ಮಂಡ್ಯ: ಸೆ.16 ರಿಂದ ಕೆಆರ್ ಎಸ್ ಪ್ರವಾಸಿಗರಿಗೆ ಮುಕ್ತ
ಮಂಡ್ಯ, ಸೆಪ್ಟೆಂಬರ್ 15: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುವ ಪ್ರವಾಸಿಗರು ಇನ್ನು ಯಾವುದೇ ಪ್ರವಾಸಿ ತಾಣ ನೋಡಲು ಮಿಸ್ ಮಾಡಿಕೊಳ್ಳುವಂತಿಲ್ಲ. ಈಗಾಗಲೇ ಜಯಚಾಮರಾಜೇಂದ್ರ ಮೃಗಾಲಯ ಪ್ರವಾಸಿಗರಿಗೆ ತೆರೆದಿದ್ದು, ಈಗ ಮತ್ತೊಂದು ಪ್ರಮುಖ ಪ್ರವಾಸಿ ತಾಣ ತೆರೆಯಲಿದೆ.
ಕೆಆರ್ ಎಸ್ ಜಲಾಶಯವು ನಾಳೆಯಿಂದ ಪ್ರವಾಸಿಗರಿಗೆ ಮುಕ್ತವಾಗಲಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವು ಸೆ.16 ರಿಂದ ಪ್ರವಾಸಿಗರಿಗೆ ಬೃಂದಾವನ ಗಾರ್ಡನ್ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿದೆ.
ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಕಳೆದ ಮಾರ್ಚ್ ತಿಂಗಳಿನಿಂದಲೇ ಕೆ.ಆರ್.ಎಸ್ ವೀಕ್ಷಿಸಲು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು.
ಇದೀಗ ಲಾಕ್ ಡೌನ್ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಕಾವೇರಿ ನೀರಾವರಿ ನಿಗಮ ನಿಯಮಿತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Recommended Video
ಕೊರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಪ್ರವಾಸಿಗರಿಗೆ ಪ್ರವೇಶ ನೀಡಲಾಗುವುದು, ಪ್ರವಾಸಿಗರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ತಿಳಿಸಿದ್ದಾರೆ.