Karnataka Election 2023: ಪ್ರಜಾಧ್ವನಿ ಯಾತ್ರೆಯಲ್ಲಿ ಜನರ ಮೇಲೆ 500ರ ನೋಟುಗಳನ್ನು ಎಸೆದ ಡಿಕೆ ಶಿವಕುಮಾರ್
ಮಂಡ್ಯ, ಮಾರ್ಚ್. 29: ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಮಂಗಳವಾರ ರೋಡ್ ಶೋ ವೇಳೆ ಜನರ ಮೇಲೆ ಕರೆನ್ಸಿ ನೋಟುಗಳ ಸುರಿಮಳೆಗೈದಿದ್ದಾರೆ. ಮಂಡ್ಯ ಜಿಲ್ಲೆಯ ಬೇವಿನಹಳ್ಳಿಯಲ್ಲಿ ಪ್ರಚಾರ ಮಾಡುತ್ತಿದ್ದ ಶಿವಕುಮಾರ್ ಬಸ್ನ ಮೇಲಿನಿಂದ 500 ರೂಪಾಯಿಯ ನೋಟುಗಳನ್ನು ಎಸೆದಿದ್ದಾರೆ.
#WATCH | Karnataka Congress Chief DK Shivakumar was seen throwing Rs 500 currency notes on the artists near Bevinahalli in Mandya district during the ‘Praja Dhwani Yatra’ organized by Congress in Srirangapatna. (28.03) pic.twitter.com/aF2Lf0pksi
— ANI (@ANI) March 29, 2023
ಎಎನ್ಐ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಬಸ್ ಮೇಲೆ ನಿಂತಿರುವ ಕೆಪಿಸಿಸಿ ಅಧ್ಯಕ್ಷ ತಮ್ಮ ಜೇಬಿನಿಂದ ಹಣ ತೆಗೆದು ಮೆರವಣಿಗೆ ನೋಡುತ್ತಿದ್ದ ಜನರ ಮೇಲೆ ಎಸೆದಿದ್ದಾರೆ. ಡಿಕೆ ಶಿವಕುಮಾರ್ ಮಂಡ್ಯದ ಬೇವಿನಹಳ್ಳಿಯಲ್ಲಿ ಕಾಂಗ್ರೆಸ್ನ "ಪ್ರಜಾಧ್ವನಿ ಯಾತ್ರೆ" ನಡೆಸುತ್ತಿದ್ದರು. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಪ್ರಬಲ ಒಕ್ಕಲಿಗ ಸಮುದಾಯದ ಭದ್ರಕೋಟೆ ಎಂದೇ ಹೇಳಲಾಗುವ ಮಂಡ್ಯದಲ್ಲಿ ಡಿಕೆ ಶಿವಕುಮಾರ್ ಅವರು ವ್ಯಾಪಕ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ನಿಂದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಂಡಿರುವ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂದು ಪಟ್ಟು ಹಿಡಿದಂತೆ ಕಾಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಭಾರೀ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಮಂಗಳವಾರ ಮಂಡ್ಯದ ಶ್ರೀರಂಗಪಟ್ಟಣದ ಪ್ರಜಾಧ್ವನಿ ಕಾರ್ಯಕ್ರಮ ರೋಡ್ ಶೋ ನಡೆಸಿ ಮಾತನಾಡಿರುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ನಾವು ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜೆಡಿಎಸ್ಗೆ ಬೆಂಬಲ ನೀಡಿ ಅಧಿಕಾರ ಕೊಟ್ಟೆವು. ಆದರೆ ಅವರು ಅಧಿಕಾರ ಉಳಿಸಿಕೊಳ್ಳಲಿಲ್ಲ. 2019ರ ಲೋಕಸಭೆ ಚುನಾವಣೆಯಲ್ಲಿ ನಾನು ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಿದ್ದೆ. ನೀವು ಅವರಿಗೆ ಅವಕಾಶ ಕೊಟ್ಟು ಆಗಿದೆ. ನನಗೂ ಒಂದು ಅವಕಾಶ ನೀಡಿ" ಎಂದಿದ್ದಾರೆ.
"ಮಂಡ್ಯದಲ್ಲಿ ಯಾರೇ ಅಭ್ಯರ್ಥಿ ನಿಂತರು ನಾನು, ಸಿದ್ದರಾಮಯ್ಯ ಅವರು ಅಭ್ಯರ್ಥಿ ಎಂದು ಪಕ್ಷಕ್ಕೆ ಮತಹಾಕಿ. ಇಲ್ಲಿರುವ ನೀವುಗಳು ಜೆಡಿಎಸ್ ಮತದಾರರನ್ನು ಸೆಳೆದು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಹೇಳಬೇಕು. ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ. ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಎಂದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ, ಮತ್ತೆ 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ" ಎಂದು ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡಿಕೆ ಶಿವಕುಮಾರ್ ಈ ಚುನಾವಣೆಯಲ್ಲಿಯೂ ತಮ್ಮ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ಈಗಾಗಲೇ ಹಲವು ಚುನಾವಣಾ ಪೂರ್ವ ಸಮೀಕ್ಷೆಗಳು ಡಿಕೆ ಶಿವಕುಮಾರ್ಗೆ ಗೆಲುವು ಎಂದು ಭವಿಷ್ಯ ನುಡಿದಿವೆ. ಸೋಲಿಲ್ಲದ ಸರದಾರ ಎಂದು ಕರೆಸಿಕೊಳ್ಳುವ ಅವರಿಗೆ ಕ್ಷೇತ್ರದಲ್ಲಿ ಪ್ರಬಲ ಪೈಪೋಟಿಯಲ್ಲ. ಇದು ಕೂಡ ಅವರ ಗೆಲುವಿಗೆ ಮುಖ್ಯ ಕಾರಣವಾಗುತ್ತಿದೆ.
ಜಾತ್ಯತೀತ ಜನತಾ ದಳದ ಭದ್ರಕೋಟೆ ಎಂದೇ ಹೇಳಲಾಗುವ ಮಂಡ್ಯದಲ್ಲಿ ಕಾಂಗ್ರೆಸ್ನ ಒಕ್ಕಲಿಗ ನಾಯಕ, ಪಕ್ಷದ ಮತ ನೆಲೆಯನ್ನು ಬಲಪಡಿಸಲು ಪ್ರಯತ್ನಿಸುತ್ತಿದ್ದಾರೆ. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಜೆಡಿಎಸ್ ಏಳು ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿಯೂ ಜಿಲ್ಲೆಯನ್ನು ತಮ್ಮ ವಶದಲ್ಲಿ ಇಟ್ಟುಕೊಳ್ಳಲು ಜೆಡಿಎಸ್ ಸಹ ತನ್ನ ಪಂಚರತ್ನ ರಥಯಾತ್ರೆ ಮೂಲಕ ಪ್ರಚಾರ ನಡೆಸಿದೆ.
224 ಸದಸ್ಯ ಬಲದ ವಿಧಾನಸಭೆಗೆ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಜೆಡಿಎಸ್ ಕೂಡ ಈಗಾಗಲೇ ಹಲವು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಬಿಜೆಪಿ ಈವರೆಗೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ಏಪ್ರಿಲ್ ಮೊದಲ ವಾರದಲ್ಲಿ ಪಟ್ಟಿ ಬಿಡುಗಡೆ ಮಾಡುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.












Click it and Unblock the Notifications