ಅಪಘಾತ; ಚಿಕಿತ್ಸೆ ಫಲಿಸದೇ ಮಂಡ್ಯದ ಪತ್ರಕರ್ತ ಸಾವು
ಮಂಡ್ಯ, ಸೆಪ್ಟೆಂಬರ್ 19: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ರಕರ್ತ ಹರೀಶ್ (30) ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ನಾಗಮಂಗಲ ತಾಲ್ಲೂಕಿನ ಜೋಡಿನರಲೆಕೆರೆ ಮೂಲದವಾರದ ಹರೀಶ್ ಮೈಸೂರಿನ ಸುಯೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸೆ.17 ರಂದು ರಾತ್ರಿ ನಾಗಮಂಗಲದಿಂದ ಜೋಡಿನರಲೆಕೆರೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ವಾಹನ ಸ್ಕಿಡ್ ಆಗಿ ಬಿದ್ದಿದ್ದರು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮೊದಲಿಗೆ ನಾಗಮಂಗಲದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸುಯೋಗ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಕನ್ನಡಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಪ್ರಾರಂಭಿಸಿದ ಹರೀಶ್ ಅವರು ಪ್ರಜಾವಾಣಿ, ವಿಜಯವಾಣಿ ಪತ್ರಿಕೆಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದರು. ಅಲ್ಲದೆ, ಸ್ಥಳೀಯ ಪತ್ರಿಕೆಗಳಿಗೂ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು.
ಹರೀಶ್ ಅವರಿಗೆ ಪೋಷಕರು, ಸಹೋದರ, ಸಹೋದರಿ ಇದ್ದಾರೆ. ಹರೀಶ್ ಅವರ ಅಂತ್ಯಕ್ರಿಯೆ ಇಂದು ಜೋಡಿನರಲೆಕೆರೆಯಲ್ಲಿ ನಡೆಯಲಿದೆ.












Click it and Unblock the Notifications