ಮುಂಬೈನಿಂದ ಮಂಡ್ಯಕ್ಕೆ ಬರುವವರಿಗೆ ಪ್ರವೇಶ ಬಂದ್
ಮಂಡ್ಯ, ಮೇ 23: ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಲು ಮುಂಬೈನಿಂದ ಬಂದ ವಲಸಿಗರೇ ಕಾರಣ ಎನ್ನುವ ಮಾತು ಕೇಳಿಬಂದಿದ್ದು, ಇದೀಗ ಹೆಚ್ಚುತ್ತಿರುವ ಸೋಂಕು ತಡೆಯುವ ಸಲುವಾಗಿ ಮುಂಬೈನಿಂದ ಜಿಲ್ಲೆಗೆ ಪ್ರವೇಶ ಪಡೆಯುವುದನ್ನು ನಿರ್ಬಂಧಿಸಲಾಗಿದೆ.
Recommended Video
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರಿಗೆ ಈ ನಿರ್ದೇಶನ ನೀಡಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಮಾಹಿತಿ ನೀಡಿದ್ದು, ಈ ಸಂದರ್ಭ ಮುಂಬೈನಿಂದ ವಲಸೆ ಬರುತ್ತಿರುವವರಿಂದಲೇ ಸೋಂಕು ಹೆಚ್ಚಳವಾಗಲು ಕಾರಣ ಎಂಬ ವಿಚಾರವನ್ನು ತಿಳಿಸಿದ್ದಾರೆ. ಅಲ್ಲದೆ ಒಟ್ಟು ಪ್ರಕರಣಗಳಲ್ಲಿ ಸುಮಾರು 190ಕ್ಕೂ ಹೆಚ್ಚು ಪ್ರಕರಣಗಳು ಮುಂಬೈನಿಂದಲೇ ಬಂದವರಲ್ಲಿ ಕಾಣಿಸಿಕೊಂಡಿರುವುದನ್ನು ಸಿಎಂ ಗಮನಕ್ಕೆ ತಂದಿದ್ದಾರೆ. ಈ ವೇಳೆ ಮುಂಬೈ ವಲಸಿಗರ ನಿರ್ಬಂಧಕ್ಕೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ.
ಕೊರೊನಾ ಪರೀಕ್ಷೆಗೆ ಲ್ಯಾಬ್ ವ್ಯವಸ್ಥೆ, ಬೆಡ್ ವ್ಯವಸ್ಥೆ, ಕೋವಿಡ್ ಸೆಂಟರ್, ಕೋವಿಡ್ ಕಮ್ಯೂನಿಟಿ ಹೆಲ್ತ್ ಸೆಂಟರ್ ಹಾಗೂ ಕ್ವಾರಂಟೈನ್ ಸೆಂಟರ್ಗಳ ಕುರಿತು ಜಿಲ್ಲಾಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದ್ದಾರೆ.
ಕೊರೊನಾ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಣದಲ್ಲಿಡುವ ಸಲುವಾಗಿ ಪ್ರತಿ ಗ್ರಾಮಕ್ಕೂ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅವರ ಜೊತೆ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ, ಉಸಿರಾಟದ ತೊಂದರೆ ಸೇರಿದಂತೆ ಇನ್ನಿತರೆ ರೋಗಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡುವಂತೆ ತಿಳಿಸಿರುವುದಾಗಿ ಹೇಳಿದರು.












Click it and Unblock the Notifications