Sumalatha Ambarish: ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರ ಕ್ಷಮೆ ಕೇಳಿದ ಸುಮಲತಾ ಅಂಬರೀಶ್; ಕಾರಣವೇನು?
ಕರ್ನಾಟಕದ 2023ರ ವಿಧಾನಸಭೆ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎಲ್ಲ ಅಭ್ಯರ್ಥಿಗಳು ಮತ್ತು ಪಕ್ಷಗಳು ಗೆಲುವಿನ ಮಂತ್ರವನ್ನಷ್ಟೇ ಪಠಿಸುತ್ತಿದ್ದಾರೆ. ಮೇ 10ರಂದು ನಡೆಯುವ ಮತದಾನಕ್ಕೂ ಮುನ್ನ ಮತದಾರನ ಮನಗೆಲ್ಲಲು ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದಾರೆ.
ಈ ಬಾರಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಹವಣಿಸುತ್ತಿದ್ದು, ಕರುನಾಡ ಕುರುಕ್ಷೇತ್ರ ಅಖಾಡದಲ್ಲಿ ಎದುರಾಳಿಗಳನ್ನು ಸೋಲಿಸಲು ತಂತ್ರ-ಪ್ರತಿತಂತ್ರದ ಮೊರೆ ಹೋಗಿವೆ.

ಇದೇ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅವರು, ನಾಗಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ್ದಾರೆ.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ ವಿಚಾರವಾಗಿ ಮಾತನಾಡಿದ ಸುಮಲತಾ ಅಂಬರೀಶ್, "ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರ ತರಿಸಿದರೆ, ನೋವುಂಟು ಮಾಡಿದರೆ ಕ್ಷಮೆಯಾಚಿಸುತ್ತೇನೆ. ಆದರೆ ನಿಮ್ಮ ನಾಯಕರ ನಡೆಗೆ ನಾನು ಹೊಣೆ ಅಲ್ಲ," ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.
"ನಿಮ್ಮ ರಾಜ್ಯಾಧ್ಯಕ್ಷರು (ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್) ನನ್ನ ಬಗ್ಗೆ ಕೊಟ್ಟಿರುವ ಹೇಳಿಕೆಗಳನ್ನು ಗಮನಿಸಿ. ಆ ನಂತರ ನನ್ನ ನಿರ್ಧಾರ ಬಗ್ಗೆ ಪ್ರಶ್ನೆ ಮಾಡಿ ಎಂದ ಸುಮಲತಾ, ಬಿಜೆಪಿ ಪಕ್ಷ ಅತ್ಯಂತ ಗೌರವದಿಂದ ಆಹ್ವಾನಿಸಿತು," ಎಂದು ಹೇಳಿದ್ದಾರೆ.
ಬೆಂಗಳೂರು, ಮೈಸೂರಿನಲ್ಲಿ ರಸ್ತೆಗೆ ಅಂಬರೀಶ್ ಹೆಸರಿಟ್ಟಿದ್ದು ಬಿಜೆಪಿ
ನೀವು ಬಿಜೆಪಿ ಪಕ್ಷಕ್ಕೆ ಬಂದರೆ ನಮಗೆ ಶಕ್ತಿ ಸಿಗಲಿದೆ ಎಂಬ ಮಾತು ಹೇಳಿದ್ದರು. ಬಿಜೆಪಿ ಸರ್ಕಾರ ಬೆಂಗಳೂರು ಮತ್ತು ಮೈಸೂರಿನಲ್ಲಿ ರಸ್ತೆಗೆ ಅಂಬರೀಶ್ ಹೆಸರಿಟ್ಟಿದ್ದಾರೆ. 12 ಕೋಟಿ ವೆಚ್ಚದಲ್ಲಿ ಸುಂದರ ಸ್ಮಾರಕ ನಿರ್ಮಿಸಿದ್ದಾರೆ. ಅಂಬರೀಶ್ ಅವರು ಬಿಜೆಪಿ ಪಕ್ಷದಲ್ಲಿದ್ದರಾ? ಎಂದು ಸಂಸದೆ ಸುಮಲತಾ ಪ್ರಶ್ನಿಸಿದರು.

"ಕಾಂಗ್ರೆಸ್ ಪಕ್ಷಕ್ಕೆ 27 ವರ್ಷ ಕಾಂಗ್ರೆಸ್ ಸೇವೆ ಸಲ್ಲಿಸಿದ್ದಾರೆ. ಈ ನಡುವೆ ಜೆಡಿಎಸ್ನ ಹಲವರು ಅಂಬರೀಶ್ ಆತ್ಮೀಯರು ಎಂದು ಹೇಳಿಕೊಂಡು ಓಡಾಡ್ತಿದ್ದಾರೆ. ಆತ್ಮೀಯತೆ ಇದ್ಮೇಲೆ ಅಧಿಕಾರದಲ್ಲಿದ್ದಾಗ ಅವರೇಕೆ ಸ್ಮಾರಕ ನಿರ್ಮಿಸುವ ಕೆಲಸ ಮಾಡಲಿಲ್ಲ," ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ನಿಂದ ಅಂಬರೀಶ್ಗೆ ಅವಮಾನ
ನಿಮ್ಮ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಕೊನೆಯ ಎರಡು ವರ್ಷ ಕಾಂಗ್ರೆಸ್ ಪಕ್ಷದಲ್ಲಿ ಅವಮಾನವಾಗಿತ್ತು. ಗೌರವ ನೀಡದೆ ನಡೆಸಿಕೊಂಡರು, ಅದಕ್ಕೆಲ್ಲಾ ನಾನೇ ಸಾಕ್ಷಿ. ಅವಮಾನ ಆಗಿದ್ದರಿಂದ 2018ರಲ್ಲಿ ಚುನಾವಣೆಗೆ ನಿಲ್ಲಬಾರದು ಎಂದು ಬಿ-ಫಾರಂ ಎಸೆದಿದ್ದರು. ಅಂತಹ ಸ್ವಾಭಿಮಾನ ಅಂಬರೀಶ್ಗೆ ಇತ್ತು ಎಂದು ಕಾಂಗ್ರೆಸ್ ವಿರುದ್ಧ ಮಂಡ್ಯ ಸಂಸದೆ ಸಮಲತಾ ಅಂಬರೀಶ್ ಕಿಡಿಕಾರಿದರು.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.












Click it and Unblock the Notifications