ಕಾಲಭೈರವೇಶ್ವರನಿಗೆ ಅಮಾವಾಸ್ಯೆ ಪೂಜೆ ಸಲ್ಲಿಸಿದ ರೇವಣ್ಣ ದಂಪತಿ
ಮಂಡ್ಯ, ಸೆಪ್ಟೆಂಬರ್ 20 : ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಸದಸ್ಯರು ಪ್ರತಿ ಅಮಾವಾಸ್ಯೆಯಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿರುವ ಶ್ರೀ ಕಾಲಭೈರೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಮಾಡಿಸಿಕೊಂಡು ಬರುವುದನ್ನು ಮೊದಲಿನಿಂದಲೂ ಮುಂದುವರೆಸಿಕೊಂಡು ಬಂದಿದ್ದಾರೆ.
ಅದರಂತೆ ಇಂದು (ಸೆಪ್ಟೆಂಬರ್ 20) ಅಮಾವಾಸ್ಯೆ ಹಿನ್ನಲೆಯಲ್ಲಿ ಹೆಚ್.ಡಿ. ರೇವಣ್ಣ ಹಾಗೂ ಭವಾನಿ ರೇವಣ್ಣ ದಂಪತಿ ಆದಿಚುಂಚನಗಿರಿಯ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನಿಡಿ ಪಂಚಾಮೃತಾಭಿಷೇಕ, ಭಸ್ಮಾಭಿಷೇಕ, ಬಿಲ್ವಾಭಿಷೇಕ, ಪುಷ್ಪಾಭಿಷೇಕ, ಸುಗಂಧ ದ್ರವ್ಯಾದಿಗಳೊಂದಿಗೆ ವಿವಿಧ ಅಭಿಷೇಕಗಳನ್ನು ನೆರವೇರಿಸಿದರು.
ಈ ಎಲ್ಲ ಕಾರ್ಯಗಳನ್ನು ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರೇ ನೆರವೇರಿಸಿದ್ದು ವಿಶೇಷವಾಗಿತ್ತು. ಬಳಿಕ ನಡೆದ ಬೆಳ್ಳಿರಥೋತ್ಸವವನ್ನು ಕಣ್ತುಂಬಿಕೊಂಡ ದಂಪತಿಗೆ ಮಠದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಮೊದಲಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಪತ್ನಿ ಅನಿತಾರವರೊಂದಿಗೆ ತೆರಳಿ ಪೂಜೆ ಸಲ್ಲಿಸುತ್ತಿದ್ದರಾದರೂ ಕಳೆದ ಎರಡು ಅಮಾವಾಸ್ಯೆಗಳಿಂದ ಹೆಚ್.ಡಿ.ರೇವಣ್ಣ ಹಾಗೂ ಪತ್ನಿ ಭವಾನಿ ಪೂಜೆ ಸಲ್ಲಿಸುತ್ತಿದ್ದಾರೆ.
ಚುನಾವಣೆಯಲ್ಲಿ ಗೆಲುವಿಗಾಗಿ ತಂತ್ರದೊಂದಿಗೆ ದೇವರ ಅನುಗ್ರಹವೂ ಅಗತ್ಯವಾಗಿರುವ ಕಾರಣದಿಂದಾಗಿ ಅಮಾವಾಸ್ಯೆ ದಿನದಂದು ಕಾಲಭೈರವೇಶ್ವರಸ್ವಾಮಿ ದೇವಾಲಯಕ್ಕೆ ತೆರಳಿ ಪೂಜಾ ಕಾರ್ಯ ನಡೆಸುವುದನ್ನು ರೂಢಿಸಿಕೊಂಡಿದ್ದಾರೆ.