ಸುಮಲತಾ ಅಲ್ಲ.. ಕುಮಾರಸ್ವಾಮಿ ಅಲ್ಲ..; ಮಾಜಿ ಸಚಿವ ಸಿಎಸ್ ಪುಟ್ಟರಾಜುಗೆ ಮಂಡ್ಯ ಟಿಕೆಟ್!
ಮಂಡ್ಯ, ಮಾರ್ಚ್ 08: ಮಂಡ್ಯ ಸದ್ಯಕ್ಕೆ ಸಕತ್ ಟ್ರೆಂಡಿಂಗ್ನಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ನ ಮೈತ್ರಿಯಿಂದ ಯಾರು ಕಣಕ್ಕೆ ಇಳಿಯುತ್ತಾರೆ ಎಂಬುದನ್ನು ನೋಡಲು ಜನ ಕಾಯುತ್ತಿದ್ದಾರೆ. ಇದರ ನಡುವೆ ನಾನು ಮಂಡ್ಯ ಬಿಟ್ಟು ಹೋಗಲ್ಲ.. ಹೋಗಲ್ಲ ಎನ್ನುತ್ತಾ ಪದೇ ಪದೇ ಟಿಕೆಟ್ ಸಿಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಸುಮಲತಾ ಅಂಬರೀಶ್.
ಪಕ್ಷ ಸಂಘಟನೆ ಮಾಡಲು, ಪಕ್ಷದ ಪರ ಕೆಲಸ ಮಾಡಲು ನೀವು ಬೇಕು, ಒಂದು ವಾರ ಕಾಯಿರಿ ಎನ್ನುತ್ತಾ ಹಾಲಿ ಸಂಸದೆ ಸುಮಲತಾ ಅಂಬರೀಷ್ ಪಕ್ಷದ ಕಾರ್ಯಕರ್ತರಿಗೆ ಹೇಳುತ್ತಾ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ. ಆದರೆ, ಹೊಸ ಮಾಹಿತಿ ಪ್ರಕಾರ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ನ ಮಾಜಿ ಸಚಿವ ಸಿಎಸ್ ಪುಟ್ಟರಾಜು ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಮಾಜಿ ಸಚಿವ ಸಿಎಸ್ ಪುಟ್ಟರಾಜು ಎನ್ಡಿಎ ಅಭ್ಯರ್ಥಿ
ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಸರಣಿ ಸಭೆಗಳಲ್ಲಿ ಮಾಜಿ ಸಚಿವ ಸಿಎಸ್ ಪುಟ್ಟರಾಜು ಅವರ ಹೆಸರು ಚರ್ಚೆಯಾಗಿದೆ. ಕಳೆದ ಕೆಲವು ದಿನಗಳಿಂದ ನಡೆದ ಈ ಸಭೆಗಳು ಮುಖ್ಯವಾಗಿ ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಕ್ಷೇತ್ರಗಳ ಮೇಲೆ ಕೇಂದ್ರೀಕೃತವಾಗಿವೆ.
2019ರ ಲೋಕಸಭಾ ಚುನಾವಣೆಯಲ್ಲಿ ಆಗಿನ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸುಮಲತಾ ಅಂಬರೀಷ್ ಸೋಲಿಸಿದಂತೆ ಮಂಡ್ಯ ಮತ್ತೆ ಹೈವೋಲ್ಟೇಜ್ ಕ್ಷೇತ್ರವಾಗುವ ಎಲ್ಲಾ ಸಾಧ್ಯತೆ ಇದೆ. ಸುಮಲತಾ ಅವರು ಎರಡನೇ ಬಾರಿ ಮಂಡ್ಯದಿಂದ ಸ್ಪರ್ಧಿಸುವ ಹುನ್ನಾರ ನಡೆಸುತ್ತಿದ್ದು, ಮಂಡ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ ಜೆಡಿಎಸ್.
ಇನ್ನು, ಮಾಜಿ ಸಚಿವ ಸಿಎಸ್ ಪುಟ್ಟರಾಜು ಅವರು ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ಆರಂಭಿಸುತ್ತಿದ್ದಾರೆ. ಸಿಎಸ್ ಪುಟ್ಟರಾಜು ಈಗಾಗಲೇ ಒಂದು ಬಾರಿ ಮಂಡ್ಯ ಲೋಕಸಭೆಯನ್ನು ಪ್ರತಿನಿಧಿಸಿದ್ದಾರೆ. ಎಚ್ಡಿ ಕುಮಾರಸ್ವಾಮಿ ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆಗಿನ ಸಭೆಯ ಸಂದರ್ಭದಲ್ಲಿ ಮಂಡ್ಯ ಜೆಡಿಎಸ್ಗೆ ಎಂದು ಮಾಹಿತಿ ನೀಡಿದ್ದಾರೆ.

ಹೀಗಾಗಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಸಕ್ರಿಯರಾಗಿರಲು ಸೂಚಿಸಲಾಗಿದೆ. ಎನ್ಡಿಎ ಅಭ್ಯರ್ಥಿಯಾಗಲಿರುವ ಮಾಜಿ ಸಚಿವ ಪುಟ್ಟರಾಜು ಅವರಿಗೂ ಚುನಾವಣೆಗೆ ಸಿದ್ಧರಾಗಿರಲು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಎಚ್ ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ಧಿಸುವುದಿಲ್ಲ ಎಂಬುದು ಖಚಿತವಾಗಿದೆ.
ಸ್ಟಾರ್ ಚಂದ್ರು ಕಾಂಗ್ರೆಸ್ ಅಭ್ಯರ್ಥಿ
ಗೌರಿಬಿದನೂರು ಪಕ್ಷೇತರ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಅವರ ಸಹೋದರ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಮಂಡ್ಯ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಪರಿಗಣಿಸುತ್ತಿದೆ ಎಂಬ ಮಾಹಿತಿಯಿದೆ. ಇನ್ನು, ಸುಮಲತಾ ಅವರು ಮಂಡ್ಯ ಬಿಡುವ ಮಾತೇ ಇಲ್ಲ. ಜೆಡಿಎಸ್ನವರು ಮಂಡ್ಯದಲ್ಲಿ ಕಣಕ್ಕಿಳಿಯಲು ತಯಾರಾಗಿದ್ದಾರೆ. ಟಿಕೆಟ್ ನಿರಾಕರಿಸಿದರೆ ಸುಮಲತಾ ಸ್ವತಂತ್ರವಾಗಿ ಸ್ಪರ್ಧಿಸುವ ಸಾಧ್ಯತೆಗಳಿವೆ. ಹೀಗಾದರೆ ಮಂಡ್ಯ ಮತ್ತೆ ಆಕರ್ಷಣೆಯ ಕೇಂದ್ರಬಿಂದುವಾಗುವುದರಲ್ಲಿ ಸಂಶಯವಿಲ್ಲ.
2019 ರಲ್ಲಿ ಸುಮಲತಾ ಅವರನ್ನು ಬೆಂಬಲಿಸಿದ್ದ ಸ್ಯಾಂಡಲ್ವುಡ್ ನಟ ದರ್ಶನ್ ಅವರನ್ನು ಭೇಟಿ ಮಾಡುವ ಮೂಲಕ "ಸ್ಟಾರ್" ಚಂದ್ರು ಅನಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ. ಮೂಲಗಳ ಪ್ರಕಾರ ಕೋಲಾರದಲ್ಲಿ ಜೆಡಿಎಸ್ನ ಹಾಲಿ ಶಾಸಕ ಮಂಜುನಾಥ್ ಹಾಗೂ ಕಾಂಗ್ರೆಸ್ನ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಆಯ್ಕೆಯಾಗಿದ್ದು, ಶೀಘ್ರದಲ್ಲೇ ಜೆಡಿಎಸ್ ಸೇರುವ ಸಾಧ್ಯತೆ ಇದೆ.












Click it and Unblock the Notifications