Breaking; ಮಂಡ್ಯದಲ್ಲಿ ಜಿಂಕೆ ಬೇಟೆಯಾಡುತ್ತಿದ್ದವರಿಗೆ ಗುಂಡೇಟು!
ಮಂಡ್ಯ, ಸೆಪ್ಟೆಂಬರ್ 03; ಅಕ್ರಮವಾಗಿ ಜಿಂಕೆ ಬೇಟೆಯಾಡುತ್ತಿದ್ದರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿನ ದಾಳಿ ನಡೆಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಉಳಿದವರು ಪರಾರಿಯಾಗಿದ್ದಾರೆ.
ಶುಕ್ರವಾರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಸವನ ಬೆಟ್ಟ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನಾಲ್ವರು ಬೇಟೆಗಾರರ ಗುಂಪು ಜಿಂಕೆಗಳ ಬೇಟೆಯಲ್ಲಿ ತೊಡಗಿದ್ದಾಗ ಗುಂಡಿನ ದಾಳಿ ನಡೆಸಲಾಗಿದೆ.
ಅರಣ್ಯ ಪ್ರದೇಶದ ಮುಖ್ಯ ರಸ್ತೆಯಲ್ಲಿ ಅಡಗಿ ಕುಳಿತಿದ್ದ ನಾಲ್ವರು ಜಿಂಕೆ ಸೇರಿದಂತೆ ಇತರ ಪ್ರಾಣಿಗಳು ರಸ್ತೆಯನ್ನು ದಾಟುವಾಗ ಗುಂಡು ಹಾರಿಸಿ ಬೇಟೆಯಾಡುತ್ತಿದ್ದರು.

ಬೇಟೆಗಾರರ ತಂಡ ಎರಡು ಜಿಂಕೆಗಳನ್ನು ಗುಂಡಿಟ್ಟು ಕೊಂದಿರುವ ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದರು. ಅವರನ್ನು ಹಿಡಿಯಲು ಪ್ರಯತ್ನ ನಡೆಸಿದಾಗ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಗುಂಡಿನ ದಾಳಿಯನ್ನು ಮಾಡಿದ್ದಾರೆ.
ಆಗ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆಗಾಗಿ ಪ್ರತಿದಾಳಿ ನಡೆಸಿದಾಗ ಒಬ್ಬ ಬೇಟೆಗಾರ ಗಾಯಗೊಂಡಿದ್ದು, ಉಳಿದವರು ಪರಾರಿಯಾಗಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಗೊಲ್ಲರದೊಡ್ಡಿ ಗ್ರಾಮದ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿನ ದಾಳಿ ನಡೆಸುತ್ತಿದ್ದಂತೆ ಉಳಿದ ಮೂವರು ಪರಾರಿಯಾಗಿದ್ದಾರೆ. ಪರಾರಿಯಾದವರು ಸಹ ಗೊಲ್ಲರದೊಡ್ಡಿ ಗ್ರಾಮದವರು ಎಂದು ಶಂಕಿಸಲಾಗಿದೆ. ಅಧಿಕಾರಿಗಳು ಅವರಿಗಾಗಿ ತಪಾಸಣೆ ನಡೆಸುತ್ತಿದ್ದಾರೆ.
ಬೇಟೆಗಾರರು ಕೊಂದು ಹಾಕಿದ್ದ ಎರಡು ಜಿಂಕೆಗಳ ಮೃತದೇಹಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮೀ ನಾರಾಯಣ ಪ್ರಸಾದ್, ಎಸಿಎಫ್ ಅಂಕರಾಜು, ಆರ್ಎಫ್ಓ ಮಹದೇವಸ್ವಾಮಿ ಮುಂತಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.












Click it and Unblock the Notifications