ನ.23ರಂದು ಮೇಲುಕೋಟೆಗೆ ಎಚ್.ಡಿ.ಕುಮಾರಸ್ವಾಮಿ ಭೇಟಿ
ಮಂಡ್ಯ, ನವೆಂಬರ್ 21 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 23ರಂದು ಭೇಟಿ ನೀಡಲಿದ್ದಾರೆ. ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಲಿದ್ದಾರೆ, ಹಲವು ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಬುಧವಾರ ಈ ಕುರಿತು ಮಾಹಿತಿ ನೀಡಿದರು. ಎಚ್.ಡಿ.ಕುಮಾರಸ್ವಾಮಿ ಅವರು ವೈವಿಧ್ಯಮಯ ಸಾಂಸ್ಕೃತಿಕ ಕಲಾ ವೈಭವ ಕಾರ್ಯಕ್ರಮವಾದ ತೊಣ್ಣೂರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಸಚಿವ ಪುಟ್ಟರಾಜು ಅವರು ಮೇಲುಕೋಟೆ ವ್ಯಾಪ್ತಿಯ ಕೆರೆತೊಣ್ಣೂರು ಪ್ರದೇಶಕ್ಕೆ ಭೇಟಿ ನೀಡಿ ತೊಣ್ಣೂರು ಉತ್ಸವದ ಸಿದ್ಧತೆ ಕಾರ್ಯವನ್ನು ಪರಿಶೀಲಿಸಿದರು. ಕಾರ್ಯಕ್ರಮ ಬಹಳ ವ್ಯವಸ್ಥಿತ ಹಾಗೂ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಸೂಚನೆ ನೀಡಿದರು.

ನವೆಂಬರ್ 23 ರಂದು ಮುಖ್ಯಮಂತ್ರಿಗಳು ಮಧ್ಯಾಹ್ನ 2 ಗಂಟೆ ವೇಳೆಗೆ ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದು, ದುದ್ದ, ಜಕ್ಕನಹಳ್ಳಿ, ಶಿವಹಳ್ಳಿ ಹಾಗೂ ಮೇಲುಕೋಟೆ ಪ್ರದೇಶದಲ್ಲಿ 12ಕ್ಕೂ ಹೆಚ್ಚು ಇಲಾಖೆಗಳಿಗೆ ಸಂಬಂಧಿಸಿದ ರೂ.718.85 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಸಂಜೆ 6 ಗಂಟೆಗೆ ಕೆರೆತೊಣ್ಣೂರು ಪ್ರದೇಶಕ್ಕೆ ಭೇಟಿ ನೀಡಿ, ನವೆಂಬರ್ 23 ರಿಂದ 25 ರವರೆಗೆ 3 ದಿನಗಳ ಕಾಲ ನಡೆಯಲಿರುವ ತೊಣ್ಣೂರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
'ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುವುದು. ಕೆರೆತೊಣ್ಣೂರು ಪ್ರದೇಶವನ್ನು ಪ್ರಸಿದ್ಧ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ತೊಣ್ಣೂರು ಉತ್ಸವನ್ನು ಆಯೋಜನೆ ಮಾಡಲಾಗಿದೆ' ಎಂದರು.












Click it and Unblock the Notifications