Karnataka Budget 2023: ಮಂಡ್ಯ ಜಿಲ್ಲೆಗೆ ಸಿಕ್ಕಿದೇನು? ಸಂಪೂರ್ಣ ವಿವರ ಇಲ್ಲಿದೆ
ಬಸವರಾಜ ಬೊಮ್ಮಾಯಿ ಅವರು ಬಜೆಟ್ನಲ್ಲಿ ಮಂಡ್ಯ ಜಿಲ್ಲೆಗೆ ಏನೆಲ್ಲ ಘೋಷಣೆ ಮಾಡಿದ್ದಾರೆ ಅನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಮಂಡ್ಯ, ಫೆಬ್ರವರಿ, 17: ಮೈಶುಗರ್ ಆವರಣದಲ್ಲಿಲ್ಲಿ ಎಥನಾಲ್ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗುತ್ತದೆ. ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಕೆಐಟಿ)ಗಳಾಗಿ ಉನ್ನತೀಕರಿಸಲು ಯೋಜನೆ ರೂಪಿಸಲಾಗಿದೆ. ಆಯ್ಕೆ ಮಾಡಿಕೊಂಡಿರುವ 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ಕೆ.ಆರ್. ಪೇಟೆ ಇಂಜಿನಿಯರಿಂಗ್ ಕಾಲೇಜ್ ಅನ್ನು ಇದರಲ್ಲಿ ಸೇರಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್ ಮಾಹಿತಿ ನೀಡಿದರು.
ಮಾಧ್ಯಮದವರ ಬಳಿ ಮಾತನಾಡಿದ ಅವರು, ಕಳೆದ ವರ್ಷ ಮೊದಲ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಥಗಿತಗೊಂಡಿದ್ದ ಮೈಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಪ್ರಾರಂಭಿಸುವುದಾಗಿ ಹೇಳಿದ್ದರು. ಅದರಂತೆಯೇ ಕಾರ್ಖಾನೆಯನ್ನು ಪ್ರಾರಂಭಿಸುವ ಮೂಲಕ ಮಂಡ್ಯ ಜಿಲ್ಲೆಯ ಜನತೆಗೆ ಸಿಹಿ ಸುದ್ದಿ ನೀಡಿದ್ದರು. ಈ ಬಾರಿ ಮತ್ತೂ ಒಂದು ಹೆಜ್ಜೆ ಮುಂದೆ ಇಟ್ಟು ಕಾರ್ಖಾನೆ ಆವರಣದಲ್ಲಿ ಎಥನಾಲ್ ಘಟಕ ಸ್ಥಾಪನೆಗೆ ಹಸಿರು ನಿಶಾನೆ ತೋರಿಸಿದ್ದಾರೆ. ಈ ಮೂಲಕ ರೈತರಿಗೆ ಹೊಸ ಯೋಜನೆಯನ್ನು ಘೋಷಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಚಿರತೆ ಸೆರೆ ಕಾರ್ಯಪಡೆ ರಚನೆ
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಿರತೆ ಹಾವಳಿಯನ್ನು ತಡೆಗಟ್ಟುವ ಉದ್ದೇಶದಿಂದ ಚಿರತೆ ಸೆರೆ ಕಾರ್ಯಪಡೆ ರಚನೆಗೆ 199 ಸಿಬ್ಬಂದಿ ನೇಮಕ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದು ಜಿಲ್ಲೆಯ ಜನರಿಗೆ ತುಸು ನೆಮ್ಮದಿ ತರಿಸಿದೆ ಎಂದು ತಿಳಿಸಿದ್ದಾರೆ. ಇನ್ನು ಮಳವಳ್ಳಿ ತಾಲೂಕಿನ ಪೂರಿಗಾಲಿ ಹನಿ ನೀರಾವರಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸುವುದಾಗಿ ತಿಳಿಸುವ ಮೂಲಕ ಆ ಭಾಗದ ನೀರಾವರಿ ಯೋಜನೆಗೆ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ ಎಂದರು.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್)ನಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ಗಳನ್ನು ಪ್ರಾರಂಭಿಸಲು ಅನುಮತಿ ನೀಡಿದ್ದಾರೆ. ಮಂಡ್ಯ ವಿಶ್ವ ವಿದ್ಯಾಲಯವನ್ನು ಸಂಯೋಜಿತ ವಿವಿಯಾಗಿ ಪರಿವರ್ತಿಸುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಹಾಗೆಯೇ ಜಿಲ್ಲಾ ಕ್ರೀಡಾಂಗಣದಲ್ಲಿ ಸುಸಜ್ಜಿತ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ ಬಗ್ಗೆಯೂ ಬಜೆಟ್ನಲ್ಲಿ ಪ್ರಸ್ತಾಪಿಸಿದ್ದು, ಈ ಮೂಲಕ ಜಿಲ್ಲೆಯ ಜನರಿಗೆ ಸಂತಸದ ಸುದ್ದಿ ನೀಡಿದ್ದಾರೆ ಎಂದು ತಿಳಿಸಿದರು.












Click it and Unblock the Notifications