ಮಂಡ್ಯ ಜಿಲ್ಲಾ ಉಸ್ತುವಾರಿ ಹೊಣೆ ಎಂ.ಕೃಷ್ಣಪ್ಪ ಹೆಗಲಿಗೆ
ಬೆಂಗಳೂರು, ಅಕ್ಟೋಬರ್. 15 : ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ವಸತಿ ಸಚಿವ ಎಂ.ಕೃಷ್ಣಪ್ಪ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಹಿಂದೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಸೆ.5ರಂದು ಬೆಂಗಳೂರಿನ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಅವರು ಸಚಿವರಾಗಿ ಸಿದ್ದರಾಮಯ್ಯ ಸಂಪುಟ ಸೇರಿದ್ದರು. ಆದರೆ, ಕೃಷ್ಣಪ್ಪ ಅವರಿಗೆ ಯಾವ ಜಿಲ್ಲೆಯ ಉಸ್ತುವಾರಿಯನ್ನು ನೀಡಿರಲಿಲ್ಲ. [ಸಚಿವ ಎಂ.ಕೃಷ್ಣಪ್ಪ ಸಂಕ್ಷಿಪ್ತ ಪರಿಚಯ]
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಡ್ಯದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಈಗ ಎಂ.ಕೃಷ್ಣಪ್ಪ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ. [ಸಿದ್ದು ಸಂಪುಟಕ್ಕೆ ವಿಜಯನಗರದ ಶಾಸಕ ಎಂ ಕೃಷ್ಣಪ್ಪ ಎಂಟ್ರಿ]
ಮೊದಲು ವಸತಿ ಸಚಿವರಾಗಿದ್ದ ಅಂಬರೀಶ್ ಅವರು ಮಂಡ್ಯ ಜಿಲ್ಲಾ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು. ಅವರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಡಿ.ಕೆ.ಶಿವಕುಮಾರ್ ಅವರಿಗೆ ಉಸ್ತುವಾರಿ ವಹಿಸಲಾಗಿತ್ತು.
ಸದ್ಯ ಹೊರಬಿದ್ದಿರುವ ಆದೇಶದಂತೆ ಡಿ.ಕೆ.ಶಿವಕುಮಾರ್ ರಾಮನಗರದ ಉಸ್ತುವಾರಿ ನೋಡಿಕೊಳ್ಳಲಿದ್ದು, ಮಂಡ್ಯದ ಉಸ್ತುವಾರಿಯನ್ನು ಎಂ.ಕೃಷ್ಣಪ್ಪ ಅವರಿಗೆ ವಹಿಸಲಾಗಿದೆ.
ಒಂದು ಬಾರಿ ವಿಧಾನಪರಿಷತ್ ಸದಸ್ಯ ಮತ್ತು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೃಷ್ಣಪ್ಪ ಅವರು ಮೊದಲ ಬಾರಿಗೆ ಸಚಿವರಾಗಿದ್ದಾರೆ.