ಮಂಡ್ಯದ ಮೇಲೆ ಬಿಜೆಪಿ ಕಣ್ಣು, ಎರಡು ಬೃಹತ್ ಸಮಾವೇಶ!
ಕರ್ನಾಟಕ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಎರಡು ಸಮ್ಮೇಳಗಳನ್ನು ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
ಮಂಡ್ಯ, ಫೆಬ್ರವರಿ 14; ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದ ಜಿಲ್ಲೆಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಅದರಲ್ಲೂ ವಿಶೇಷವಾಗಿ ಮಂಡ್ಯ ಜಿಲ್ಲೆಯ ಮೇಲೆ ಪಕ್ಷ ವಿಶೇಷ ಗಮನ ನೀಡಿದೆ. ಮಂಡ್ಯ ಗೆಲ್ಲಲು ಪಕ್ಷ ಈಗಾಗಲೇ ತಂತ್ರಗಳನ್ನು ರೂಪಿಸುತ್ತಿದೆ.
ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಎರಡು ಸಮ್ಮೇಳಗಳನ್ನು ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಮಂಡ್ಯ ಜಿಲ್ಲಾಧಿಕಾರಿ ಡಾ. ಹೆಚ್. ಎನ್. ಗೋಪಾಲಕೃಷ್ಣ ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ನಾಗಮಂಗಲ ತಾಲೂಕು ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, "ಜಿಲ್ಲೆಯಲ್ಲಿ ಫಲಾನುಭವಿಗಳ ಸಮ್ಮೇಳನ ನಡೆಸಲು ಸರ್ಕಾರ ನಿರ್ದೇಶನ ನೀಡಿದ್ದು, ಜಿಲ್ಲೆಯಲ್ಲಿ ಫೆಬ್ರವರಿ ಅಂತ್ಯದೊಳಗೆ ಆಯೋಜಿಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಿ" ಎಂದರು.

ಸರ್ಕಾರದಲ್ಲಿ ಹಲವಾರು ಯೋಜನೆಗಳಿವೆ. ಕೆಲವು ಯೋಜನೆಗಳಿಗೆ ಗುರಿ ನಿಗದಿಯಾಗಿರುತ್ತದೆ. ಕೆಲವು ಎಲ್ಲಾ ಅರ್ಹ ಫಲಾನುಭವಿಗಳಿಗೆ ಒದಗಿಸ ಬಹುದಾಗಿರುತ್ತದೆ. ಗುರಿ ನಿಗದಿತ ಯೋಜನೆಗಳಲ್ಲಿ ಇನ್ನೂ ಹೆಚ್ಚಿನ ಅರ್ಹ ಫಲಾನುಭವಿಗಳಿದ್ದರೆ ಪಟ್ಟಿ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಡಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರೈತ ವಿದ್ಯಾನಿಧಿ, ವಿದ್ಯಾರ್ಥಿ ವೇತನ ಮುಂತಾದ ಯೋಜನೆಗಳಲ್ಲಿ ಸೌಲಭ್ಯ ಪಡೆಯದೇ ಇರುವ ಹೊಸ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸೌಲಭ್ಯ ಒದಗಿಸುವುದು ಪಲಾನುಭವಿಗಳ ಸಮ್ಮೇಳನದ ಉದ್ದೇಶವಾಗಿದೆ ಎಂದು ಅವರು ವಿವರಿಸಿದರು.
ಎಲ್ಲಾ ಇಲಾಖೆಗಳ ಫಲಾನುಭವಿಗಳನ್ನು ಒಟ್ಟಿಗೆ ಸೇರಿಸಿ ಸೌಲಭ್ಯಗಳನ್ನು ವಿತರಿಸಲು ಆಯಾ ಇಲಾಖೆ ಮುಖ್ಯಸ್ಥರು ಯೋಜನೆ ಸಿದ್ಧಪಡಿಸಿ ಶೀಘ್ರವಾಗಿ ಜಿಲ್ಲಾಡಳಿತಕ್ಕೆ ಸಲ್ಲಿಸಿ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಹಕ್ಕುಪತ್ರ ವಿತರಣೆ; ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್ ನಾಗರಾಜು, "ಜಿಲ್ಲೆಯಲ್ಲಿ ಕಂದಾಯ ಗ್ರಾಮ ಹಾಗೂ ಹಕ್ಕು ಪತ್ರ ವಿತರಣೆಗೆ ಸಂಬಂಧಿಸಿದಂತೆ 10000 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುವುದು" ಎಂದರು.
ವಿವಿಧ ಇಲಾಖೆಯಿಂದ ನೀಡಲಾಗುವ ಸವಲತ್ತುಗಳು ಹಾಗೂ ಫಲಾನುಭವಿಗಳ ವಿವರವನ್ನು ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಪಡೆದುಕೊಂಡರು. ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಜಿಲ್ಲಾ ಪಂಚಾಯತ ಉಪಾ ಕಾರ್ಯದರ್ಶಿ (ಆಡಳಿತ) ಎಂ. ಬಾಬು, ಮುಡಾ ಆಯುಕ್ತೆ ಐಶ್ವರ್ಯ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಮಂಡ್ಯ ಮೇಲೆ ಬಿಜೆಪಿ ಕಣ್ಣು; ಮಂಡ್ಯ ಜಿಲ್ಲೆ ಜೆಡಿಎಸ್ ಪಕ್ಷದ ಭದ್ರಕೋಟೆ ಕೆ. ಆರ್. ಪೇಟೆ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರೇ ಇದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಗೂ ಮಂಡ್ಯ ಮೇಲೆ ವಿಶೇಷ ಪ್ರೀತಿ ಇದೆ. ಮಂಡ್ಯ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತವರು ಜಿಲ್ಲೆ.
ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸುವ ತಂತ್ರ ರೂಪಿಸಿರುವ ಬಿಜೆಪಿ ಮಂಡ್ಯದಲ್ಲಿಯೂ ಕಮಲ ಅರಳಿಸಲು ಮುಂದಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬಿಜೆಪಿ ಬೆಂಬಲ ನೀಡಿತ್ತು.
ಈ ಬಾರಿಯ ಚುನಾವಣೆ ತಯಾರಿಯ ಅಂಗವಾಗಿಯೇ ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್ ಶಾ ಕರೆಸಿ ಮಂಡ್ಯದಲ್ಲಿ ಸಮಾವೇಶವೊಂದನ್ನು ಬಿಜೆಪಿ ಈಗಾಗಲೇ ಮಾಡಿದೆ. ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಫೆಬ್ರವರಿ 20ರಿಂದ ಮಂಡ್ಯದಿಂದ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.
ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಜೆಡಿಎಸ್ ಪ್ರಾಬಲ್ಯ ಮುರಿಯಬೇಕು ಎಂಬುದು ಬಿಜೆಪಿಯ ತಂತ್ರ. ಅದರಲ್ಲೂ ಜೆಡಿಎಸ್ ಮತಗಳ ಮೇಲೆ ಅಮಿತ್ ಶಾ ಕಣ್ಣಿಟ್ಟಿದ್ದಾರೆ. ಇದರ ಭಾಗವಾಗಿಯೇ ಮಂಡ್ಯದಲ್ಲಿ ಎರಡು ಬೃಹತ್ ಸಮಾವೇಶ ಆಯೋಜನೆ ಮಾಡಲಾಗುತ್ತಿದೆ.












Click it and Unblock the Notifications