ಜೂನ್ 1ರಿಂದ ವಿದ್ಯುತ್ ಬಿಲ್ ಕಟ್ಟಬೇಡಿ: ಡಿ.ಕೆ ಶಿವಕುಮಾರ್ ಹಿಂಗೆ ಹೇಳಿದ್ದ ಯಾಕೆ?
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಹಲವು ಕೊಡುಗೆಗಳನ್ನು ಘೋಷಣೆ ಮಾಡುತ್ತಿವೆ. ಕಾಂಗ್ರೆಸ್ 5 ಪ್ರಮುಖ ಕೊಡುಗೆಗಳನ್ನು ಘೋಷಣೆ ಮಾಡುವ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸುತ್ತಿದೆ, ಇದರಲ್ಲಿ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆಯೂ ಒಂದಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಳವಳ್ಳಿಯಲ್ಲಿ ಮಾತನಾಡುವ ಸಂದರ್ಭದಲ್ಲಿ ಜೂನ್ 1ರಿಂದ ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಹೇಳಿದ್ದಾರೆ. ಮೇ 15ರಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಜೂನ್ 1ರಿಂದ ಕರೆಂಟ್ ಬಿಲ್ ಕಟ್ಟುವಂತಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈ ದೇಶದ ಶಕ್ತಿಯಾಗಿದೆ. ನಾವು ಅಧಿಕಾರಕ್ಕೆ ಬಂದರೆ ರಾಜ್ಯದ ಅಭಿವೃದ್ಧಿಯಾಗಲಿದೆ. ಕಳೆದ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಒಂದೂ ಸೀಟು ಗೆಲ್ಲಲು ಸಾಧ್ಯವಾಗಲಿಲ್ಲ, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕೂಡ ಡಿಕೆಶಿ ಟೀಕೆ ಮಾಡಿದರು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕುಮಾರಸ್ವಾಮಿಗೆ ಆಡಳಿತ ನಡೆಸಲು ಅಧಿಕಾರ ಕೊಟ್ಟೆವು ಆದರೆ, ಕುಮಾರಸ್ವಾಮಿ ಅದನ್ನು ಉಳಿಸಿಕೊಳ್ಳಲಿಲ್ಲ ಎಂದು ಆರೋಪಿಸಿದರು. ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವಕ್ಕೆ ಜನ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಆಡಳಿತದ ಅವಧಿಯಲ್ಲಿ ನಿಮ್ಮ ಬದುಕಿನಲ್ಲಿ ಬದಲಾವಣೆಯಾಗಿದ್ಯಾ? ಮೇ 10ರಂದು ಮತದಾರರು ನಿಮ್ಮ ಭವಿಷ್ಯವನ್ನು ನೀವೇ ತೀರ್ಮಾನಿಸಿ, ನಿಮಗೆ ಒಳ್ಳೆಯ ದಿನಗಳನ್ನು ನಾವು ತರುತ್ತೇವೆ. ಬಿಜೆಪಿ ರಾಜ್ಯ, ರಾಷ್ಟ್ರದಲ್ಲಿ ದುಷ್ಟ ಆಡಳಿತ ನೀಡುತ್ತಿದೆ. ಮೂರುವರೆ ವರ್ಷ ಅವರು ಆಡಳಿತ ಮಾಡಿದರು. ಏನೂ ಬದಲಾವಣೆ ಆಗಿಲ್ಲ ಎಂದು ಡಿಕೆಶಿ ಹೇಳಿದರು.
ಜೂನ್ 1ರಿಂದ ವಿದ್ಯುತ್ ಬಿಲ್ ಕಟ್ಟಬೇಡಿ
ಕಾಂಗ್ರೆಸ್ ರಾಜ್ಯದ ಜನತೆಗೆ 5 ಗ್ಯಾರಂಟಿ ನೀಡಿದೆ. ಮೇ 15ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಜೂನ್ 1ರಿಂದ ನೀವು ಕರೆಂಟ್ ಬಿಲ್ ಕಟ್ಟಬೇಡಿ. ವರ್ಷಕ್ಕೆ ಪ್ರತಿ ಕುಟುಂಬಕ್ಕೆ 24 ಸಾವಿರ ಕೊಡ್ತೀವಿ. ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ಕೊಡ್ತೀವಿ ಎಂದು ಡಿಕೆಶಿ ಭರವಸೆ ನೀಡಿದರು.
ಐದು ಭರವಸೆ ನೀಡಿರುವ ಕಾಂಗ್ರೆಸ್
ಕಾಂಗ್ರೆಸ್ ಈ ಬಾರಿ ಚುನಾವಣೆಗೆ ಮುನ್ನ ರಾಜ್ಯದ ಜನತೆಗೆ 5 ಪ್ರಮುಖ ಭರವಸೆಗಳನ್ನು ನೀಡಿದೆ. ಗೃಹ ಜ್ಯೋತಿ ಹೆಸರಿನಲ್ಲಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಹೆಸರಿನಲ್ಲಿ ಮನೆಯ ಒಡತಿಗೆ ಪ್ರತಿ ತಿಂಗಳು 2000 ರುಪಾಯಿ ಹಣ, ಯುವ ನಿಧಿ ಯೋಜನೆ ಹೆಸರಿನಲ್ಲಿ ಪದವೀಧರರಿಗೆ ಮಾಸಿಕ 3000 ರುಪಾಯಿ, ಅನ್ನಭಾಗ್ಯ ಹೆಸರಿನಲ್ಲಿ ಬಿಪಿಎಲ್ದಾರರಿಗೆ ತಲಾ 10 ಕೆಜಿ ಅಕ್ಕಿ ಮತ್ತು ಮಹಿಳೆಯರಿಗೆ ಉಚಿತ್ ಬಸ್ ಪ್ರಯಾಣದ ಭರವಸೆ ನೀಡಿದೆ.












Click it and Unblock the Notifications