ಕೆಆರ್ಎಸ್ ಭರ್ತಿ: ಜುಲೈ 20ಕ್ಕೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಿರುವ ಸಿಂಎಂ ಬೊಮ್ಮಾಯಿ
ಮಂಡ್ಯ, ಜುಲೈ 18 : ಜಿಲ್ಲೆಯ ರೈತರ ಜೀವನಾಡಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ 20ರಂದು ಕಾವೇರಿಗೆ ಬಾಗಿನ ಅರ್ಪಿಸಲಿದ್ದಾರೆ. ಅದೇ ದಿನ ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೂ ಬಾಗಿನ ಅರ್ಪಿಸಲಿದ್ದಾರೆ.
ಜುಲೈ 20ರಂದು ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಕೆ.ಆರ್.ಎಸ್. ಹೆಲಿಪ್ಯಾಡ್ಗೆ ಬೆಳಗ್ಗೆ 11.55ಕ್ಕೆ ಆಗಮಿಸುವ ಮುಖ್ಯಮಂತ್ರಿ , 12 ಗಂಟೆಗೆ ಕನ್ನಂಬಾಡಿ ಅಣೆಕಟ್ಟೆಯ ಕೆಳ ಭಾಗದಲ್ಲಿರುವ ಕಾವೇರಿ ಮಾತೆಯ ಪ್ರತಿಮೆಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಕಾವೇರಿ ನದಿಗೆ ಬಾಗಿನ ಅರ್ಪಿಸಲಿದ್ದಾರೆ.
ಮಧ್ಯಾಹ್ನ 1.15 ಗಂಟೆಗೆ ಕೆ.ಆರ್.ಎಸ್. ಸಾಗರದ ರಸ್ತೆ ಮಾರ್ಗವಾಗಿ ಕೆಆರ್ಎಸ್ ಹೆಲಿಪ್ಯಾಡ್ಗೆ ಧಾವಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವಧಿಗೂ ಮುನ್ನವೇ ಭರ್ತಿ
ಸಾಮಾನ್ಯವಾಗಿ ಕೃಷ್ಣರಾಜಸಾಗರ ಜಲಾಶಯ ಆಗಸ್ಟ್ , ಸೆಪ್ಟಂಬರ್ ತಿಂಗಳಲ್ಲಿ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಅವಧಿಗೂ ಮುನ್ನವೇ ಭರ್ತಿಯಾಗಿರುವುದು ರೈತರಲ್ಲಿ ಸಂತಸ ಮೂಡಿದೆ. ಕಳೆದ ಬಾರಿ ಆಗಸ್ಟ್ ತಿಂಗಳಲ್ಲಿ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ನಲ್ಲೇ ಕಾವೇರಿಗೆ ಬಾಗಿನ ಅರ್ಪಿಸಿದ್ದರು. ಇದೇ ಮೊದಲ ಬಾರಿಗೆ ಜುಲೈ ತಿಂಗಳಲ್ಲೇ ಕನ್ನಂಬಾಡಿ ಅಣೆಕಟ್ಟೆ ಭರ್ತಿಯಾಗುತ್ತಿದೆ.
123.36 ಅಡಿ ನೀರು
ಕೃಷ್ಣರಾಜಸಾಗರ ಜಲಾಶಯದಲ್ಲಿ ಸದ್ಯ 123.36 ಅಡಿ ನೀರು ಸಂಗ್ರಹವಾಗಿದೆ. ಅಣೆಕಟ್ಟೆಯ ಗರಿಷ್ಟ ಮಟ್ಟ 124.80 ಆಗಿದ್ದು, ನಾಳೆಯೊಳಗೆ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆಗಳಿವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವ ಕಾರಣ ಜಲಾಶಯಕ್ಕೆ 77,586 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಜಲಾಶಯದಿಂದ 79,594 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.












Click it and Unblock the Notifications