ವಿಧಾನಸಭೆ ಚುನಾವಣೆ: ಮಂಡ್ಯದಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರ: ಶಿವರಾಮೇಗೌಡ
ಮಂಡ್ಯ, ನವೆಂಬರ್ 2 : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಭದ್ರಕೋಟೆ ಸಂಪೂರ್ಣ ಛಿದ್ರವಾಗಲಿದೆ ಎಂದು ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ ಭವಿಷ್ಯ ನುಡಿದರು.
ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಕೊಪ್ಪ ಹೋಬಳಿ, ಬಿದರಕೋಟೆ, ಕೊಪ್ಪ, ಬಳ್ಳೇಕೆರೆ, ಚೊಟ್ಟನಹಳ್ಳಿ, ಹುರುಗಲವಾಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸೋಮವಾರ ಸಂಜೆ ಜನಸಂಪರ್ಕ ಸಭೆ ನಡೆಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ವೇಳೆ. "ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿ ಉಳಿದಿಲ್ಲ" ಎಂದು ಹೇಳಿದ್ದಾರೆ.
"ರಾಜ್ಯದಲ್ಲಿ ಬಿಜೆಪಿ ಸರ್ಕಾರ 40 ಪೆರ್ಸೆಂಟ್ ಕಮೀಷನ್ ನಡೆಸಿದರೆ, ನಾಗಮಂಗಲ ಶಾಸಕ 48 ಪೆರ್ಸೆಂಟ್ ಪಡೆದು ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಅಭಿವೃದ್ಧಿ ಕೆಲಸಗಳಲ್ಲಿ ಅವರು ಅಧಿಕ ಮಟ್ಟದ ಕಮೀಷನ್ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಒಂದು ಸಭೆಯಲ್ಲಿ ಮಾತನಾಡುವಾಗ ದುಡ್ಡು ಕೊಟ್ಟು ಕೆಲಸ ತಂದು, ಜನರಿಂದ ವಸೂಲಿ ಮಾಡಿಕೊಳ್ಳುತ್ತೇವೆ ಎಂದು ಅವರೇ ನೇರವಾಗಿ ಹೇಳಿದ್ದಾರೆ. ಇಂತಹ ಶಾಸಕರು ಯಾರಿಗಾದರೂ ಬೇಕಾ?" ಎಂದು ಪ್ರಶ್ನಿಸಿದರು.
"ಸರಕಾರದ ಕೆಲಸಗಳನ್ನು ದುಡ್ಡು ಕೊಟ್ಟು ತಂದು ಮಾಡುವ ಅಗತ್ಯವಿಲ್ಲ, ಇದೆಲ್ಲಾ ದುಡ್ಡು ಹೊಡೆಯುವ ಕಾರ್ಯತಂತ್ರ ಎಂದು ಆಕ್ರೋಶವ್ಯಕ್ತಪಡಿಸಿದ ಅವರು, ಇದರ ವಿರುದ್ಧ ನಾವೇನು ಹೋರಾಟ ಮಾಡುವ ಅಗತ್ಯವಿಲ್ಲ, ಜನರೇ ಹೋರಾಟ ಮಾಡಲಿದ್ದಾರೆ" ಎಂದು ತಿಳಿಸಿದ್ದಾರೆ.

ಜೆಡಿಎಸ್ ಭದ್ರಕೋಟೆ ಛಿದ್ರ
ಈ ಹಿಂದೆ ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿದ್ದರೂ ಸಹ ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರಿದ್ದರೂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಲಿಲ್ಲ. ನಂತರ ನಡೆದ ಎರಡು ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡು ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹೀಗಾಗಿ ಜೆಡಿಎಸ್ ಕೋಟೆ ಹಂತ ಹಂತವಾಗಿ ಕುಸಿಯುತ್ತಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಭದ್ರಕೋಟೆ ಛಿದ್ರವಾಗಲಿದೆ ಎಂದರು.

ಬಿಜೆಪಿಯಲ್ಲಿರುವವರೇ ನಮ್ಮನ್ನ ಬೆಂಬಲಿಸುತ್ತಾರೆ
ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸೆ ಹೋಗಿರುವ ಸ್ಥಳೀಯ ಮುಖಂಡರು ನನ್ನ ಪ್ರಾಡೆಕ್ಟ್ಗಳಾಗಿದ್ದಾರೆ. ಈಗ ಅವರು ತಮ್ಮ ಕೆಲಸ ಮಾಡಿಸಿಕೊಳ್ಳಲು ಬಿಜೆಪಿಯಲ್ಲಿದ್ದಾರೆ. ಆದರೆ ಮುಂದಿನ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಈ ಎಲ್ಲರೂ ನನ್ನ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಬಿಜೆಪಿ ಅರಳುತ್ತದೆ
ಬಿಜೆಪಿ ನೀಡಿದ ಸದೃಢ ಆಡಳಿತವನ್ನು ಮೆಚ್ಚಿ ಜೆಡಿಎಸ್-ಕಾಂಗ್ರೆಸ್ ಪಕ್ಷದವರು ಬಿಜೆಪಿ ಸೇರುವುದಕ್ಕೆ ಒಲವು ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ ವೇಳೆಗೆ ಅಂತಿಮ ಚಿತ್ರಣ ಹೊರಬೀಳಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸೇರಲು ಬಯಸಿರುವ ಕಾಂಗ್ರೆಸ್-ಜೆಡಿಎಸ್ ಪಕ್ಷದ ಪ್ರಮುಖರ ಜೊತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದೇವೆ. ಡಿಸೆಂಬರ್ ವೇಳೆಗೆ ಪಕ್ಷ ಸೇರ್ಪಡೆ ಬಗ್ಗೆ ನಿರ್ಧಾರವಾಗಲಿದೆ. ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದ ಮಂಡ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೆ. ಸಿ. ನಾರಾಯಣಗೌಡರು ಗೆದ್ದು ತೋರಿಸಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಇನ್ನಷ್ಟು ಒಳ್ಳೆಯ ನಾಯಕರು ಬಿಜೆಪಿ ಸೇರಲಿದ್ದು, ಬಿಜೆಪಿಗೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಮತ್ತಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಅರಳುವುದು ನಿಚ್ಚಳವಾಗಿದೆ ಎಂದು ಭವಿಷ್ಯ ನುಡಿದರು.

ಜನರು ಸ್ಪಷ್ಟ ಬಹುಮತ ನಿರೀಕ್ಷಿಸುತ್ತಿದ್ದಾರೆ
ಬಿಜೆಪಿಯೊಳಗೆ ಮುಂದಿನ ಚುನಾವಣೆಗೆ ಪೂರ್ವಸಿದ್ಧತೆಗಳು ಆರಂಭಗೊಂಡಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ, ಯಡಿಯೂರಪ್ಪ ಸೇರಿದಂತೆ ಎಲ್ಲರೂ ಚುನಾವಣೆ ತಯಾರಿ ನಡೆಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಅತಂತ್ರ ಸರಕಾರ ಇನ್ನು ಯಾವತ್ತೂ ಬರುವುದಿಲ್ಲ ಎಂದು ದೃಢವಾಗಿ ಹೇಳಿದರು.
ಅತಂತ್ರ ಸರ್ಕಾರದ ಸ್ಥಿತಿ ಬಗ್ಗೆ ಜನರಿಗೆ ಗೊತ್ತಿದೆ. 2006ರಲ್ಲಿ ಬಿಜೆಪಿ- ಜೆಡಿಎಸ್ ಜೊತೆ ಸೇರಿ ಸರಕಾರ ಮಾಡಿದ್ದೆವು. ಅಂದು ಮೋಸ ಮಾಡಿ ಸರಕಾರ ಬೀಳಿಸಿದರು. 2018ರಲ್ಲಿ ಮತ್ತೆ ಕಾಂಗ್ರೆಸ್ ಜೊತೆ ಸೇರಿ ಜೆಡಿಎಸ್ ಸರಕಾರ ರಚನೆ ಮಾಡಿದರು. ಅದೂ ಬಿದ್ದುಹೋಯಿತು. ಈ ಕಾರಣದಿಂದ ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನರು ಸ್ಪಷ್ಟ ಬಹುಮತ ನೀಡಲಿದ್ದು, ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವುದು ಖಚಿತ ಎಂದು ಹೇಳಿದರು.












Click it and Unblock the Notifications