ಚಂದಗಾಲು ಶಿವಣ್ಣರ ನಡೆಯಿಂದ ಜೆಡಿಎಸ್ ಗೆ ಹಿನ್ನಡೆಯಾಗುತ್ತಾ?
ಮಂಡ್ಯ, ಏಪ್ರಿಲ್ 21: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ನ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ ಚಂದಗಾಲು ಎನ್. ಶಿವಣ್ಣ ಅವರು ಟಿಕೆಟ್ ಸಿಗುವುದಿಲ್ಲ ಎಂಬುದು ಗೊತ್ತಾಗುತ್ತಿದ್ದಂತೆ ಬಂಡಾಯ ಎದ್ದಿದ್ದು ಬಿಜೆಪಿಗೆ ಸೇರ್ಪಡೆಗೊಳ್ಳುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.
ಇದರಿಂದ ಮಂಡ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆ ಹಿನ್ನಡೆಯಾಗುತ್ತಾ? ಬಿಜೆಪಿಗೆ ಅನುಕೂಲವಾಗುತ್ತಾ ಎಂಬುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಚಂದಗಾಲು ಎನ್. ಶಿವಣ್ಣ ಅವರು ಬಿಜೆಪಿ ಸೇರ್ಪಡೆಯಾಗುವ ಮೂಲಕ ಮಾತೃಪಕ್ಷ ಜೆಡಿಎಸ್ ಗೆ ಸೆಡ್ಡು ಹೊಡೆದಿರುವುದು ಒಂದಷ್ಟು ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರ ರಾಜಕೀಯ ವಿರೋಧಿ ಸಿ.ಪಿ.ಯೋಗೇಶ್ವರ್ ಅವರ ಮೂಲಕ ಚಂದಗಾಲು ಶಿವಣ್ಣ ಅವರು ಬಿಜೆಪಿ ಸೇರ್ಪಡೆಯಾಗಿದ್ದು, ಇದರಿಂದ ಬಿಜೆಪಿಗೆ ಎಷ್ಟರ ಮಟ್ಟಿಗೆ ಲಾಭವಾಗುತ್ತೆ, ಜೆಡಿಎಸ್ಗೆಷ್ಟು ನಷ್ಟವಾಗುತ್ತೆ ಎನ್ನುವ ಲೆಕ್ಕಚಾರಕ್ಕೆ ಉತ್ತರ ಸಿಗಬೇಕಾದರೆ ಚುನಾವಣೆ ಮುಗಿದ ಮೇಲೆಯೇ ಗೊತ್ತಾಗುವುದು.

ಚಂದಗಾಲು ಶಿವಣ್ಣ ಅವರು 2015ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲೂ ಜೆಡಿಎಸ್ ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಜಿಲ್ಲಾ ಪಂಚಾಯಿತಿ ಪ್ರವೇಶಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮತ್ತೆ ತನ್ನ ಮಾತೃ ಪಕ್ಷಕ್ಕೆ ವಾಪಸ್ಸಾಗಿದ್ದರು.
ನಂತರದಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸುವ ಮೂಲಕ ತಮ್ಮದೇಯಾದ ಛಾಪು ಮೂಡಿಸಿದ್ದ ಶಿವಣ್ಣ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಚಿಸಿದ್ದರು. ಇದಕ್ಕಾಗಿ ಪೂರ್ವ ತಯಾರಿ ನಡೆಸಿದ್ದ ಅವರು, ಇತ್ತೀಚೆಗಷ್ಟೇ ಮಂಡ್ಯ ಸರ್ ಎಂ.ವಿ. ಕ್ರೀಡಾಂಗಣದಲ್ಲಿ ಸಾಮೂಹಿಕ ಸರಳ ವಿವಾಹ ನಡೆಸಿ ಅಧಿಕೃತವಾಗಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದರು.
ಆದರೆ, ಜೆಡಿಎಸ್ ವರಿಷ್ಠರಿಂದ ಟಿಕೆಟ್ ನೀಡವ ಸಂಬಂಧ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ತನ್ನ ಬೆಂಬಲಿಗರ ಸಭೆ ನಡೆಸಿದ ಎನ್. ಶಿವಣ್ಣ ಅವರು ತಮ್ಮ ಬೆಂಬಲಿಗರ ಅಭಿಪ್ರಾಯದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತ ಕುಮಾರ್ ಸಮ್ಮುಖದಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ತೆನೆ ಇಳಿಸಿ ಕಮಲ ಮುಡಿದಿದ್ದಾರೆ.
ಚುನಾವಣೆಯಲ್ಲಿ ಟಿಕೆಟ್ ಸಿಗದ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಗುಳೆ ಹೋಗುವುದು ಮಾಮೂಲಿಯಾಗಿದೆ. ಇದು ಚುನಾವಣೆ ಸಂದರ್ಭದಲ್ಲಿ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.












Click it and Unblock the Notifications