ನಾಳೆ ಮಂಡ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ: ಬೃಹತ್ ಸಮಾವೇಶಕ್ಕೆ ಸಿದ್ಧತೆ
ಭಾರತ್ ಜೋಡೋ ಯಾತ್ರೆ ಬಳಿಕ ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಅವರು ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಹಿನ್ನೆಲೆಯಲ್ಲಿ ಬುಧವಾರ (ಏ.17) ಮಂಡ್ಯ ನಗರಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ನಗರದ ಮಂಡ್ಯ ವಿಶ್ವವಿದ್ಯಾಲಯದ ಮೈದಾನದಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಗೆ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಬಹಿರಂಗ ಪ್ರಚಾರ ಸಭೆ ನಡೆಯಲಿದ್ದು, ರಾಹುಲ್ ಗಾಂಧಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ರಾಹುಲ್ಗಾಂಧಿ ಅವರು ಹೆಲಿಕಾಪ್ಟರ್ ಮೂಲಕ ನಗರದ ಪಿಇಎಸ್ ಕ್ರೀಡಾಂಗಣದ ಹೆಲಿಪ್ಯಾಡ್ಗೆ ಮಧ್ಯಾಹ್ನ 1 ಗಂಟೆಗೆ ಬರಲಿದ್ದಾರೆ. ಅಲ್ಲಿಂದ ಕಾರಿನಲ್ಲಿ ರಸ್ತೆ ಮಾರ್ಗವಾಗಿ ಮಂಡ್ಯ ವಿವಿ ಆವರಣಕ್ಕೆ ಆಗಮಿಸಿ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗಿಯಾಗುವರು. ಎರಡು ಗಂಟೆ ನಡೆಯುವ ಕರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಕೋಲಾರಕ್ಕೆ ನಿರ್ಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಬಹಿರಂಗ ಸಭೆಯಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪಾಲ್ಗೊಳ್ಳಲಿದ್ದು, ಮೈಸೂರು ಅಭ್ಯರ್ಥಿ ಎಂ.ಲಕ್ಷ್ಮಣ್, ಚಾಮರಾಜನಗರ ಸುನೀಲ್ ಬೋಸ್, ಹಾಸನ ಕ್ಷೇತ್ರದ ಶ್ರೇಯಸ್ ಪಟೇಲ್ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
50 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ
ಬಹಿರಂಗ ಸಭೆಗೆ ಮಂಡ್ಯ ಲೋಕಸಭೆಯ 8 ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 50 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸುಮಾರು 30 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಮೈತ್ರಿಯಿಂದ ನಷ್ಟವಿಲ್ಲ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಕಾಂಗ್ರೆಸ್ಗೆ ಯಾವುದೇ ನಷ್ಟವಿಲ್ಲ. ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕರ ವಿರುದ್ಧ ಹರಿಹಾಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಪರಸ್ಪರ ಅಪ್ಪಿಕೊಂಡಿದ್ದಾರೆ. ಇಂದು ಮೈತ್ರಿ ಮಾಡಿಕೊಂಡಿದ್ದಾರೆ, ಇದರ ಬದಲು ಎರಡೂ ಪಕ್ಷಗಳು ವಿಲೀನವಾಗುವುದು ಒಳ್ಳೆಯದು ಎಂದರು.
ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಎಚ್.ಡಿ. ಕುಮಾರಸ್ವಾಮಿ ತಪ್ಪು ಮಾಡಿಲ್ಲ ಅನ್ನುತ್ತಾರೆ ಮತ್ತೆ ಯಾಕೆ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದಕ್ಕೆ ಅವರು ವಿಷಾದವನ್ನೂ ಕೇಳಿದ್ದಾರೆ. ಆದರೆ, ಬಿಜೆಪಿಯವರು ಕುಮಾರಸ್ವಾಮಿ ಅವರು ಮಹಿಳೆಯರನ್ನು ಟೀಕಿಸಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ನಾವೇನಾದರೂ ಹೇಳಿದ್ದರೆ ಸುಮ್ಮನಿರುತ್ತಿದ್ದರೆ? ಎಂದು ಪ್ರಶ್ನಿಸಿದರು.
ಸಂಸದೆ ಸುಮಲತಾ ಅಂಬರೀಶ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಾರದಿರುವುದು, ತಟಸ್ಥವಾಗಿ ಉಳಿದುಕೊಂಡಿರುವುದು, ಅವರ ಪಕ್ಷಕ್ಕೆ ಸೇರಿದ ವಿಚಾರ, ಅದರ ಬಗ್ಗೆ ನನಗೇನು ಮಾಹಿತಿ ಇಲ್ಲ ಎಂದರು.












Click it and Unblock the Notifications