ಮತ್ತೊಬ್ಬ ಜೆಡಿಎಸ್ ನಾಯಕರ ವಿರುದ್ಧ ತನಿಖೆಗೆ ಆದೇಶ
ಮಂಡ್ಯ, ಡಿಸೆಂಬರ್ 21 : ಮಂಡ್ಯ ಸಂಸದ, ಜೆಡಿಎಸ್ ನಾಯಕ ಸಿ.ಎಸ್.ಪುಟ್ಟರಾಜು ವಿರುದ್ಧ ತನಿಖೆಗೆ ಕರ್ನಾಟಕ ಸರ್ಕಾರ ಆದೇಶ ನೀಡಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ.
ಅಕ್ರಮ ಕಲ್ಲು ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿ.ಎಸ್.ಪುಟ್ಟರಾಜು ವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ. ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎಸ್.ಮೂರ್ತಿ ತನಿಖೆಗೆ ಆದೇಶಿಸಿದ್ದಾರೆ.

ಮಂಡ್ಯ ಜಿಲ್ಲೆಯ ಬೇಬಿ ಬೆಟ್ಟ, ಚಿನಕುರಳಿ ಸೇರಿದಂತೆ ವಿವಿಧ ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ ಎಂದು ಆರ್ಟಿಐ ಕಾರ್ಯಕರ್ತ ರವೀಂದ್ರ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡಿದ್ದರು.
ಈ ದೂರನ್ನು ಅರಣ್ಯ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಡಾ.ಕೆ.ಎಸ್.ಮೂರ್ತಿ ಅವರು ಈ ಬಗ್ಗೆ ತನಿಖೆ ನಡೆಸಿ, 15 ದಿನಗಳಲ್ಲಿ ವರದಿ ನೀಡುವಂತೆ ಆದೇಶ ಹೊರಡಿಸಿದ್ದಾರೆ.
ಸರ್ಕಾರ ಚುನಾವಣೆ ಹತ್ತಿರವಿರುವಾಗ ಜೆಡಿಎಸ್ ನಾಯಕರ ವಿರುದ್ಧ ತನಿಖೆಗೆ ಆದೇಶಿಸಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಎಸಿಬಿ ತನಿಖೆಗೆ ಎರಡು ದಿನಗಳ ಹಿಂದೆ ಆದೇಶ ನೀಡಲಾಗಿತ್ತು.
ಜಿ.ಟಿ.ದೇವೇಗೌಡರ ವಿರುದ್ಧದ ದೂರನ್ನು ಲೋಕಾಯುಕ್ತದಿಂದ ಭಷ್ಟಾಚಾರ ನಿಗ್ರಹ ದಳ (ಎಸಿಬಿ)ಗೆ ವರ್ಗಾವಣೆ ಮಾಡಿದ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದರು.
'ಜಿ.ಟಿ.ದೇವೇಗೌಡರನ್ನು ಮಟ್ಟಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯತ್ನ ನಡೆಸುತ್ತಿದ್ದಾರೆ. ಎಸಿಬಿಯನ್ನು ಸಿದ್ದರಾಮಯ್ಯ ಮತ್ತು ಕೆಂಪಯ್ಯ ಅವರು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದಾರೆ' ಎಂದು ಆರೋಪಿಸಿದ್ದರು.
ಅಂದಹಾಗೆ 2018ರ ವಿಧಾನಸಭೆ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕ್ಷೇತ್ರದ ಹಾಲಿ ಶಾಸಕರು ಜೆಡಿಎಸ್ನ ಜಿ.ಟಿ.ದೇವೇಗೌಡ.











Click it and Unblock the Notifications