ಮಂಡ್ಯ ಜಿಲ್ಲೆ ಅಭಿವೃದ್ಧಿಯ ನೀಲನಕ್ಷೆ ಬಿಚ್ಚಿಟ್ಟ ಕುಮಾರಸ್ವಾಮಿ
ಮಂಡ್ಯ, ಸೆಪ್ಟೆಂಬರ್ 26: ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರನ್ನು ಪೂರೈಸಲು 1700 ಕೋಟಿ ರೂಗಳ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಜಿಲ್ಲಾಡಳಿತ ಸಿದ್ದಪಡಿಸಿದೆ. ಈ ಯೋಜನೆಗೆ ಚಾಲನೆ ನೀಡಲು ಸೂಚಿಸಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಅಭಿವೃದ್ಧಿಗಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳ ಬಗ್ಗೆ ಪೂರ್ಣ ಮಾಹಿತಿ ನೀಡಿದರು.

ಕುಡಿಯುವ ನೀರನ್ನು ಒದಗಿಸಲು ಎಲ್ಲಾ ಕೆರೆಗಳನ್ನು ತುಂಬಿಸಲು ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮಂಡ್ಯ ನಗರದ ಸಮಗ್ರ ಅಭಿವೃದ್ಧಿಯ ಅನುದಾನಕ್ಕೆ ಕ್ರಿಯಾ ಯೋಜನೆಯನ್ನು ಜಿಲ್ಲಾಡಳಿತ ಸಿದ್ದಪಡಿಸಿದ್ದು, ಇದರ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಂಡ್ಯ ಜಿಲ್ಲೆಯಲ್ಲಿ 7 ತಾಲ್ಲೂಕುಗಳಲ್ಲಿ ರೈತರು ಯಾವ ಬೆಳೆಯನ್ನು ಬೆಳೆದರೆ ಆರ್ಥಿಕವಾಗಿ ಸಬಲರಾಗುತ್ತಾರೆ ಎಂಬುಂದನ್ನು ಸಂಪೂರ್ಣ ಮಾಹಿತಿಯನ್ನು ತೋಟಗಾರಿಕೆ ಉಪನಿರ್ದೇಶಕರು ಸಿದ್ಧಪಡಿಸಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದ ವಿಷಯಗಳ ಮುಖ್ಯಾಂಶ ಕೆಳಕಂಡಂತಿದೆ.
* ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ರೈತರು ಆರ್ಥಿಕವಾಗಿ ಅಭಿವೃದ್ಧಿಯಾಗಲು ಹೆಚ್ಚಿನ ಅವಕಾಶವಿದ್ದು, ಇದರ ಸದ್ಬಳಕೆಯನ್ನು ರೈತರು ಮಾಡಿಕೊಳ್ಳಬೇಕು ಈ ನಿಟ್ಟಿನಲ್ಲಿ ಈ ಯೋಜನೆಯ ಸಮರ್ಪಕ ಅನುಷ್ಟಾನಕ್ಕೆ ಹೆಚ್ಚು ಒತ್ತು ನೀಡುವಂತೆ ತಿಳಿಸಲಾಯಿತು.
* ಆಸ್ಪತ್ರೆಗಳಲ್ಲಿ ರಾತ್ರಿ ವೇಳೆ ವೈದ್ಯರು ಕಡ್ಡಾಯವಾಗಿ ಇರಬೇಕು. ರಾತ್ರಿವೇಳೆ ಚಿಕಿತ್ಸೆಗಾಗಿ ಬರುವ ರೋಗಿಗಳ ಸೇವೆಯನ್ನು ವೈದ್ಯರು ಮಾಡಬೇಕು ಎಂದು ಜಿಲ್ಲಾ ಆರೋಗ್ಯಧಿಕಾರಿಗಳಿಗೆ ಸೂಚಿಸಲಾಯಿತು.
* ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯವನ್ನು ಬಿಪಿಎಲ್ ಹಾಗೂ ಆಧಾರ್ ಕಾರ್ಡ್ ಇರುವವರು ಕೂಡ ಪಡೆಯಬಹುದಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಲಾಯಿತು.
* ವಸತಿ ರಹಿತ ರೈತರಿಗೆ ಕೂಡಲೇ ಸರ್ಕಾರಿ ಜಮೀನನ್ನು ಗುರ್ತಿಸಿ ನಿವೇಶನವನ್ನು ನೀಡಲು ಕ್ರಮವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಯಿತು.
* ಜಿಲ್ಲೆಯಲ್ಲಿ ದುರಸ್ತಿಯಲ್ಲಿರುವ ಶಾಲಾ ಕೋಠಡಿಗಳ ಮಾಹಿತಿ ಹಾಗೂ ಅಗತ್ಯವಾಗಿ ಬೇಕಾಗಿರುವ ಶಾಲಾ ಕಟ್ಟಡಗಳು ಹಾಗೂ ಶಾಲೆಗಳ ಅಭಿವೃದ್ಧಿಯ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜಂಟಿಯಾಗಿ ಸಂಪೂರ್ಣವಾದ ಮಾಹಿತಿಯನ್ನು ಸಿದ್ಧಪಡಿಸಿ ನೀಡುವಂತೆ ಸೂಚಿಸಲಾಯಿತು.
* ಯುವ ಜನರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಜಿಲ್ಲಾ ಕ್ರೀಡಾಂಗಣ ಹಾಗೂ ತಾಲ್ಲೂಕು ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಲು ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಲಾಯಿತು.
* ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಬೇಗ ಮುಗಿಸಲು ಕ್ರಮವಹಿಸಬೇಕು ಹಾಗೂ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ರೈತರಿಗೆ ಸಮರ್ಪಕವಾದ ಪರಿಹಾರವನ್ನು ನೀಡಲು ಸೂಚಿಸಲಾಯಿತು.
* ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 550 ಹಾಸಿಗೆಯ ಸಾಮಥ್ರ್ಯವಿರುವ ಸೌಲಭ್ಯವಿದ್ದು, ಇದನ್ನು 700 ಹಾಸಿಗೆಯ ಸಾಮಧ್ರ್ಯವಿರುವ ಸೌಲಭ್ಯಕ್ಕೆ ಮೇಲ್ದರ್ಜಗೆರೆಸಲ 30 ಕೋಟಿ ಅನುದಾನ ಕಾಯ್ದಿರಿಸಲಾಗಿದ್ದು, ಈ ನಿಟ್ಟಿನಲ್ಲಿ ಶೀಘ್ರವೇ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಯಿತು.
* ಪ್ರಗತಿ ಪರಿಶೀಲನಾ ಸಭೆಯಲ್ಲಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.












Click it and Unblock the Notifications