ಮಂಡ್ಯ : ವಿದ್ಯಾರ್ಥಿನಿ ಸಾವು, ಡೆಂಗ್ಯೂ ಶಂಕೆ
ಮಂಡ್ಯ, ಫೆಬ್ರವರಿ 25 : ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾರೆ. ಡೆಂಗ್ಯು ಜ್ವರದ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯಾಂಶ ತಿಳಿಯಲಿದೆ.
ಗ್ರಾಮದ ಪಟೇಲ್ ದೇವಾನಂದ ಅವರ ಪುತ್ರಿ ರಕ್ಷಿತಾ (13) ಮೃತ ದುರ್ದೈವಿ. ಈಕೆ ಪಟ್ಟಣದ ಬಿ.ಜಿ.ಎಸ್ ವಿದ್ಯಾಸಂಸ್ಥೆಯಲ್ಲಿ 8ನೇ ತರಗತಿ ಓದುತ್ತಿದ್ದು, ಕಳೆದ ಮೂರು ದಿನದ ಹಿಂದೆ ಜ್ವರದಿಂದ ಬಳಲುತ್ತಿದ್ದರು. ಖಾಸಗಿ ಕ್ಲಿನಿಕ್ವೊಂದರಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.
ಬಳಿಕ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಳು. ಶನಿವಾರ ಬೆಳಗ್ಗೆ ಹಠಾತ್ತಾಗಿ ತೀವ್ರ ಜ್ವರ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಪೋಷಕರು ರಕ್ಷಿತಾಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡುವಷ್ಟರಲ್ಲಿ ಸಾವನ್ನಪ್ಪಿದ್ದಾಳೆ.

ವೈದ್ಯರು ಸಾವಿನ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಿದ್ದು, ಬಳಿಕ ಮೃತ ದೇಹವನ್ನ ವಾರಸುದಾರರಿಗೆ ನೀಡಲಾಗಿದೆ. ಶವ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ.
ವಿಷಯ ತಿಳಿದ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದರು. ಈ ವೇಳೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಬಿಜಿಎಸ್ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ವಿದ್ಯಾರ್ಥಿನಿಯ ಅಂತಿಮ ದರ್ಶನ ಪಡೆದರು. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications