ಕಾವೇರಿ ವಿವಾದ: ಮಂಡ್ಯದಲ್ಲಿ ಡೊಳ್ಳು ಕುಣಿತದೊಂದಿಗೆ ಕಾವೇರಿ ಹೋರಾಟ ಮುಂದುವರೆಸಿದ ಕಲಾವಿದರು
ಮಂಡ್ಯ, ಅಕ್ಟೋಬರ್, 28: ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಡೊಳ್ಳಿನ ಸದ್ದು, ಕುಣಿತದ ಮೂಲಕ ಕಾವೇರಿ ಹೋರಾಟವನ್ನು ಕಲಾವಿದರು ಮುಂದುವರಿಸಿದ್ದು ವಿಶೇಷವಾಗಿತ್ತು.
ನಗರದ ಸರ್.ಎಂ.ವಿ ಪ್ರತಿಮೆ ಎದುರು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ನಿರಂತರ ಧರಣಿ ಬೆಂಬಲಿಸಿ ಸಂತೆ ಕಸಲಗೆರೆ ಹಾಗೂ ಕಾರಸವಾಡಿ ಗ್ರಾಮದ ಜನತೆ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ನಡೆಸಿದರು. ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ರೈತ ಹಿತ ರಕ್ಷಣಾ ಸಮಿತಿಯ ಮುಖಂಡರ ಜೊತೆಗೂಡಿ ಮಾನವ ಸರಪಳಿ ರಚಿಸಿ ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಮೆರವಣಿಗೆ ಹೊರಟರು.

ಡೊಳ್ಳಿನ ಸದ್ದಿನೊಂದಿಗೆ ಹೆಜ್ಜೆ ಹಾಕಿದ ಹೋರಾಟಗಾರರು ನಿರಂತರ ಧರಣಿ ಸ್ಥಳಕ್ಕೆ ತೆರಳಿ ಕೆಲಕಾಲ ಡೊಳ್ಳು ಕುಣಿತದ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದರು. ರಾಜ್ಯದ ಜನತೆ ನೀರಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ತಂದೊಡ್ಡಿರುವ ರಾಜ್ಯ ಸರ್ಕಾರ ನಿರ್ಲಕ್ಷ್ಯತನ ಬಿಟ್ಟು ಜವಾಬ್ದಾರಿಯುತ ಹೊಣೆಗಾರಿಕೆ ನಿರ್ವಹಿಸಬೇಕು ಎಂದರು. ಕೃಷ್ಣರಾಜ ಸಾಗರದಿಂದ ನೆರೆ ರಾಜ್ಯಕ್ಕೆ ಹರಿಸುತ್ತಿರುವ ನೀರನ್ನು ಸ್ಥಗಿತ ಮಾಡಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿ ಸಂಕಷ್ಟ ಸನ್ನಿವೇಶದಲ್ಲಿ ಪರಿಹಾರ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.
ಈ ವೇಳೆ ಸಂತೆಕಸಲಗೆರೆ ಗ್ರಾಮ ಪಂಚಾಯಿತಿ ಸದಸ್ಯರಾದ ಬಸವರಾಜ್, ಸತೀಶ್, ಪಾರ್ವತಮ್ಮ, ಕಾರಸವಾಡಿ ಸುಧೀರ್ಕುಮಾರ್, ಕೆ.ರಾಮಕೃಷ್ಣ, ಡಿ.ಪ್ರಕಾಶ್, ಮಾಧು, ಡೊಳ್ಳು ಕುಣಿತ ಕಲಾವಿದ ಗಂಗಾಧರ್, ಮಮತಾ, ಲಕ್ಷ್ಮಿ, ಸಾಕಮ್ಮ, ಬೆಂಗಳೂರಿನ ಮಾನವ ಹಕ್ಕು ಸಂಘಟನೆಯ ಮುಖಂಡ, ಮೋಹನ್ರಾಜ್ ಒಡೆಯರ್, ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಸುನಂದ ಜಯರಾಂ, ಕೆ.ಬೋರಯ್ಯ, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಕನ್ನಡ ಸೇನೆ ಮಂಜುನಾಥ್, ನಾರಾಯಣ್ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕೈಗಳಿಗೆ ಸರಪಳಿ ಹಾಕಿಕೊಂಡು ವಿನೂತನ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಕಳೆದ 46 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಕೂಡ ಕೈಗಳಿಗೆ ಸರಪಳಿ ಹಾಕಿಕೊಂಡು ವಿನೂತನ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಕೈಗಳಿಗಳಿಗೆ ಸರಪಳಿ ಹಾಕಿಕೊಂಡು. ಈ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 46 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಮಂಡಳಿ ಕೈಗಗಳನ್ನು ಸರಪಳಿ ಕಟ್ಟಿ ಬಂಧಿಸಿವೆ. ಕರ್ನಾಟಕಕ್ಕೆ ಕಾವೇರಿ ನೀರು ವಿಚಾರದಲ್ಲಿ ಮೋಸ ಮಾಡಿವೆ ಎಂದು ಆರೋಪಿಸಿ ಕೈಗಳಿಗೆ ಸರಪಳಿ ಹಾಕಿಕೊಂಡು ವಿನೂತನ ಪ್ರತಿಭಟನೆ ನಡೆಸಲಾಗಿದೆ ಎಂದರು.
ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ಚಾ.ವೆಂ.ರಾಜ್ಗೋಪಾಲ್ ಮಹೇಶ್ ಗೌಡ, ಲಿಂಗರಾಜು, ತಾಂಡವಮೂರ್ತಿ, ವೀರಭದ್ರ, ರಾಜಪ್ಪ, ಮೂಡ್ಲಪುರ ಪ್ರಕಾಶ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.












Click it and Unblock the Notifications