ಕೆಆರ್ ಪೇಟೆ: ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಪತಾಕೆ!
ಮಂಡ್ಯ, ಡಿಸೆಂಬರ್ 9: ಜೆಡಿಎಸ್ ಮತ್ತು ಕಾಂಗ್ರೆಸ್ ಪಾರುಪತ್ಯ ಹೊಂದಿರುವ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಬಿಜೆಪಿ ಮೊದಲ ಬಾರಿಗೆ ಕಮಲ ಅರಳಿಸುವ ಬಯಕೆ ಹೊಂದಿದೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ ಗೆದ್ದಿದ್ದ ಅನರ್ಹ ಶಾಸಕ ನಾರಾಯಣ ಗೌಡ ಈ ಬಾರಿ ಬಿಜೆಪಿಯ ಅಭ್ಯರ್ಥಿ. ಅವರಿಗೆ ಎದುರಾಳಿಗಳಾಗಿ ಕಾಂಗ್ರೆಸ್ನ ಕೆ.ಬಿ. ಚಂದ್ರಶೇಖರ್ ಮತ್ತು ಜೆಡಿಎಸ್ನ ಬಿಎಲ್ ದೇವರಾಜು ಇದ್ದಾರೆ.
ಡಿ. 5ರಂದು ನಡೆದ ಚುನಾವಣೆಯಲ್ಲಿ ಶೇ 66.25ರಷ್ಟು ಮತದಾನ ನಡೆದಿತ್ತು. ಪಕ್ಷಕ್ಕೆ ಕೈಕೊಟ್ಟು ಸರ್ಕಾರ ಉರುಳಲು ಕಾರಣವಾದ ಅನರ್ಹ ಶಾಸಕರಲ್ಲಿ ಒಬ್ಬರಾದ ನಾರಾಯಣ ಗೌಡ ಅವರನ್ನು ಸೋಲಿಸಲು ಜೆಡಿಎಸ್ ಪಣತೊಟ್ಟಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದ ಎಲ್ಲ ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ಜಯಭೇರಿ ಬಾರಿಸಿತ್ತು. ಆದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲ ಪಡೆದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಎದುರು ಸೋಲು ಅನುಭವಿಸಿದ್ದರು.
ಈಗ ಬದಲಾದ ಪರಿಸ್ಥಿತಿಯಲ್ಲಿ ಇಲ್ಲಿನ ಲೆಕ್ಕಾಚಾರಗಳು ಕೂಡ ಬದಲಾಗಿದೆ. ಚುನಾವಣೆಯಲ್ಲಿ ಗೆದ್ದರೆ ಮಂಡ್ಯದಲ್ಲಿ ಮತ್ತೆ ತನ್ನ ಹಿಡಿತ ಸಾಧಿಸಲು ಕಾಂಗ್ರೆಸ್ಗೆ ಸಹಾಯವಾಗಲಿದೆ.
ಕೆಆರ್ ಪೇಟೆ ಉಪ ಚುನಾವಣೆಯ ಫಲಿತಾಂಶ ಏನಾಗಲಿದೆ. ಮಾಹಿತಿಗೆ ಮುಂದೆ ಓದಿ.
ನಾಲ್ಕನೇ ಸುತ್ತಿನ ಮತ ಎಣಿಕೆ ಮುಕ್ತಾಯವಾದಾಗ ಬಿಜೆಪಿಯ ನಾರಾಯಣ ಗೌಡ 13,018 ಮತಗಳನ್ನು ಪಡೆದು, ಜೆಡಿಎಸ್ ಅಭ್ಯರ್ಥಿಗಿಂತ 260 ಮತಗಳ ಮುನ್ನಡೆ ಪಡೆದುಕೊಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ 8,072 ಮತಗಳನ್ನು ಪಡೆದಿದ್ದರೆ, ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜು 12,758 ಮತಗಳನ್ನು ಪಡೆದಿದ್ದರು.
ಎಂಟನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡ ಬಳಿಕವೂ ನಾರಾಯಣ ಗೌಡ 1,400 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹತ್ತನೇ ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ 3126 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ನಾರಾಯಣಗೌಡ 9 ಸಾವಿರಕ್ಕೂ ಅಧಿಕ ಮತಗಳಿಂದ ಗೆಲ್ಲುವ ಮೂಲಕ ಮೊದಲ ಬಾರಿಗೆ ಬಿಜೆಪಿಗೆ ಜಯ ತಂದುಕೊಟ್ಟಿದ್ದಾರೆ.