ಪ್ರಧಾನಿ ಮೋದಿ ಸ್ವಾಗತಕ್ಕೆ ಮದುವಣಗಿತ್ತಿಯಂತೆ ಸಜ್ಜುಗೊಂಡ ಸಕ್ಕರೆ ನಾಡು ಮಂಡ್ಯ, ಇಲ್ಲಿದೆ ನೋಡಿ ವಿವರ
ಮಂಡ್ಯ, ಮಾರ್ಚ್, 12: ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ಸಕ್ಕರೆ ಜಿಲ್ಲೆ ಮಂಡ್ಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ನಗರದ ಹೃದಯ ಭಾಗದಲ್ಲಿ ಹಾದುಹೋಗಿರುವ ಬೆಂಗಳೂರು ಮೈಸೂರು ಹೆದ್ದಾರಿ ಸಂಪೂರ್ಣ ಕೇಸರಿಮಯವಾಗಿದೆ.
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಸಕಲ ರೀತಿಯ ಸಿದ್ಧತೆಗಳನ್ನೂ ಮಾಡಲಾಗಿದೆ.

ನವದೆಹಲಿಯಿಂದ ವಿಮಾನದಲ್ಲಿ ಆಗಮಿಸುವ ಪ್ರಧಾನಿಗಳು ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದು, ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಮಂಡ್ಯ ನಗರದ ಪ್ರತಿಷ್ಠಿತ ಪಿ.ಇ.ಎಸ್. ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ಗೆ ಬೆಳಗ್ಗೆ 11:30ಕ್ಕೆ ಬಂದಿಳಿಯಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರೋಡ್ ಶೋ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ
ನಂತರ ನಗರದ ಪ್ರವಾಸಿ ಮಂದಿರದ ಮುಂಭಾಗದಿಂದ ನಂದ ಚಿತ್ರಮಂದಿರದವರೆಗೆ ರೋಡ್ ಶೋ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದಾರೆ. ನಂತರ ಹೆದ್ದಾರಿ ಮೂಲಕ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಲೋಕಾರ್ಪಣೆ, ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ರಕ್ಷಣಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದ್ದು, ಎಸ್ಪಿಜಿ ಮತ್ತು ರಾಜ್ಯ ಪೊಲೀಸ್ ಇಲಾಖೆಯಿಂದ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸುಮಾರು 1.8 ಕಿ.ಮೀ. ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸುವ ಪ್ರಧಾನಿಗಳಿಗೆ ವಿಶೇಷ ಭದ್ರತೆ ಒದಗಿಸಲು ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಹಾಗೂ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ. ರೋಡ್ ಶೋ ವೇಳೆ ನೆಚ್ಚಿನ ಪ್ರಧಾನಿಯನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಜನತೆ ಭಾಗಿಯಾಗುವ ನಿರೀಕ್ಷೆ ಇದ್ದು, ಇವರೆಲ್ಲರಿಗೂ ಬಿಸಿಲ ಬೇಗೆ ತಣಿಸಲು ಕುಡಿಯುವ ನೀರು ಮತ್ತು ಮಜ್ಜಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.
ಇಷ್ಟೇ ಅಲ್ಲದೆ ಹಿರಿಯ ನಾಗರಿಕರು, ಮಕ್ಕಳು ಮತ್ತು ಮಹಿಳೆಯರು ಪ್ರತ್ಯೇಕವಾಗಿ ಕೂರಲು ವ್ಯವಸ್ಥೆ ಮಾಡಲಾಗಿದೆ. ಹಾಗೆಯೆ ಸಾರ್ವಜನಿಕರಿಗೆ ಬೇಸರವಾಗದಂತೆ ಪ್ರತಿ ನೂರು ಮೀಟರ್ಗೆ ಜನಪದ ಕಲಾತಂಡಗಳ ಪ್ರದರ್ಶನ ಆಯೋಜಿಸಲಾಗಿದೆ. ರಸ್ತೆಯುದ್ದಕ್ಕೂ ಮೋದಿ ಸ್ವಾಗತ ಕೋರುವ ಎತ್ತರದ ಫ್ಲೆಕ್ಸ್ಗಳು, ಬಂಟಿಂಗ್, ಬ್ಯಾನರ್, ಬಿಜೆಪಿ ಬಾವುಟ ಹಾಗೂ ಬೃಹತ್ ಉದ್ದದ ಕೇಸರಿ ಬಟ್ಟೆಗಳನ್ನು ಹಾಕಲಾಗಿದ್ದು, ರಸ್ತೆಯುದ್ದಕ್ಕೂ ಕೇಸರಿಮಯವಾಗಿದೆ.












Click it and Unblock the Notifications