ಡಿ. 30ರಂದು ಮಂಡ್ಯಗೆ ಅಮಿತ್ ಶಾ ಭೇಟಿ: ಅಧಿವೇಶನ ಮೊಟಕು ಸಾಧ್ಯತೆ
ಮಂಡ್ಯ, ಡಿಸೆಂಬರ್ 27 : ಡಿಸೆಂಬರ್ 30ರಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಜಿಲ್ಲೆಗೆ ಆಗಮಿಸಿ ಮದ್ದೂರಿನ ಗೆಜ್ಜಲಗೆರೆಯಲ್ಲಿಯ ಮಂಡ್ಯ ಹಾಲು ಒಕ್ಕೂಟದ ಆವರಣದಲ್ಲಿ ನಿರ್ಮಿಸಲಾಗಿರುವ ಮೆಗಾ ಡೈರಿಯನ್ನು ಉದ್ಘಾಟಿಸಲಿದ್ದಾರೆ ಎಂದು ವ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು.
ನಗರದ ಮಂಡ್ಯ ವಿ.ವಿ. ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಮತ್ತು ಸಚಿವ ನಾರಾಯಣಗೌಡರು ಬೆಳಗಾವಿಯಲ್ಲಿ ನಡೆಯುತ್ತಿದ್ದ ಅಧಿವೇಶನವನ್ನು ಬಿಟ್ಟು ಕಾರ್ಯಕ್ರಮದ ಯಶಸ್ಸಿಗಾಗಿ ಬಂದಿದ್ದೇವೆ. ಇಲ್ಲೇ ವಾಸ್ತವ್ಯ ಹೂಡಿ ಕಾರ್ಯಕ್ರಮದ ಸಿದ್ಧತೆ ನಡೆಸಿದ್ದೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಈಗಾಗಲೇ ಪಾಂಡವಪುರ ಮತ್ತು ಮದ್ದೂರಿನಲ್ಲಿ ಜನಸಂಕಲ್ಪ ಯಾತ್ರೆ ಸಮಾವೇಶವನ್ನು ನಡೆಸಿದ್ದೇವೆ. ವಿಧಾನ ಸಭಾ ಚುನಾವಣೆಯನ್ನೇ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಂಪುಟದ ಎಲ್ಲಾ ಸಚಿವರು ಕಾರ್ಯಕ್ರಮ ಭಾಗಿ ಸಾಧ್ಯತೆ
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ. ಅಮಿತ್ ಶಾ ಭಾಗವಹಿಸುವ ಸಭೆಯನ್ನು ಯಶಸ್ವಿಗೊಳಿಸಲು ಸಕಲ ಸಿದ್ಧತೆಗಳನ್ನೂ ನಡೆಸಲಾಗಿದೆ. ಅದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲವೂ ಸುಸೂತ್ರವಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಸಂಪುಟದ ಎಲ್ಲಾ ಸಚಿವರು ಕಾರ್ಯಕ್ರಮ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಅಮಿತ್ ಶಾ ಕಾರ್ಯಕ್ರಮ: ಅಧಿವೇಶನ ಮೊಟಕು ಸಾಧ್ಯತೆ
ಡಿಸೆಂಬರ್ 30ಕ್ಕೆ ಅಧಿವೇಶನ ಮುಗಿಯಬೇಕಿದ್ದು, ಹಲವಾರು ಕಾರಣಗಳಿಂದಾಗಿ ನಾಳೆ ಅಥವಾ ನಾಳಿದ್ದು ಅಧಿವೇಶನ ಮುಗಿಯುವ ಸಂಭವವಿದೆ. ಅಧಿವೇಶನದಲ್ಲಿ ಹಲವಾರು ವಿಚಾರಗಳು ಚರ್ಚೆಯಾಗಿವೆ. ಸರ್ಕಾರವೂ ಸಮರ್ಪಕವಾಗಿ ಉತ್ತರ ನೀಡಿದೆ. ಮುಖ್ಯಮಂತ್ರಿಗಳೂ ಸದನದಲ್ಲಿ ಪ್ರಸ್ತಾಪಿಸಿ ಮೊಟಕುಗೊಳಿಸುವ ಸಾಧ್ಯತೆಗಳಿವೆ ಎಂದು ತಿಳಿಸಿದರು.
ಇನ್ನು ಜಿಲ್ಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭವಾಗಿದೆ. ಈಗಾಗಲೇ ಸರ್ಕಾರ 15 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಶೀಘ್ರದಲ್ಲೇ ಎಲ್ಲಾ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.

ರೈತರ ಬೇಡಿಕೆಗಳ ಕುರಿತಂತೆ ಸಿಎಂ ಗಮನಕ್ಕೆ ತರುತ್ತೇವೆ
ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ದರ ನೀಡುವಂತೆ ಒತ್ತಾಯಿಸಿ ರೈತರು 51 ದಿನಗಳಿಂದಲೂ ಚಳವಳಿ ನಡೆಸುತ್ತಿದ್ದಾರೆ. ನಾನು ಮತ್ತು ಸಚಿವ ನಾರಾಯಣಗೌಡ ಅವರು ರೈತರ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ರೈತರ ಮನವೊಲಿಸುತ್ತೇನೆ. ಕೇಂದ್ರ ಸರ್ಕಾರ ಎಮ್ಆರ್ಪಿ ನಿಗದಿ ಮಾಡಿಲ್ಲ. ರಾಜ್ಯ ಸರ್ಕಾರ 50 ರೂಪಾಯಿ ಹೆಚ್ಚಳ ಮಾಡಿದೆ. ರೈತರ ಬೇಡಿಕೆಗಳ ಕುರಿತಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.

ಆಸ್ಪತ್ರೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ
ಇನ್ನು ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ಸರ್ಕಾರದಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಕೋವಿಡ್ ಪ್ರಕರಣಗಳು ಹೆಚ್ಚದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಆಸ್ಪತ್ರೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ. ಅಗತ್ಯ ಔಷಧೋಪಚಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲ ಸಚಿವ ಕೆ.ಸಿ. ನಾರಾಯಣಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್, ರಾಜ್ಯ ಕಾರ್ಯಯಕಾರಿಣಿ ಸದಸ್ಯ ಡಾ. ಸಿದ್ದರಾಮಯ್ಯ, ಮುಡ ಅಧ್ಯಕ್ಷ ಕೆ. ಶ್ರೀನಿವಾಸ್, ಮುಖಂಡರಾದ ಎಸ್. ಸಚ್ಚಿದಾನಂದ, ಅಶೋಕ್ ಜಯರಾಂ ಭಾಗಿಯಾಗಿದ್ದರು.












Click it and Unblock the Notifications