ಲಂಚಕ್ಕೆ ಬೇಡಿಕೆ ಬಗ್ಗೆ ಸಾರ್ವಜನಿಕರಿಂದ ದೂರು: ಅಧಿಕಾರಿಗಳಿಗೆ ಕೃಷ್ಣಬೈರೇಗೌಡ ಎಚ್ಚರಿಕೆ!
ಮಂಡ್ಯ ಜನವರಿ 19: ಉಪ ನೋಂದಣಿ (ಸಬ್ ರಿಜಿಸ್ಟ್ರಾರ್) ಕಚೇರಿಗಳ ಸುಧಾರಣೆಗೆ ಕಳೆದ ಆರು ತಿಂಗಳಿನಿಂದ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದರೂ ಫೀಲ್ಡ್ನಲ್ಲಿ ಏನೂ ಕಾಣಿಸುತ್ತಿಲ್ಲ. ದಲ್ಲಾಳಿಗಳ ಹಾವಳಿ ಲಂಚಾವತಾರ ಕೊನೆಯಾಗಿಲ್ಲ ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ಪ್ರಶ್ನಿಸಿದರು.
ಬುಧವಾರ ಮದ್ದೂರು ತಾಲೂಕಿನ ಉಪ ನೋಂದಣಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ಬೆನ್ನಿಗೆ ಗುರುವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಅವರು ಸಂಬಂಧಿತ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.

"ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಜನರನ್ನು ಅನಗತ್ಯವಾಗಿ ಕಾಯಿಸುವ ಮೂಲಕ ಶೋಷಣೆಗೊಳಪಡಿಸುವುದು ಹಾಗೂ ದಲ್ಲಾಳಿಗಳ ಮೂಲಕ ಲಂಚಕ್ಕೆ ಬೇಡಿಕೆ ಇಡುವ ಪ್ರಕರಣಗಳಿಗೆ ಇತಿಶ್ರೀ ಹಾಡುವ ಕಾರಣಕ್ಕೆ ಕಾವೇರಿ-2 ತಂತ್ರಾಂಶ ಅಭಿವೃದ್ಧಿಗೊಳಿಸಲಾಗಿತ್ತು. ಕಳೆದ ಆರು ತಿಂಗಳಿನಿಂದ ಸತತವಾಗಿ ಸಾಕಷ್ಟು ಸುಧಾರಣಾ ಕ್ರಮಗಳನ್ನೂ ಜಾರಿಗೆ ತರಲಾಗುತ್ತಿದೆ. ಆದರೆ, ನಾವಿಲ್ಲಿ ಕಚೇರಿಯಲ್ಲಿ ಚರ್ಚಿಸುವ-ಸೂಚಿಸುವ ಯಾವ ಯೋಜನೆಯೂ ವಾಸ್ತವದಲ್ಲಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳ್ಳುವುದಿಲ್ಲ. ಪರಿಣಾಮ ಜನರ ಬವಣೆಯೂ ತಪ್ಪಿದ್ದಲ್ಲ" ಎಂದು ಅವರು ಅಸಮಾಧಾನ ಹೊರಹಾಕಿದರು.
ಸಾರ್ವಜನಿಕರು ಆಸ್ತಿ ನೋಂದಣಿಗೆ ಕಾವೇರಿ ತಂತ್ರಾಂಶದಲ್ಲಿ ಸಮಯವನ್ನು ನಿಗದಿಪಡಿಸಿಕೊಳ್ಳಬಹುದು. ದಾಖಲೆ ಸರಿಯಾಗಿದ್ದರೆ ಗರಿಷ್ಠ 30 ನಿಮಿಷದಲ್ಲಿ ಆಸ್ತಿ ನೋಂದಣಿ ಮುಗಿಯುತ್ತದೆ. ಆದರೆ, ಈ ವ್ಯವಸ್ಥೆಯನ್ನು ಬಹುತೇಕ ಕಚೇರಿಗಳಲ್ಲಿ ಅಧಿಕಾರಿಗಳೇ ಬಳಸುತ್ತಿಲ್ಲ. ಪರಿಣಾಮ ಜನರ ಕಚೇರಿಗೆ ಬಂದು ಕಾಯುವುದು ತಪ್ಪುತ್ತಿಲ್ಲ. ಈ ನಡುವೆ ದಲ್ಲಾಳಿಗಳ ಮೂಲಕ ಲಂಚಕ್ಕೆ ಬೇಡಿಕೆ ಇಡುತ್ತಿರುವ ಪ್ರಕರಣಗಳನ್ನೂ ನಿಯಂತ್ರಿಸಲಾಗುತ್ತಿಲ್ಲ. ಮದ್ದೂರಿನ ಉಪ ನೋಂದಣಿ ಕಚೇರಿಯಲ್ಲಿ ಇಂತಹ ಘಟನೆಗೆ ಸ್ವತಃ ನಾನೇ ಸಾಕ್ಷಿಯಾಗಿದ್ದೇನೆ ಎಂದು ಆಕ್ರೋಶ ಹೊರಹಾಕಿದರು.
ಇಲ್ಲಿ ನಾವು ಮಾತಾಡ್ತಾ ಇರೋದೆ ಒಂದು ಫೀಲ್ಡ್ನಲ್ಲಿ ನಡೀತಾ ಇರೋದೆ ಮತ್ತೊಂದು. ಹೀಗಾದ್ರೆ ವ್ಯವಸ್ಥೆ ಬದಲಾಗಲ್ಲ. ನಾವು ಮಾಡುತ್ತಿರುವ ಸುಧಾರಣಾ ಕೆಲಸ ಜನರಿಗೆ ತಲುಪಲ್ಲ. ಜನರಲ್ಲಿ ಇಲಾಖೆ ಮೇಲೆ ಕಿಂಚಿತ್ತೂ ಭರವಸೆ ಮೂಡಿಸಲಾಗಲ್ಲ. ಹೀಗಾಗಿ ಇಲಾಖೆಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ತಿಳಿಸಿದರು.

ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸುತ್ತಿಲ್ಲ. ಆಸ್ತಿ ನೋಂದಣಿ ತಡವಾಗಲು ಇದೂ ಒಂದು ಕಾರಣ. ಹೀಗಾಗಿ ಪ್ರತೀ ಉಪ ನೋಂದಣಿ ಕಚೇರಿಯಲ್ಲೂ ಬಯೋ ಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಬೇಕು. ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸುವಂತೆ ನೋಡಿಕೊಳ್ಳಬೇಕು. ದಲ್ಲಾಳಿಗಳ ಹಾವಳಿಗೂ ಕಡಿವಾಣ ಹಾಕಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಸಭೆಯಲ್ಲಿ ಕರ್ನಾಟಕ ನೋಂದಣಿ ಮತ್ತು ಮುದ್ರಾಂಕ ಕಾಯ್ದೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸಿ ಮುಂದಿನ ಅಧಿವೇಶನದಲ್ಲಿ ಮಂಡಿಸುವ ಬಗ್ಗೆಯೂ ಚರ್ಚಿಸಲಾಯಿತು. ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ವಿ. ಮಹೇಶ್, ನೋಂದಣಿ ಮಹಾಪರಿವೀಕ್ಷಕರಾದ ಡಾ| ಬಿ.ಆರ್. ಮಮತಾ ಹಾಗೂ ಸಹಾಯಕ ನೋಂದಣಿ ಮಹಾಪರಿವೀಕ್ಷರಾದ ಹೆಚ್. ಎಲ್. ಪ್ರಭಾಕರ್ ಉಪಸ್ಥಿತರಿದ್ದರು.
ಮದ್ದೂರು ಉಪ ನೋಂದಣಿ ಕಚೇರಿ ಕಾರ್ಯವೈಖರಿಗೆ ಅಸಮಾಧಾನ
ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಮದ್ದೂರು ತಾಲೂಕಿನ ಉಪ ನೋಂದಣಾಧಿಕಾರಿಗಳ ಕಚೇರಿಗೆ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ ನೋಂದಣಾಧಿಕಾರಿ ಕಚೇರಿಯಲ್ಲೇ ಇರಲಿಲ್ಲ. ಸಾರ್ವಜನಿಕರು ತಮ್ಮ ಆಸ್ತಿ ನೋಂದಣಿಗಾಗಿ ಅಧಿಕಾರಿಯ ದಾರಿ ಕಾಯುತ್ತಾ ಕುಳಿತಿದ್ದರು. ಈ ವೇಳೆ ಸಚಿವರನ್ನು ನೋಡುತ್ತಿದ್ದಂತೆ ಜನ ತಮ್ಮ ಸಂಕಷ್ಟುವನ್ನು ಹೇಳಿಕೊಂಡರು. ದಲ್ಲಾಳಿಗಳ ಮೂಲಕ ಉಪ ನೋಂದಣಾಧಿಕಾರಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಲಂಚ ನೀಡದಿದ್ದರೆ ಆಸ್ತಿ ನೋಂದಣಿಯೇ ಮಾಡುವುದಿಲ್ಲ. ಆರು ತಿಂಗಳಾದರೂ ಬೇಕೆಂದೆ ನಮ್ಮ ಆಸ್ತಿ ನೋಂದಣಿ ಮಾಡುತ್ತಿಲ್ಲ ಎಂದು ಹಲವರು ದೂರಿದ್ದರು.
ಉಪ ನೋಂದಣಿ ಕಚೇರಿಗೆ ಸಚಿವರು ಆಗಮಿಸಿದ್ದು ತಿಳಿಯುತ್ತಿದ್ದಂತೆ ಅಧಿಕಾರಿ ದಿನೇಶ್ ಕಚೇರಿಗೆ ತಡಬಡಾಯಿಸಿ ಆಗಮಿಸಿದ್ದರು. ಈ ವೇಳೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಸಚಿವರು, " ಮದ್ದೂರು ಉಪ ನೋಂದಣಿ ಕಚೇರಿಯಲ್ಲಿ ನಡೆಯುತ್ತಿರುವ ಲಂಚಾವತಾರ ಬೆಂಗಳೂರಿಗೆ ಬಂದು ತಲುಪುತ್ತಿದೆ. ನಿತ್ಯ ನೂರಾರು ಮಂದಿ ನನ್ನನ್ನು ಭೇಡಿ ಮಾಡಿ ಇಲ್ಲಿನ ವ್ಯವಸ್ಥೆ ಸರಿಪಡಿಸುವಂತೆ ಮನವಿ ಮಾಡುತ್ತಿದ್ದಾರೆ. ದಲ್ಲಾಳಿಗಳನ್ನು ಇಟ್ಟುಕೊಂಡು ಹಣ ವಸೂಲಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
ಇನಾಮು ಆಸ್ತಿಗಳನ್ನು ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಮಾಡುತ್ತಿರುವುದು ಹಾಗೂ ದಾಖಲೆ ಸರಿ ಇದ್ದರೂ ಲಂಚಕ್ಕೆ ಬೇಡಿಕೆ ಇಡುತ್ತಿರುವುದು ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರು ಬರುತ್ತಿದೆ. ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದೆ ನಿನ್ನೆ ಮಾಡಿದ್ದ ಕಲೆಕ್ಷನ್ ಹಣವನ್ನು ಹಿರಿಯ ಅಧಿಕಾರಿಗಳಿಗೆ ಒಪ್ಪಿಸಲು ಹೋಗಿದ್ದಿರಾ?" ಎಂದು ಕಿಡಿಕಾರಿದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications