ಬಂಡಾಯ ಶಾಸಕರ ಬಗ್ಗೆ ಜಮೀರ್ ಭಾವನಾತ್ಮಕ ಮಾತುಗಳು!
ಬೆಂಗಳೂರು, ಅಕ್ಟೋಬರ್ 24 : ಏಳು ಜೆಡಿಎಸ್ ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಮತಚಲಾವಣೆ ಮಾಡಿ ಪಕ್ಷದಿಂದ ಅಮಾನತುಗೊಂಡಿದ್ದರು. ಬಳಿಕ ಕಾಂಗ್ರೆಸ್ ಸೇರಿ 2018ರ ಚುನಾವಣೆ ಎದುರಿಸಿದ್ದರು. ಆದರೆ, ಏಳು ಜನರಲ್ಲಿ ಮೂವರು ಮಾತ್ರ ಗೆಲುವು ಸಾಧಿಸಿದ್ದಾರೆ.
ಜೆಡಿಎಸ್ ಪಕ್ಷದ ರೆಬೆಲ್ ಶಾಸಕರ ಗುಂಪಿನ ನೇತೃತ್ವ ವಹಿಸಿದ್ದು ಜಮೀರ್ ಅಹಮದ್ ಖಾನ್. ಈಗ ಜಮೀರ್ ಅಹಮದ್ ಖಾನ್ ಕಾಂಗ್ರೆಸ್ನಲ್ಲಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವರು.
ಮಂಡ್ಯದಲ್ಲಿ ಬುಧವಾರ ಮಾತನಾಡಿದ ಜಮೀರ್ ಅಹಮದ್ ಖಾನ್ ಅವರು, 'ರಾಜಕೀಯ ಸ್ನೇಹಿತರಾದ ಚೆಲುವರಾಯಸ್ವಾಮಿ. ರಮೇಶ್ ಬಂಡಿಸಿದ್ದೇಗೌಡ, ಬಾಲಕೃಷ್ಣ ಸೇರಿದಂತೆ ಯಾರಿಗಾದರೂ ತೊಂದರೆ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ' ಎಂದು ಹೇಳಿದರು.
2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಎಚ್.ಸಿ.ಬಾಲಕೃಷ್ಣ, ಚೆಲುವರಾಯಸ್ವಾಮಿ, ಇಕ್ಬಾಲ್ ಅನ್ಸಾರಿ, ರಮೇಶ್ ಬಂಡಿಸಿದ್ದೇಗೌಡ ಅವರು ಸೋಲು ಕಂಡಿದ್ದಾರೆ. ಆದರೆ, ನಾವೆಲ್ಲರೂ ಒಟ್ಟಾಗಿದ್ದೆವೆ ಎಂದು ಜಮೀರ್ ಅಹಮದ್ ಹೇಳಿದ್ದಾರೆ....

ಮಂಡ್ಯದಲ್ಲಿ ಪ್ರಚಾರ ಆರಂಭ
ಬುಧವಾರ ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಪ್ರಚಾರ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಖಾನ್ ಅವರು ಎಲ್.ಆರ್.ಶಿವರಾಮೇಗೌಡ ಪರವಾಗಿ ಪ್ರಚಾರ ನಡೆಸಿದರು. ಚೆಲುವರಾಯಸ್ವಾಮಿ ಮತ್ತು ಎಲ್.ಆರ್.ಶಿವರಾಮೇಗೌಡ ಅವರನ್ನು ಜಮೀರ್ ಭೇಟಿ ಮಾಡಿಸಿದರು.

ನನ್ನ ರಾಜಕೀಯ ಸ್ನೇಹಿತರು
'ಚೆಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಬಾಲಕೃಷ್ಣ ಸೇರಿದಂತೆ ಎಲ್ಲರೂ ನನ್ನ ರಾಜಕೀಯ ಸ್ನೇಹಿತರು. ನನಗೆ ಅವರು ಮುಖ್ಯ, ಅವರನ್ನು ಬಿಟ್ಟು ನಾನು ರಾಜಕೀಯ ಮಾಡುವುದಿಲ್ಲ. ನನ್ನ ಬಿಟ್ಟು ಅವರು ರಾಜಕೀಯ ಮಾಡುವುದಿಲ್ಲ' ಎಂದು ಜಮೀರ್ ಅಹಮದ್ ಖಾನ್ ಹೇಳಿದರು.

ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ
'ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಹಾಕಲು ಟಿಕೆಟ್ ಕೇಳಲಾಗುತ್ತದೆ. ಅಭ್ಯರ್ಥಿ ಹಾಕುವ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ' ಎಂದು ಜಮೀರ್ ಅಹಮದ್ ಖಾನ್ ಹೇಳಿದರು.

ಕುಮಾರಸ್ವಾಮಿ ಜಾತ್ಯಾತೀತರು
'ನಾನು ಚುನಾವಣೆ ಸಮಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದು ನಿಜ. ಆದರೆ, ಕುಮಾರಸ್ವಾಮಿ ಅವರು ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಿ, ತಾವು ಜಾತ್ಯತೀತರು ಅನ್ನೋದನ್ನು ಸಾಬೀತು ಮಾಡಿದ್ದಾರೆ' ಎಂದು ಜಮೀರ್ ಅಹಮದ್ ತಿಳಿಸಿದರು.

ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಇಲ್ಲ
ಮಾಜಿ ಮುಖ್ಯಮಂತ್ರಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಜಮೀರ್ ಅಹಮದ್ ಖಾನ್, 'ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಪಡೆದುಕೊಳ್ಳಲು ನಾವು ಬಿಡುವುದಿಲ್ಲ. ಅವರು ರಾಜಕೀಯ ನಿವೃತ್ತಿ ಪಡೆದುಕೊಂಡರೂ ನಾವು ಮನೆಯಿಂದ ಕರೆದು ತರುತ್ತೀವಿ' ಎಂದು ಹೇಳಿದರು.

ಶಾಸಕರ ಪಟ್ಟಿ
ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಚೆಲುವರಾಯಸ್ವಾಮಿ (ನಾಗಮಂಗಲ), ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಇಕ್ಬಾಲ್ ಅನ್ಸಾರಿ (ಗಂಗಾವತಿ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ), ಎಚ್.ಸಿ.ಬಾಲಕೃಷ್ಣ (ಮಾಗಡಿ) ಜೆಡಿಎಸ್ನಿಂದ ಅಮಾನತುಗೊಂಡಿದ್ದರು.
ಎಲ್ಲರೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮಿಖದಲ್ಲಿ ಕಾಂಗ್ರೆಸ್ ಸೇರಿದ್ದರು. ಜಮೀರ್ ಅಹಮದ್ ಖಾನ್, ಅಖಂಡ ಶ್ರೀನಿವಾಸಮೂರ್ತಿ, ಭೀಮಾ ನಾಯಕ್ ಅವರು ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. (ಚಿತ್ರ : ರಮೇಶ್ ಬಂಡಿಸಿದ್ದೇಗೌಡ)












Click it and Unblock the Notifications