ಸಕ್ಕರೆನಾಡಲ್ಲಿ ಕೋಟಿ ಕಂಠ ಗಾಯನ: ಕನ್ನಡವನ್ನೇ ಬಳಸುವ ಸಂಕಲ್ಪ
ಮಂಡ್ಯ, ಅಕ್ಟೋಬರ್ 28 : ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಮೂಲಕ ಮದ್ದೂರು ತಾಲೂಕಿನ ಸತ್ಯಾಗ್ರಹ ಸೌಧದಲ್ಲಿ ಶಾಲಾ ಮಕ್ಕಳು, ಕನ್ನಡ ಪರ ಸಂಘಟಕರು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಅಧಿಕಾರಿಗಳು ಕನ್ನಡ ಗಾಯನದ ಮೂಲಕ ಕನ್ನಡದ ಸಿಹಿ ಕಂಪನ್ನು ಸೂಸಿದರು.
ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತೆ ಹಾಗೂ ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದು, ಇವುಗಳ ಕೇಳುವಿಕೆಯು ನಮ್ಮಲ್ಲಿ ಅಭಿಮಾನವನ್ನು ಮೂಡಿಸುತ್ತದೆ. ಕೋಟಿ ಕಂಠ ಗಾಯನದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ', ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು', ಡಾ.ಚನ್ನವಿರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ', ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ', ಡಾ.ಡಿ.ಎಸ್.ಕರ್ಕಿಯವರ ಹಚ್ಚೆವು ಕನ್ನಡದ ದೀಪ' ಹಾಗೂ ಡಾ.ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಎಂಬ ಆರು ಗೀತೆಗಳನ್ನು ಹಾಡಲಾಯಿತು.

ಮದ್ದೂರು ತಾಲೂಕಿನ ಶಿವಪುರ ಸತ್ಯಾಗ್ರಹ ಸೌಧದಲ್ಲಿ ನಡೆದ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ಚಾಲನೆ ನೀಡಿದರು.
ಕೋಟಿ ಕಂಠ ಗಾಯನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ. ಪಿ. ಯೋಗೇಶ್ವರ್, ಜಿಲ್ಲಾಧಿಕಾರಿ ಡಾ. ಹೆಚ್.ಎನ್.ಗೋಪಾಲಕೃಷ್ಣ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್.ನಾಗರಾಜು, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತಾ ಎಲ್.ಹುಲ್ಮನಿ, ತಹಶೀಲ್ದಾರ್ ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್. ಉದಯ್ಕುಮಾರ್ ಸೇರಿಂದಂತೆ ಇತರರು ಪಾಲ್ಗೊಂಡಿದ್ದಾರೆ.

ಗಾಯನದ ನಂತರ ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್ ನಾಗರಾಜು ಮಾತನಾಡಿ, "ಕನ್ನಡ ನಾಡಿನ ಪ್ರಜೆಯಾಗಿ ನಾನು ನನ್ನ ನಾಡು, ನುಡಿಗಳನ್ನು, ಪ್ರೀತಿಸುತ್ತೇನೆ ಹಾಗೂ ಗೌರವಿಸುತ್ತೇನೆ. ನಾನು ಕನ್ನಡದಲ್ಲೇ ಮಾತನಾಡುತ್ತೇನೆ, ಕನ್ನಡದಲ್ಲೇ ಬರೆಯುತ್ತೇನೆ, ಕನ್ನಡವನ್ನೇ ಬಳಸುತ್ತೇನೆ ಎಂಬ ಪಣ ತೊಡುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧನಾಗಿರುತ್ತೇನೆ. ಕನ್ನಡ ನಾಡಿನಲ್ಲಿರುವ ಕನ್ನಡೇತರ ಬಂಧುಗಳಿಗೆ ಕನ್ನಡ ಕಲಿಸುತ್ತೇನೆ" ಎಂದು ಸಂಕಲ್ಪ ವಿಧಿ ಬೋಧಿಸಿದರು.











Click it and Unblock the Notifications