ಯಡಿಯೂರಪ್ಪ ಕಾಲಿಗೆ ಬಿದ್ದ ಜೆಡಿಎಸ್ ಶಾಸಕ ಸುರೇಶ್ ಗೌಡ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರು ಸಿಎಂ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.
ಮಂಡ್ಯ, ಡಿಸೆಂಬರ್ 12: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರು ಸಿಎಂ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.
ಸಿಎಂ ಯಡಿಯೂರಪ್ಪ ಅವರು ಮಂಡ್ಯದಲ್ಲಿ ಪ್ರವಾಸ ಕೈಗೊಂಡಿದ್ದರು. ಹೀಗಾಗಿ ಆದಿಚುಂಚನಗಿರಿಗೆ ಹೋದಾಗ ಅವರು ಕಾರಿನಿಂದ ಇಳಿಯುತ್ತಿದ್ದಂತೆ ನಾಗಮಂಗಲ ಜೆಡಿಎಸ್ ಶಾಸಕ ಕಾಲಿಗೆ ಹೂಮಾಲೆ ಹಾಕಿ ಕಾಲಿಗೆ ಎರಗಿದರು. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ಬಿಟ್ಟು ಬಿಜೆಪಿ ಸೇರಲಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಸುರೇಶ್ ಗೌಡ ಅವರು, "ಸಿಎಂ ಯಡಿಯೂರಪ್ಪನವರು ಹಿರಿಯರು, ಹೀಗಾಗಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದೇನೆ. ಅವರ ಜಾಗದಲ್ಲಿ ಸಿದ್ದರಾಮಯ್ಯ ಇದ್ದಿದ್ದರೂ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಹಿಂದೆ ನನಗೆ ಬಿಜೆಪಿಯಿಂದ ಆಫರ್ ಬಂದಿದ್ದು ನಿಜ, ಆದರೆ ಈಗ ಅವರಿಗೆ ಯಾರ ಅವಶ್ಯಕತೆನೂ ಇಲ್ಲ. ನಾನು ಜೆಡಿಎಸ್ ಪಕ್ಷ ಬಿಟ್ಟು ಹೋಗುವ ಮಾತೇ ಇಲ್ಲ ಎಂದು ಹೇಳಿದರು.
ಕೆ.ಆರ್.ಪೇಟೆಯಲ್ಲಿ ಗೆದ್ದಿರುವ ನಾರಾಯಣ ಗೌಡ ನನ್ನ ಆತ್ಮೀಯ ಸ್ನೇಹಿತರು. ಚುನಾವಣೆಯಲ್ಲಿ ಅವರ ವಿರುದ್ದ ಪ್ರಚಾರ ಮಾಡಿದ್ದೇನೆ, ಆದರೆ ವೈಯಕ್ತಿಕವಾಗಿ ನಾವಿಬ್ರು ಸ್ನೇಹಿತರು. ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ಎರಡನೇ ಸ್ಥಾನ ಪಡೆದಿದೆ ಎಂದರು.
ಕಾಂಗ್ರೆಸ್ ನ ಸ್ಥಿತಿ ಯಾರಿಗೂ ಹೇಳತೀರದಾಗಿದೆ. ಜೆಡಿಎಸ್ ಪಕ್ಷದಲ್ಲಿ ನನಗೆ ಯಾವುದೇ ತೊಂದರೆ ಇಲ್ಲ. ನಾನು ಪಕ್ಷ ತ್ಯಜಿಸುವ ಕುರಿತು ಚಿಂತಿಸಿಲ್ಲ ಎಂದು ಆದಿಚುಂಚನಗಿರಿಯಲ್ಲಿ ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ಸ್ಪಷ್ಟ ಪಡಿಸಿದರು.












Click it and Unblock the Notifications