ಅರ್ಕೇಶ್ವರ ದೇವಸ್ಥಾನದಲ್ಲಿ ಮೂವರ ಹತ್ಯೆ ಪ್ರಕರಣ: 5 ಲಕ್ಷ ಪರಿಹಾರ ಘೋಷಣೆ
ಮಂಡ್ಯ, ಸೆಪ್ಟೆಂಬರ್ 11: ಮಂಡ್ಯ ಜಿಲ್ಲೆಯ ಗುತ್ತಲಿನ ಅರ್ಕೇಶ್ವರ ದೇವಸ್ಥಾನದಲ್ಲಿ ಮೂವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಅವರು ಐದು ಲಕ್ಷ ರೂಪಾಯಿ ಪರಿಹಾರ ಹಣವನ್ನು ಘೋಷಿಸಿದ್ದಾರೆ.
Recommended Video
ಅರ್ಕೇಶ್ವರ ದೇವಾಲಯದಲ್ಲಿ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿತ್ತು. ದೇಗುಲದಲ್ಲಿ ಮಲಗಿದ್ದ, ಅರ್ಚಕರ ಮಗ ಆನಂದ್ (42) ಮತ್ತು ಕಾವಲುಗಾರರಾದ ಗಣೇಶ್ (55) ಮತ್ತು ಪ್ರಕಾಶ್ (60) ಎಂಬುವರನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.
ಮಂಡ್ಯದ ದೇವಸ್ಥಾನದಲ್ಲಿ ಮೂವರ ಬರ್ಬರ ಹತ್ಯೆ!
ದೇಗುಲದ ಹುಂಡಿ ಕಳ್ಳತನಕ್ಕೆ ಮೂವರನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ದೇವಾಲಯದಲ್ಲಿ ಕಳ್ಳತನ ನಡೆಸುವ ತಂಡದಿಂದ ವ್ಯವಸ್ಥಿತವಾಗಿ ದುಷ್ಕೃತ್ಯ ನಡೆದಿರುವ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಶಾಸಕ ಎಂ.ಶ್ರೀನಿವಾಸ್, ಎಸ್ಪಿ ಕೆ.ಪರಶುರಾಮ್, ಎಎಸ್ಪಿ ಧನಂಜಯ್ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶ್ವಾನ ದಳ, ಬೆರಳಚ್ಚು ತಜ್ಞರೂ ಪರಿಶೀಲನೆ ಮುಂದುವರೆಸಿದ್ದಾರೆ.
ಸ್ಥಳಕ್ಕೆ ಸಂಸದೆ ಸುಮಲತಾ ಅಂಬರೀಶ್, ಡಿಸಿ ಡಾ.ಎಂ.ವಿ.ವೆಂಕಟೇಶ್ ಭೇಟಿ ನೀಡಿ ಅಧಿಕಾರಿಗಳು, ಕುಟುಂಬದವರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಘಟನೆ ಸಂಬಂಧ ಜಿಲ್ಲಾ ಪೊಲಿಸ್ ವರಿಷ್ಟಾಧಿಕಾರಿ ಜೊತೆ ಚರ್ಚಿಸಿದ್ದು, ತಕ್ಷಣ ಘಟನೆಗೆ ಕಾರಣರಾದವರನ್ನು ಬಂಧಿಸುವಂತೆ ಸೂಚಿಸಿದ್ದಾರೆ.
ಈ ಹತ್ಯೆ ಪ್ರಕರಣಕ್ಕೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಖೇದ ವ್ಯಕ್ತಪಡಿಸಿದ್ದಾರೆ. ಮೂವರನ್ನು ಹತ್ಯೆ ಮಾಡಿ ಹುಂಡಿ ದೋಚಿಕೊಂಡು ಹೋಗಿದ್ದಾರೆ. ಇದು ಅತ್ಯಂತ ಹೇಯ ಕೃತ್ಯ, ಸರ್ಕಾರ ಈ ಘಟನೆಯನ್ನು ಖಂಡಿಸುತ್ತದೆ ಎಂದು ಹೇಳಿದ್ದಾರೆ.
ಆರೋಪಿಗಳು ಎಲ್ಲೇ ಅಡಗಿದ್ದರೂ ಅವರನ್ನು ಬಂಧಿಸುತ್ತೇವೆ. ಗೃಹ ಸಚಿವರು ಈ ಬಗ್ಗೆ ಭರವಸೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಗಮನಕ್ಕೂ ಈ ವಿಚಾರ ಬಂದಿದೆ. ಸಂತ್ರಸ್ತ ಕುಟುಂಬಗಳಿಗೆ ತಲಾ ಐದು ಲಕ್ಷ ಪರಿಹಾರ ನೀಡಲು ಹೇಳಿದ್ದಾರೆ. ಮೃತ ಕುಟುಂಬಗಳಿಗೆ ಪರಿಹಾರ ಘೋಷಿಸುತ್ತೇವೆ. ನಾಳೆ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.