ಕಾವೇರಿ ವಿವಾದ: ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಚಡ್ಡಿ ಮೆರವಣಿಗೆ
ಮಂಡ್ಯ, ಸೆಪ್ಟೆಂಬರ್, 06: ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ. ಅಲ್ಲದೆ ಮತ್ತೊಂದೆಡೆ ಕಾವೇರಿ ಕೊಳ್ಳದ ಜಲಾಶಯದ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪಟ್ಟಿಯಂತಹ ಚಡ್ಡಿ ಧರಿಸಿ ಖಾಲಿ ಬಿಂದಿಗೆಯೊಂದಿಗೆ ಬೀದಿಗಿಳಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಶಾಸಕರು, ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರ ವಿರುದ್ಧವೂ ಘೋಷಣೆ ಕೂಗಿದ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪರ ಕಾರ್ಯಕರ್ತರು ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವತಿಯಿಂದ ಸರ್ ಎಂ.ವಿ. ಪ್ರತಿಮೆ ಬಳಿ ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ತೆರಳಿ ಚಳವಳಿಯಲ್ಲಿ ಪಾಲ್ಗೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಾವೇರಿ ಕಣಿವೆ ಜಿಲ್ಲೆಗಳ ರೈತರ ಹಿತ ಕಾಪಾಡಲು ಒತ್ತಾಯಿಸಿದರು.
ಕಾವೇರಿ ಕೊಳ್ಳದ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು. ಈಗಾಗಲೇ ನೆರೆ ರಾಜ್ಯಕ್ಕೆ ಕೆ.ಆರ್.ಎಸ್.ನಲ್ಲಿದ್ದ ನೀರು ಹರಿದುಹೋಗಿದ್ದು, ಇದಿರಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಮಂಡ್ಯ ಜಿಲ್ಲೆಗೆ 100 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ರೈತರ ಬೆಳೆಗೆ ನೀರಿಲ್ಲದಂತೆ ಮಾಡಿರುವ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು ಎಂದು ಆಗ್ರಹಿಸಿದರು.
ಈ ವೇಳೆ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಗುತ್ತಲು ಚಂದ್ರು, ಜಯಮ್ಮ, ದರ್ಶನ್, ರಾಜೇಶ್, ನಂದೀಶ್ ಸೇರಿದಂತೆ ಮತ್ತಿತರರು ಇದ್ದರು.
ಕುಡಿಕೆಯಲ್ಲಿ ನೀರು ತುಂಬಿಟ್ಟು ವಿನೂತನ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಈಗಾಗಗಲೇ ರಾಜ್ಯಾದ್ಯಂತ ರೈತರು ಪ್ರತಿಭಟನೆ ಮಾಡುತ್ತಲೇ ಇದ್ದಾರೆ. ಅದೇ ರೀತಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದು ಕನ್ನಡಪರ ಹೋರಾಟಗಾರರು ಕುಡಿಕೆಯಲ್ಲಿ ನೀರು ತುಂಬಿಕೊಂಡು ವಿನೂತನವಾಗಿ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.
ಕನ್ನಡ ಪರ ಹೋರಾಟಗಾರರು ಚಾಮರಾಜನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಭುವನೇಶ್ವರಿ ವೃತ್ತದವರವಿಗೂ ಕುಡಿಕೆ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಇನ್ನು ಇದೇ ವೇಳೆ ಕುಡಿಕೆ ನೀರು ಕರ್ನಾಟಕಕ್ಕೆ, ಕ್ಯೂಸೆಕ್ ನೀರು ತಮಿಳುನಾಡಿಗೆ ಎಂದು ಘೋಷಣೆ ಕೂಗುವ ಮೂಲಕ ಕೇಂದ್ರ, ರಾಜ್ಯ ಮತ್ತು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕಾವೇರಿ ವಿಚಾರವಾಗಿ ಜಿಲ್ಲಾ ಕೇಂದ್ರದಲ್ಲಿ ಪ್ರತಿದಿನ ಪ್ರತಿಭಟನೆ ನಡೆಸುತ್ತಿರುವ ಕನ್ನಡ ಪರ ಸಂಘಟನೆ ಕಾರ್ಯಕರ್ತರು, ಇಂದು ರಾಷ್ಟ್ರೀಯ ಹೆದ್ದಾರಿಯ ಭುವನೇಶ್ವರಿ ವೃತ್ತದ ಬಳಿ ಕೆಲಕಾಲ ಧರಣಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications