KRS Dam: ತುಂಬಿದ ಕೆಆರ್ಎಸ್ ಜಲಾಶಯ; ಇಂದು ಬಾಗಿನ ಅರ್ಪಿಸಲಿರುವ ಸಿಎಂ ಸಿದ್ದರಾಮಯ್ಯ
ರೈತರ ಜೀವನಾಡಿ, ಕೃಷ್ಣರಾಜಸಾಗರ ಹಾಗೂ ಕಬಿನಿ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೋಮವಾರ) ಬಾಗಿನ ಅರ್ಪಿಸಲಿದ್ದಾರೆ.
ಬೆಳಗ್ಗೆ 10.30ಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಆರ್ಎಸ್ನಲ್ಲಿರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಬಳಿಕ ಬೆಳಗ್ಗೆ 11 ಗಂಟೆಗೆ ಬಾಗಿನ ಅರ್ಪಿಸುವರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿ ಒಂದು ಬಾರಿ ಸೇರಿದಂತೆ 3ನೇ ಬಾರಿಗೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಿದ್ದಾರೆ. ಕಳೆದ ವರ್ಷ ಭೀಕರ ಬರಗಾಲ ಎದುರಾದ ಕಾರಣ ಕೃಷ್ಣರಾಜಸಾಗರ ಜಲಾಶಯದ ಭರ್ತಿಯಾಗದ ಕಾರಣ ಬಾಗಿನ ಅರ್ಪಿಸಲು ಸಾಧ್ಯವಾಗಿರಲಿಲ್ಲ.

2013ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಸಿದ್ದರಾಮಯ್ಯ ಅವರಿಗೆ ಆಗಲೂ ಬಾಗಿನ ಅರ್ಪಿಸುವ ಭಾಗ್ಯ ಒದಗಿ ಬಂದಿರಲಿಲ್ಲ. 2014ರಲ್ಲಿ 123 ಅಡಿಗೆ ತಲುಪಿದ್ದ ಕೃಷ್ಣರಾಜಸಾಗರ ಭರ್ತಿಯಾಗಲಿಲ್ಲ. ಬಳಿಕ ಹೇಮಾವತಿ ಜಲಾಶಯದಿಂದ ಒಂದು ಅಡಿಗೂ ಹೆಚ್ಚಿನ ಪ್ರಮಾಣದ ನೀರನ್ನು ಹರಿಸಿ ಕನ್ನಂಬಾಡಿ ಅಣೆಕಟ್ಟೆ ತುಂಬಿಸಿ ಬಾಗಿನ ಅರ್ಪಿಸಿದ್ದರು.
ನಂತರ ಕೃಷ್ಣರಾಜಸಾಗರ ಜಲಾಶಯ ತುಂಬದ ಹಿನ್ನೆಲೆಯಲ್ಲಿ 2015, 16, 17ರಲ್ಲೂ ಬಾಗಿನ ಅರ್ಪಿಸಲು ಸಿದ್ದರಾಮಯ್ಯನವರಿಗೆ ಸಾಧ್ಯವಾಗಲಿಲ್ಲ. ಅವರು ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರೂ ಕೇವಲ ಎರಡು ಬಾರಿ ಮಾತ್ರ ಬಾಗಿನ ಅರ್ಪಿಸಲು ಸಾಧ್ಯವಾಗಿತ್ತು.
ಜೆ.ಎಚ್. ಪಟೇಲ್ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿತ್ತು. ಆ ಸಂದರ್ಭದಲ್ಲಿ ಕಾರಣಾಂತರಗಳಿಂದ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಬರಲಾಗಿರಲಿಲ್ಲ. ಅಂದು ಉಪ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರೇ ಬಾಗಿನ ಅರ್ಪಿಸಿದ್ದು ವಿಶೇಷವಾಗಿತ್ತು.
1979ರಿಂದ ಸಂಪ್ರದಾಯ ಆರಂಭ
ಕಾವೇರಿ ಒಡಲು ತುಂಬಿದ ಕನ್ನಂಬಾಡಿ ಅಣೆಕಟ್ಟೆಗೆ ಬಾಗಿನ ಅರ್ಪಿಸುವ ಸಂಪ್ರದಾಯವನ್ನು ಡಿ. ದೇವರಾಜ ಅರಸು ಅವರು ಪ್ರಾರಂಭಿಸಿದರು. 1979ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರು ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದರು.
1980ರಲ್ಲಿ ಮುಖ್ಯಮಂತ್ರಿಯಾದ ಡಿ. ಗುಂಡೂರಾವ್ ಅವರು ಈ ಪರಂಪರೆಯನ್ನು ಮುಂದುವರಿಸಿದರು. ನಂತರ ಎರಡು ಬಾರಿ ರಾಮಕೃಷ್ಣ ಹೆಗಡೆ, ಎಂ. ವೀರಪ್ಪ ಮೊಯ್ಲಿ, ಎಸ್.ಎಂ. ಕೃಷ್ಣ, ಎನ್. ಧರ್ಮಸಿಂಗ್, ವೀರೇಂದ್ರಪಾಟೀಲ್, ಎಸ್. ಬಂಗಾರಪ್ಪ, ಎಚ್.ಡಿ. ದೇವೇಗೌಡ, ಜೆ.ಎಚ್. ಪಟೇಲ್, ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಎಚ್.ಡಿ. ಕುಮಾರಸ್ವಾಮಿ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಹಾಗೂ 1988ರಲ್ಲಿ ರಾಜ್ಯಪಾಲರಾಗಿದ್ದ ಪಿ. ವೆಂಕಟಸುಬ್ಬಯ್ಯ ಅವರೂ ಸಹ ಬಾಗೀನ ಸಲ್ಲಿಸಿದವರಾಗಿದ್ದಾರೆ.
ಜಿಲ್ಲಾಡಳಿತದಿಂದ ಸಿದ್ಧತೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಬಾಗಿನ ಅರ್ಪಿಸುವ ಸ್ಥಳದಲ್ಲಿ ಕಟಕಟೆಗಳನ್ನು ಕಟ್ಟಲಾಗಿದೆ. ಶಾಮಿಯಾನ ಹಾಕಿ ತಳಿರು ತೋರಣಗಳಿಂದ ಸಿಂಗರಿಸಲಾಗಿದೆ.
ಶ್ರೀರಂಗಪಟ್ಟಣದ ಶಾಶ್ವತಿ ಧಾರ್ಮಿಕ ಕ್ರಿಯಾ ಸಮಿತಿ ಅಧ್ಯಕ್ಷ ಡಾ. ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದ ವೈದಿಕರ ತಂಡ ಈಗಾಗಲೇ ಪೂಜಾ ಹಾಗೂ ಬಾಗಿನದ ಸಾಮಗ್ರಿಗಳನ್ನು ಸಿದ್ಧಪಡಿಸಿದೆ.
ಜಲಾಶಯದ ಕೆಳ ಭಾಗದಲ್ಲಿರುವ ಕಾವೇರಿ ಮಾತೆ ಪ್ರತಿಮೆ ಬಳಿ ವಿಶೇಷ ಪೂಜೆ ಸಲ್ಲಿಸಲು ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಲಾಗಿದೆ. ಪೂಜಾ ಸ್ಥಳವನ್ನು ತಳಿರು ತೋರಣ ಹಾಗೂ ವಿಶೇಷ ಹೂವುಗಳಿಂದ ಅಲಂಕರಿಸಲಾಗಿದೆ.
ಮುಖ್ಯಮಂತ್ರಿ ಹಾಗೂ ಸಂಪುಟ ಸಹೋದ್ಯೋಗಿಗಳನ್ನು ಹೊರತುಪಡಿಸಿ ಕಾರ್ಯಕರ್ತರು ಮತ್ತು ಇತರರಿಗೆ ಅಣೆಕಟ್ಟೆಯ ಮೇಲ್ಬಾಗಕ್ಕೆ ತೆರಳುವುದನ್ನು ನಿಷೇಧಿಸಲಾಗಿದೆ.












Click it and Unblock the Notifications