ಕುಮಾರಸ್ವಾಮಿಗೆ ಮೋಸ ಮಾಡಲ್ಲ : ರವೀಂದ್ರ ಶ್ರೀಕಂಠಯ್ಯ
ಮಂಡ್ಯ, ಡಿಸೆಂಬರ್ 17 : "ಮಂಡ್ಯದ ಜನರು ವಿಶ್ವಾಸದಿಂದ ಅಧಿಕಾರ ಕೊಟ್ಟಿದ್ದಾರೆ. ಜೆಡಿಎಸ್ ಪಕ್ಷವನ್ನು ಬಿಟ್ಟು ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮೋಸ ಮಾಡುವುದಿಲ್ಲ" ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.
ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಮಂಗಳವಾರ ಹಬ್ಬಿತ್ತು. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಈ ಕುರಿತು ಸ್ಪಷ್ಟನೆಯನ್ನು ನೀಡಿದರು.
"ಮಂಡ್ಯದ ಜನರು ವಿಶ್ವಾಸದಿಂದ ಅಧಿಕಾರ ನೀಡಿದ್ದಾರೆ. ಜೆಡಿಎಸ್ ಪಕ್ಷವನ್ನು ಬಿಟ್ಟು ಜನರಿಗೆ, ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮೋಸ ಮಾಡುವುದಿಲ್ಲ" ಎಂದು ರವೀಂದ್ರ ಶ್ರೀಕಂಠಯ್ಯ ಸ್ಪಷ್ಟಪಡಿಸಿದರು.

"ನಮ್ಮ ಕುಟುಂಬದಲ್ಲಿ ಮೂವರು ಶಾಸಕರಿದ್ದೇವೆ. ಜೆಡಿಎಸ್ ಪಕ್ಷದಿಂದ ನಾವು ಶಾಸಕರಾಗಿದ್ದೇವೆ. ಜೆಡಿಎಸ್ ಶಾಸಕರನ್ನು ಸೆಳೆಯುವ ಮೊದಲು ಕ್ಷೇತ್ರದಲ್ಲಿ ಒಂದು ಸ್ಥಾನ ಗೆದ್ದಿರುವ ಅವರು ಜಿಲ್ಲೆಯನ್ನು ಅಭಿವೃದ್ಧಿ ಮಾಡಲಿ" ಎಂದು ರವೀಂದ್ರ ಶ್ರೀಕಂಠಯ್ಯ ಸವಾಲು ಹಾಕಿದರು.
"ನಾನು ಜೆಡಿಎಸ್ ಪಕ್ಷವನ್ನು ಬಿಡುವುದಿಲ್ಲ. ಶಾಸಕ ಸ್ಥಾನದ ಅವಧಿ ಮುಗಿಯುವ ತನಕ ಜೆಡಿಎಸ್ ಪಕ್ಷದಲ್ಲಿಯೇ ಇರಲಿದ್ದೇನೆ. ಮುಂದಿನ ದಿನಗಳಲ್ಲಿ ಏನು ಬೇಕಾದರೂ ಆಗಬಹುದು. ಸದ್ಯಕ್ಕಂತೂ ಯಾವುದೇ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕಿಸಿಲ್ಲ" ಎಂದು ಹೇಳಿದರು.
ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇಬ್ಬರು ಸಹ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರಾಗಿದ್ದು, ಕೆ. ಆರ್. ಪೇಟೆ ಉಪ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ಸೇರುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.












Click it and Unblock the Notifications