ಕಾವೇರಿ ನೀರಿಗಾಗಿ ಹೋರಾಟ: ಐದನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ, ರಾಜ್ಯ ಸರ್ಕಾರದ ವಿರುದ್ಧ ಹೆಚ್ಚಿದ ಆಕ್ರೋಶ
ಮಂಡ್ಯ, ಸೆಪ್ಟೆಂಬರ್ 04: ತಮಿಳುನಾಡಿಗೆ ನೀರು ಹರಿಸಬೇಡಿ ಎಂದು ರೈತರು ಹಾಗೂ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದು ರೈತರಿಗೆ ಮಾಡಿದ ದ್ರೋಹವಾಗಿದೆ ಎಂದು ಮಾಜಿ ಶಾಸಕ ಕೆ.ಟಿ. ಶ್ರೀಕಂಠೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಹಾಗೂ ಜನರ ಸಂಕಷ್ಟದ ಕೂಗು ಕೇಳಿಸುತ್ತಿಲ್ಲ. ಆದ್ದರಿಂದ ಹಿಂದಿನ ರೀತಿ ದೊಡ್ಡಮಟ್ಟದಲ್ಲೇ ಚಳವಳಿಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಇದಕ್ಕೆ ಜಿಲ್ಲೆ ಮಾತ್ರವಲ್ಲ, ಕಾವೇರಿ ಕೊಳ್ಳದ ಎಲ್ಲ ಜಿಲ್ಲೆಗಳ ರೈತರು ಹಾಗೂ ಕನ್ನಡ ಸಂಘಟನೆಗಳು ಸಾಥ್ ನೀಡಬೇಕು ಎಂದರು.

ಕಾವೇರಿ ನದಿ ನೀರು ಸಮಸ್ಯೆ ಎದುರಾದಾಗ ಎಲ್ಲರೂ ಒಗ್ಗೂಡಿ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಸಹಯೋಗದಲ್ಲಿ ಪ್ರತಿಭಟನೆ ಮಾಡಲಾಗುತ್ತಿತ್ತು, ಆದರೆ ಈ ಬಾರಿ ಸಂಘಟನೆಗಳು ಬೇರೆ ಬೇರೆ ಕಡೆ ಪ್ರತ್ಯೇಕವಾಗಿ ಪ್ರತಿಭಟನೆ ಮಾಡುತ್ತಿವೆ. ಇದರಿಂದಾಗಿ ನಮ್ಮನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ರೈತ ಹಿತರಕ್ಷಣಾ ಸಮಿತಿ ಸಹಯೋಗದಲ್ಲೇ ಎಲ್ಲ ಸಂಘಟನೆಗಳು ಒಗ್ಗೂಡಿ ಹೋರಾಟ ಮಾಡುವಂತೆ ಕರೆ ನೀಡಿದರು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ಗೌಡ ಮಾತನಾಡಿ, ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಟ್ಟಿರುವುದನ್ನು ತಕ್ಷಣ ನಿಲ್ಲಿಸಿ ಮಂಡ್ಯ ಜಿಲ್ಲೆಯ ಹಾಗೂ ಕಾವೇರಿ ಕೊಳ್ಳದ ರೈತರು ಹಾಗೂ ಜನರನ್ನು ಕಾಪಾಡಬೇಕೆಂದು ಆಗ್ರಹಿಸಿದರು.

ಸೋಮವಾರ ಮಂಡ್ಯದಲ್ಲಿ ನಡೆದ ಧರಣಿಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಸುನಂದಾ ಜಯರಾಂ, ಕೆ ಬೋರಯ್ಯ, ಮೈಶುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಮೈಶುಗರ್ ಕಬ್ಬು ಒಪ್ಪಿಗೆದಾರರ ಸಂಘದ ಶಂಭೂನಹಳ್ಳಿ ಕೃಷ್ಣ, ಸಾತನೂರು ವೇಣುಗೋಪಾಲ್ ಹಾಗೂ ಪದಾಧಿಕಾರಿಗಳೂ ಭಾಗವಹಿಸಿ ತಮಿಳುನಾಡಿಗೆ ಹರಿಸುತ್ತಿರುವ ನೀರು ಸ್ಥಗಿತ ಮಾಡದಿರುವ ಬಗ್ಗೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಮಂಡ್ಯ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಧರಣಿ ಐದನೇ ದಿನವಾದ ಸೋಮವಾರವೂ ಮುಂದುವರೆದಿತ್ತು. ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮಾಜಿ ಶಾಸಕ ಜಿ.ಬಿ. ಶಿವಕುರ್ಮಾ, ಕಿರಂಗೂರು ಪಾಪು, ಎಂ.ಎಲ್. ತುಳಸೀದರ್ ಇತರರು ಭಾಗಿಯಾಗಿದ್ದರು.












Click it and Unblock the Notifications