Sumalatha vs HDK: ಕೆಲವರು ಅತಂತ್ರದ ಕನಸು ಕಾಣುತ್ತಿದ್ದಾರೆ; ಎಚ್ಡಿಕೆ ವಿರುದ್ಧ ಸುಮಲತಾ ಪರೋಕ್ಷ ವಾಗ್ದಾಳಿ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು ಬೇಸಿಗೆಯ ಬಿಸಿಲಿನಂತೆ ಹೆಚ್ಚಾಗುತ್ತಿದೆ. ಮತದಾನ ದಿನಾಂಕ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಪ್ರಚಾರದ ಭರಾಟೆ ಜೋರಾಗಿದ್ದು, ರಾಜ್ಯಕ್ಕೆ ರಾಷ್ಟ್ರೀಯ ನಾಯಕರ ಆಗಮನವಾಗುತ್ತಿದೆ. ಇದೇ ವೇಳೆ ರಾಜಕೀಯ ಪಕ್ಷಗಳ ಮತ್ತು ನಾಯಕರ ಆರೋಪ ಮತ್ತು ಪ್ರತ್ಯಾರೋಪಗಳು ಜೋರಾಗಿವೆ.
ಇಂದು (ಬುಧವಾರ, ಏಪ್ರಿಲ್ 26) ಮಂಡ್ಯ ಕ್ಷೇತ್ರಕ್ಕೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಿದ್ದು, ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ರೋಡ್ ಶೋ ನಡೆಸಿ, ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

ಇದಕ್ಕೂ ಮುನ್ನ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಈ ಬಾರಿ ಮಂಡ್ಯದಲ್ಲಿ ಬದಲಾವಣೆ ತರಬೇಕಿದೆ. ಕಳೆದ ಚುನಾವಣೆಯಲ್ಲಿ ಮಂಡ್ಯದ 7 ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರನ್ನು ಗೆಲ್ಲಿಸಿದ್ದೀರಿ. ಅವರು ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ?, ಒಂದನ್ನಾದರೂ ತೋರಿಸಲಿ ಎಂದು ವಾಗ್ದಾಳಿ ನಡೆಸಿದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸಿರುವ ಸುಮಲತಾ ಅಂಬರೀಶ್, ""ಮಂಡ್ಯದ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು ಮತ್ತು ಜೆಡಿಎಸ್- ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ದಳಪತಿಗಳ ಭದ್ರಕೋಟೆಯಾಗಿರುವ ಮಂಡ್ಯದಲ್ಲಿ ಕಮಲವನ್ನು ಅರಳಿಸಲು ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ. ಇದು ಈ ಬಾರಿಯ ಮಂಡ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ತರುವ ಮುನ್ಸೂಚನೆ ಇದೆ.
ಈ ಹಿಂದಿನಿಂದಲೂ ಜೆಡಿಎಸ್ ಶಾಸಕರು ಮತ್ತು ನಾಯಕರ ವಿರುದ್ಧ ಸಮರ ಸಾರುತ್ತಲೇ ಇರುವ ಸಂಸದೆ ಸುಮಲತಾ ಅಂಬರೀಶ್, ಮತ್ತೊಮ್ಮೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
"ಈ ಚುನಾವಣೆಯಲ್ಲಿ ಯಾರೋ ಒಬ್ಬರು ಅತಂತ್ರ ಪರಿಸ್ಥಿತಿ ಬರಲಿ ಅಂತ ಕನಸು ಕಾಣುತ್ತಿದ್ದಾರೆ. ಅತಂತ್ರವಾದರೆ ಮತ್ತೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬ ಹಗಲು ಕನಸು ಕಾಣುತ್ತಿದ್ದಾರೆ," ಎಂದು ಸುಮಲತಾ ಅಂಬರೀಶ್ ಪರೋಕ್ಷವಾಗಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಕುರಿತು ವ್ಯಂಗ್ಯವಾಡಿದರು.

"ಈ ಹಿಂದೆ ಉತ್ತರಪ್ರದೇಶ ಗೂಂಡಾ ರಾಜ್ಯ ಎಂದು ಕುಖ್ಯಾತಿಯಾಗಿತ್ತು. ಯೋಗಿ ಆದಿತ್ಯನಾಥ್ ಸಿಎಂ ಆದ ಬಳಿಕ ಅಲ್ಲಿನ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಜನ ತಾವು ಸಂಪಾದಿಸಿದ ಹಣವನ್ನು ರೌಡಿಗಳಿಗೆ ಮತ್ತು ರಾಜಕಾರಣಿಗಳಿಗೆ ಹಫ್ತಾ ನೀಡಬೇಕಿತ್ತು. ಯೋಗಿ ಸರ್ಕಾರ ಬಂದ ಮೇಲೆ ರೌಡಿಗಳನ್ನು ಮಟ್ಟ ಹಾಕಲಾಗಿದೆ. ಉತ್ತರಪ್ರದೇಶದಲ್ಲಿ ಜನರು ಈಗ ನಿರ್ಭಯವಾಗಿ ಓಡಾಡುತ್ತಿದ್ದಾರೆ," ಎಂದು ಸುಮಲತಾ ಅಂಬರೀಶ್ ತಿಳಿಸಿದರು.
ಇದಕ್ಕೂ ಮುನ್ನ ಮಂಡ್ಯದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 800 ಮೀಟರ್ ರೋಡ್ ಶೋ ನಡೆಸಿದರು. ರೋಡ್ ಶೋನಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ ಸೇರಿ ಹಲವರು ಭಾಗಿಯಾಗಿದ್ದರು. ಮಂಡ್ಯ ಸಂಜಯ್ ವೃತ್ತದಿಂದ ಮಹಾವೀರ ಥಿಯೇಟರ್ವರೆಗೆ ರೋಡ್ಶೋ ನಡೆಯಿತು.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications