ಮಂಡ್ಯ : ಜೆಡಿಎಸ್ ಮುಖಂಡನಿಗೆ ಕೊಲೆ ಬೆದರಿಕೆ ಪತ್ರ
ಮಂಡ್ಯ, ಜನವರಿ 08 : ಮಂಡ್ಯದ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಹತ್ಯೆ ಪ್ರಕರಣ ಇನ್ನು ಜನರ ನನೆಪಿನಲ್ಲಿದೆ. ಇದರ ನಡುವೆಯೇ ಮತ್ತೊಬ್ಬ ಪಕ್ಷದ ಮಖಂಡನಿಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.
ಕೆ.ಎಂ.ದೊಡ್ಡಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ವೆಂಕಟೇಶ್ಗೆ ಕೊಲೆ ಬೆದರಿಕೆ ಬಂದಿದೆ. ಅನಾಮಧೇಯ ವ್ಯಕ್ತಿ 'ನಿನ್ನ ಕೊಲೆ ತಕ್ಷಣದಲ್ಲೇ' ಎಂದು ಪತ್ರವೊಂದನ್ನು ವೆಂಕಟೇಶ್ ಅವರಿಗೆ ಕಳಿಸಿದ್ದಾರೆ.
ವೆಂಕಟೇಶ್ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರ ಕಟ್ಟಾ ಬೆಂಬಲಿಗರು. ಕೊಲೆ ಬೆದರಿಕೆ ಪತ್ರ ಬಂದ ಬಗ್ಗೆ ಅವರು ಸಚಿವರಿಗೂ ಮಾಹಿತಿ ನೀಡಿದ್ದಾರೆ. ಸಚಿವರು ವೆಂಕಟೇಶ್ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು, ಬೆದರಿಕೆ ಹಾಕಿದವರನ್ನು ಬಂಧಿಸಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ವೆಂಕಟೇಶ್ ಅವರು ಜೀವ ಬೆದರಿಕೆ ಪತ್ರ ಬಂದಿರುವ ಕುರಿತು ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಕಾಶ್ ಹತ್ಯೆ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಡಿಸೆಂಬರ್ 24ರ ಸಂಜೆ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.
ತೊಪ್ಪನಹಳ್ಳಿ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಏಳು ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.












Click it and Unblock the Notifications