ಕೆ ಆರ್ ಎಸ್, ಕಬಿನಿ ಭರ್ತಿಗೆ ಕೆಲವೇ ಅಡಿಗಳಷ್ಟು ಬಾಕಿ
ಮಂಡ್ಯ, ಆಗಸ್ಟ್ 8 : ಕೇರಳದ ವೈನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ರಾಜ್ಯದ ಗಡಿ ಭಾಗದಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು, ಇಂದು ಬೆಳಗಿನ ಜಾವದಿಂದ 80 ಸಾವಿರ ಕ್ಯೂಸೆಕ್ ನೀರು ಹೊರ ಹರಿವು ಇದೆ.
ಈ ಕಾರಣ ಕಬಿನಿ ಜಲಾಶಯದ ಒಳ ಹರಿವು ಕೂಡ ಹೆಚ್ಚಾಗುತ್ತಿದ್ದು, ನದಿ ಪಾತ್ರದ ಜನರಿಗೆ ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಕೊಡಗು - ಕೇರಳ ಪ್ರವಾಹದಿಂದಾಗಿ ವೈನಾಡಿನಲ್ಲಿ ಹೆಚ್ಚು ಮಳೆಯಾದ ಕಾರಣ 85 ಸಾವಿರ ಕ್ಯೂಸೆಕ್ ನೀರು ಬಿಡಲಾಗಿತ್ತು. ಅದರಿಂದ ಕೃಷಿ ನಾಶವಾಗಿತ್ತು ಹಾಗೂ ಮುಳುಗಡೆಯೂ ಆಗಿತ್ತು. ಇದೇ ಕಾರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಎಚ್ಚೆತ್ತ ಜಿಲ್ಲಾಧಿಕಾರಿಗಳು ನದಿ ಪಾತ್ರದ ಜನರಿಗೆ ಬೇರೆ ಕಡೆ ತೆರಳುವಂತೆ ಸೂಚನೆ ನೀಡಿದ್ದಾರೆ.
ಇನ್ನು ಕೊಡಗಿನಲ್ಲಿ ಮಳೆ ತೀವ್ರತೆ ಪಡೆದುಕೊಂಡಿದ್ದು, ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಹಳ್ಳ ಕೊಳ್ಳಗಳು ಭೋರ್ಗರೆಯುತ್ತಿವೆ. ಜಲಾವೃತವಾಗಿರುವ ಭಾಗಮಂಡಲದಲ್ಲಿ ಮತ್ತಷ್ಟು ನೀರು ಏರಿಕೆಯಾಗಿದೆ.

ಇದರೊಟ್ಟಿಗೆ ಕಾವೇರಿ ನದಿ ಹರಿಯುವ ಭಾಗದ ಹಲವು ಕಡೆ ರಸ್ತೆ ಸಂಪರ್ಕ ಕಡಿತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಗೆ ಜಿಲ್ಲೆಯ ಜನರು ತತ್ತರಿಸಿದ್ದಾರೆ. ಭೇತ್ರಿ ಬಳಿ ಸೇತುವೆ ಮಟ್ಟದಲ್ಲಿ ಕಾವೇರಿ ನೀರು ಹರಿಯುತ್ತಿದೆ. ಇನ್ನು ಮಳೆಯ ಪರಿಣಾಮ ಕೆಆರ್ ಎಸ್ ಡ್ಯಾಂನ ಒಳಹರಿವಿನಲ್ಲಿ ಹೆಚ್ಚಳವಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಡ್ಯಾಂನ ಒಳ ಹರಿವು 26,522 ಕ್ಯೂಸೆಕ್ ಏರಿಕೆಯಾಗಿದೆ. ಬೆಳಗ್ಗೆ 22,719 ಕ್ಯೂಸೆಕ್ ಇದ್ದ ಒಳ ಹರಿವು ಸಂಜೆ ಹೊತ್ತಿಗೆ 26,522 ಕ್ಯೂಸೆ ಕ್ ಗೆ ತಲುಪಿದೆ. ಅಣೆಕಟ್ಟೆಯ ಗರಿಷ್ಠ ಮಟ್ಟ 124.80 ಅಡಿ ಇದ್ದು, ಇಂದು 88.60 ಅಡಿ ನೀರು ಸಂಗ್ರವಾಗಿದೆ. ಒಳ ಹರಿವು 26,522 ಕ್ಯೂಸೆಕ್ ಇದ್ದು, ಪ್ರಸ್ತುತ 15.121 ಟಿಎಂಸಿ ನೀರು ಸಂಗ್ರಹವಾಗಿದೆ.

ಇತ್ತ ಕಬಿನಿ ಜಲಾಶಯದ ನೀರಿನ ಮಟ್ಟ 80 ಅಡಿ ತಲುಪಿದ್ದು, ಗರಿಷ್ಠ ಮಟ್ಟ 84 ಅಡಿ ಆಗಿದೆ. ಜಲಾಶಯದ ಸದ್ಯದ ಒಳಹರಿವು 23,000 ಕ್ಯೂಸೆಕ್ ಆಗಿದ್ದು, ಹೊರಹರಿವು 10,000 ಕ್ಯೂಸೆಕ್ ಇದೆ. ಜಲಾಶಯದ ಸಂಪೂರ್ಣ ಭರ್ತಿಗೆ 4 ಅಡಿಗಳು ಮಾತ್ರ ಬಾಕಿ ಇದ್ದು, ಒಳಹರಿವು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಜಲಾಶಯದಿಂದ ಹೊರಹರಿವು ಹೆಚ್ಚಳ ಮಾಡಲಾಗಿದೆ.












Click it and Unblock the Notifications