Cauvery dispute: ಮಂಡ್ಯ ಬಂದ್ಗೆ ಸಂಪೂರ್ಣ ಬೆಂಬಲ
ಮಂಡ್ಯ, ಸೆಪ್ಟೆಂಬರ್, 23: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬೇಕೆಂಬ ಸುಪ್ರೀಂ ಕೋರ್ಟ್ನ ಆದೇಶದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣ ಸಮಿತಿ ಕರೆ ನೀಡಿದ್ದ ಮಂಡ್ಯ ಬಂದ್ಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ.
ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದು, ವ್ಯಾಪಾರ ವಹಿವಾಟು ಸ್ಥಗಿತ ಗೊಂಡಿದೆ. ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿಗಳ ಬಾಗಿಲು ಮುಚ್ಚಿ ಬಂದ್ ಬೆಂಬಲಿಸಿದರು. ಬೆಳಗ್ಗೆ ತೆರೆದಿದ್ದ ಹೋಟೆಲ್ಗಳು ಬಂದ್ ಕಾವೇರುತ್ತಿದ್ದಂತೆ ಬಾಗಿಲು ಮುಚ್ಚಿದವು. ಚಲನಚಿತ್ರ ಮಂದಿರಗಳು ಬೆಳಗಿನ ಮತ್ತು ಮಧ್ಯಾಹ್ನದ ಚಿತ್ರ ಪ್ರದರ್ಶನವನ್ನು ರದ್ದು ಮಾಡಿದ್ದವು. ಸರ್ಕಾರಿ ಮತ್ತು ಖಾಸಗಿ ಬಸ್, ಟೆಂಪೋ ಸೇರಿ ಖಾಸಗಿ ವಾಹನ ಸಂಚಾರ ಸ್ಥಗಿತವಾಗಿತ್ತು.

ವಾಹನ ಸಂಚಾರ ಸ್ಥಗಿತವಾಗಿದ್ದರಿಂದ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಆಟೋ ಸಂಚಾರ ವಿರಳವಾಗಿತ್ತು, ಕೆಲವು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ತೆರೆದಿದ್ದ ಕಾಲೇಜುಗಳನ್ನು ಬಲವಂತವಾಗಿ ಮುಚ್ಚಿಸಲಾಯಿತು. ಹೀಗೆ ಬಂದ್ ಹಿನ್ನೆಲೆಯಲ್ಲಿ ರಸ್ತೆಗಳು ಬಿಕೋ ಎನ್ನುತ್ತಿದ್ದವು.
ಬೈಕ್ ಜಾಥಾ ಮೂಲಕ ಮಂಡ್ಯ ನಗರ ಸುತ್ತಿದ ಪ್ರತಿಭಟನಾಕಾರರು ಕೆಲವು ಪ್ರದೇಶಗಳಲ್ಲಿ ತೆರೆದಿದ್ದ ಅಂಗಡಿಗಳ ಬಾಗಿಲು ಮುಚ್ಚಿಸಿದರು. ಪ್ರಮುಖ ಪ್ರದೇಶವಾದ ಪೇಟೆ ಬೀದಿ, ಬೆಂಗಳೂರು -ಮೈಸೂರು ಹೆದ್ದಾರಿ, ವಿ.ವಿ ರಸ್ತೆ, ಗುತ್ತಲು ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಆರ್.ಪಿ ರಸ್ತೆ, ವಿನೋಬಾ ರಸ್ತೆ, ಕೆ.ಆರ್ ರಸ್ತೆ, ವಿವೇಕಾನಂದ ರಸ್ತೆಗಳಲ್ಲಿ ಬಂದ್ ವಾತಾವರಣ ಕಂಡುಬಂದಿತು.
ಕೊನೆಯ ಶನಿವಾರ ನಿಮಿತ್ತ ಕೇಂದ್ರ, ರಾಜ್ಯ ಸರ್ಕಾರಿ ಕಚೇರಿ, ಬ್ಯಾಂಕ್ಗಳಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳು ಹೆಚ್ಚಿರುವ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಸಾರ್ವಜನಿಕರ ಸಂಖ್ಯೆ ಕಡಿಮೆ ಪ್ರಮಾಣದಲ್ಲಿದ್ದು, ಪ್ರತಿಭಟನಾಕಾರರು ಸಹ ಅತ್ತ ಸುಳಿಯಲಿಲ್ಲ. ನ್ಯಾಯಾಲಯ ಎಂದಿನಂತೆ ಕಾರ್ಯ ಕಲಾಪ ಆರಂಭಿಸಿತ್ತಾದರೂ, ವಕೀಲರು ಕಾರ್ಯಕಲಾಪ ಬಹಿಷ್ಕರಿಸಿದರು. ಹೀಗೆ ಮಂಡ್ಯ ಬಂದ್ಗೆ ಜನಸಾಮಾನ್ಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಗರದಲ್ಲಿ ಪೊಲೀಸ್ ಬಿಗಿ ಭದ್ರತೆ ಹೆಚ್ಚಾಗಿದ್ದು, ಪ್ರಮುಖ ಆಯಾ ಕಟ್ಟಿನಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದರು.
ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಕಾವೇರಿ ಹೋರಾಟಕ್ಕೆ ಬೆಂಬಲಿಸಿ ರೈತರು, ವಿದ್ಯಾರ್ಥಿಗಳು, ವಕೀಲರು, ರಾಜಕೀಯ ಪಕ್ಷಗಳ ಕಾರ್ಯಕರ್ತರು ರೈತ ಸಂಘಟನೆಗಳು, ಕನ್ನಡಪರ, ಪ್ರಗತಿಪರ ದಲಿತ ಸಂಘಟನೆಗಳು ಸೇರಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದವು. ಬಂದ್ ಆರಂಭಗೊಂಡ ಬೆನ್ನಲ್ಲೇ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಮುಖಂಡರು ನೀರು ಬಿಡಲು ಆದೇಶದ ಮಾಡಿರುವ ಪ್ರತಿಗಳನ್ನು ಸುಟ್ಟು ಟೀ ಕಾಯಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ರೈತರು, ವಿದ್ಯಾರ್ಥಿಗಳು ಮಾನವ ಸರಪಳಿ ರಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ಹೋರಾಟ ಬೆಂಬಲಿಸಿದ ವಿದ್ಯಾರ್ಥಿಗಳ ಅಕ್ರೋಶ ಹೆಚ್ಚಾಗಿತ್ತು. ಇನ್ನು ಕಬ್ಬಿನ ಜೊಲ್ಲೆಗಳನ್ನು ಹಿಡಿದ ರೈತರು ಹೋರಾಟದಲ್ಲಿ ಭಾಗಿಯಾದರು.












Click it and Unblock the Notifications