ದೇವೇಗೌಡರಿಗೆ ಆಹ್ವಾನ ನೀಡಿಲ್ಲ ಎಂದು ಕುಮಾರಸ್ವಾಮಿ ಆಣೆ ಮಾಡಲಿ: ಬಿಜೆಪಿ
ಮಂಡ್ಯ ನವೆಂಬರ್12 : ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಭಾಗವಹಿಸುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಖುದ್ದು ಭೇಟಿ ಮಾಡಿದ ಸಿ.ಎನ್. ಅಶ್ವತ್ಥ್ ನಾರಾಯಣ್ ಅಹ್ವಾನಿಸಿದ್ದರೂ ಸಹ ಜೆಡಿಎಸ್ ಇಲ್ಲದ ಪುತ್ಥಳಿ ರಾಜಕೀಯ ಮಾಡುತ್ತಿದೆ ಎಂದು ಮಂಡ್ಯ ಜಿಲ್ಲಾ ಬಿಜೆಪಿ ಆರೋಪಿಸಿದೆ.
ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ್ ಅಕ್ಟೋಬರ್ 19ರಂದು ದೇವೇಗೌಡರ ನಿವಾಸಕ್ಕೆ ತೆರಳಿ ಗೌಡರನ್ನು ಭೇಟಿ ಮಾಡಿ ಅಕ್ಟೋಬರ್ 21ರಂದು ನಡೆದ ಮೃತ್ತಿಕೆ ಸಂಗ್ರಹ ಅಭಿಯಾನ ಚಾಲನೆ ಹಾಗೂ ನವೆಂಬರ್ 11ರ ಪುತ್ಥಳಿ ಅನಾವರಣ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದೆ. ಆದರೆ ಇದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಲ್ಲಗೆಳೆಯುತ್ತಿರುವುದು ವಿಷಾದನೀಯ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್ ಆರೋಪಿಸಿದ್ದಾರೆ.
ಪ್ರತಿಮೆ ಅನಾವರಣದಿಂದ ಮತ ಸಿಗಲ್ಲ: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಹ, ಹಿರಿಯ ಮುತ್ಸದ್ದಿ ರಾಜಕಾರಣಿ ದೇವೇಗೌಡರನ್ನು ಅತ್ಯಂತ ಗೌರವದಿಂದ ನಡೆಸಿಕೊಳ್ಳುತ್ತಾರೆ. ಜೆಡಿಎಸ್ನವರು ಇಲ್ಲ ಸಲ್ಲದ ಆರೋಪಗಳನ್ನು ಮಾಡುವ ಮೂಲಕ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಒಕ್ಕಲಿಗರ ಬಗ್ಗೆ ಸದಾ ಕಾಳಜಿ ತೋರುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಅಲ್ಲದೇ ಅಶ್ವತ್ಥ್ ನಾರಾಯಣ್ ಹಾಗೂ ಆರ್. ಅಶೋಕ್ ಅವರನ್ನು ಕಳುಹಿಸಿ ಆಹ್ವಾನಿಸಿದ್ದಾರೆ. ಇಷ್ಟಾದರೂ ಜೆಡಿಎಸ್ನವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ದೇವೇಗೌಡರಿಗೆ ಆಹ್ವಾನ ನೀಡಿಲ್ಲ ಎನ್ನುವುದಾದರೆ ಕುಮಾರಸ್ವಾಮಿ ಅವರು ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ. ದೇವೇಗೌಡರೇ ಈ ಬಗ್ಗೆ ಹೇಳಿಕೆ ನೀಡಲಿ. ಅದು ಬಿಟ್ಟು ಚುನಾವಣಾ ಸಂದರ್ಭವನ್ನು ಬಳಸಿಕೊಂಡಿರುವ ಜೆಡಿಎಸ್ ಮತ ರಾಜಕೀಯದಲ್ಲಿ ನಿರತವಾಗಿದೆ. ಒಕ್ಕಲಿಗರ ಮತಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್, ಒಕ್ಕಲಿಗರ ಮಠವನ್ನು ಒಡೆದು ವಿಶ್ವಒಕ್ಕಲಿಗರ ಪೀಠವನ್ನು ಸ್ಥಾಪಿಸಿದ್ದಾದರೂ ಏಕೆ ಎಂದು ಪ್ರಶ್ನಿಸಿದ ಸಿ.ಟಿ ಮಂಜುನಾಥ್, ನಿನ್ನೆಯ ಕಾರ್ಯಕ್ರಮದಲ್ಲಿ ಸಮುದಾಯದ ಇಬ್ಬರು ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಆದರೂ ಇಲ್ಲದ ಆರೋಪ ಮಾಡುವುದು ಜೆಡಿಎಸ್ಗೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.