ಮುಖ್ಯಮಂತ್ರಿ ಆಗೋದು ಕುಮಾರಸ್ವಾಮಿಯ ಭ್ರಮೆ: ಚೆಲುವರಾಯ ಸ್ವಾಮಿ
ಮಂಡ್ಯ, ಡಿಸೆಂಬರ್ 8: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಬಹುಮತ ಪಡೆದು ಅಧಿಕಾರ ಹಿಡಿಯುವುದಿಲ್ಲ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದೂ ಇಲ್ಲ ಎಂದು ಶಾಸಕ ಎನ್.ಚೆಲುವರಾಯಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಭ್ರಮೆಯಲ್ಲಿದ್ದಾರೆ. ಅವರು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯಾಗುವುದಿಲ್ಲ. ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಕೇವಲ 25 ಸಾವಿರ ರುಪಾಯಿವರೆಗೆ ರೈತರ ಸಾಲ ಮನ್ನಾ ಮಾಡಿದ್ದರು. ಸಿದ್ದರಾಮಯ್ಯನವರು 50 ಸಾವಿರ ರುಪಾಯಿವರೆಗೆ ಸಾಲ ಮನ್ನಾ ಮಾಡಿದ್ದಾರೆ ಎಂದರು.

ಅಲ್ಲದೆ, ಸಿದ್ದರಾಮಯ್ಯ ಅವರು ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಆದ್ದರಿಂದ ಭ್ರಷ್ಟಾಚಾರ ರಹಿತವಾಗಿ ಆಡಳಿತ ನಡೆಸಿದ ಸರಕಾರವಿದ್ದರೆ ಅದು ಸಿದ್ದರಾಮಯ್ಯ ಸರಕಾರ ಮಾತ್ರ. ಇದಕ್ಕೆ ಯಾವುದೇ ಕಳಂಕವಿಲ್ಲದೆ ನಡೆಸಿದ ಆಡಳಿತವೇ ಸಾಕ್ಷಿ ಎಂದು ಹೇಳಿದರು.
"ನಾನು ನಾಗಮಂಗಲ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರಕ್ಕೆ ಹೋಗಲ್ಲ. ಕಾಂಗ್ರೆಸ್ಸಿನಿಂದಲೇ ಸ್ಪರ್ಧಿಸಿ ಗೆಲ್ಲುತ್ತೇನೆ" ಎಂದು ಅವರು ಹೇಳಿದರು. ಇನ್ನೂ ಅಧಿಕೃತವಾಗಿ ಕಾಂಗ್ರೆಸ್ ಸೇರಿಲ್ಲ. ಜನವರಿ ಅಂತ್ಯದೊಳಗೆ ಕಾಂಗ್ರೆಸ್ ಪಕ್ಷ ಸೇರುವುದು ಖಚಿತ ಎಂದರು.












Click it and Unblock the Notifications