ಮಂಡ್ಯ ಲೋಕಸಭೆ ಉಪ ಚುನಾವಣೆ : ಜೆಡಿಎಸ್ ಜೊತೆ ಮೈತ್ರಿಗೆ ವಿರೋಧ?
ಮಂಡ್ಯ, ಅಕ್ಟೋಬರ್ 08 : ಮಂಡ್ಯ ಕ್ಷೇತ್ರದ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಬಾರದು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನ.6ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಮತ್ತು ಕಾಂಗ್ರೆಸ್ ನಾಯಕ ಎನ್.ಚಲುವರಾಯಸ್ವಾಮಿ ಅವರು ಮೈತ್ರಿ ಬೇಡ ಎಂದು ಸಲಹೆ ನೀಡಿದ್ದಾರೆ. 'ಪಕ್ಷ ಮತ್ತು ಕಾರ್ಯಕರ್ತರ ಹಿತದೃಷ್ಟಿಯಿಂದ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಬಾರದು' ಎಂದು ಹೇಳಿದ್ದಾರೆ.
ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಕ್ಷೇತ್ರದ ಲೋಕಸಭೆ ಉಪ ಚುನಾವಣೆ ಘೋಷಣೆಯಾಗಿದೆ. ಮಂಡ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ಗೆ ಕ್ಷೇತ್ರವನ್ನು ಬಿಟ್ಟುಕೊಡಲಿದ್ದು, ಶಿವಮೊಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಲಿದೆ ಎಂಬ ಸುದ್ದಿಗಳು ಹಬ್ಬಿವೆ. ಮೈತ್ರಿ ಬಗ್ಗೆ ಅಧಿಕೃತ ಘೋಷಣೆ ಇನ್ನೂ ಆಗಿಲ್ಲ.
ಅ. 9ರಂದು ಮಂಡ್ಯ ಲೋಕಸಭಾ ಉಪ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಅ.16 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಅ.17 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ. 20 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನ. ನವೆಂಬರ್ 3 ರಂದು ಮತದಾನ ನಡೆಯಲಿದೆ. ನವೆಂಬರ್ 6 ರಂದು ಫಲಿತಾಂಶ ಪ್ರಕಟವಾಗಲಿದೆ. ಚೆಲುವರಾಯಸ್ವಾಮಿ ಹೇಳಿದ್ದೇನು? ಚಿತ್ರಗಳಲ್ಲಿ ನೋಡಿ...

ಪಕ್ಷ ಸದೃಢವಾಗಿದೆ
'ಪಕ್ಷ ಮತ್ತು ಕಾರ್ಯಕರ್ತರ ಹಿತ ದೃಷ್ಟಿಯಿಂದ ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬೇಡ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ಹೀಗಾಗಿ ಸ್ವತಂತ್ರವಾಗಿ ಚುನಾವಣೆ ಎದುರಿಸಬೇಕು ಎಂಬುದು ನನ್ನ ಅಭಿಪ್ರಾಯ' ಎಂದು ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಬಿಟ್ಟುಕೊಡಬೇಕು ಎಂಬ ಕಾನೂನು ಇಲ್ಲ
'ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂಬ ಕಾನೂನು ಇಲ್ಲ. ಅವರು ಬಿಟ್ಟುಕೊಡಿ ಎಂದು ಕೇಳುತ್ತಾರೆ. ಆದರೆ, ಪಕ್ಷ ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕು. ಈಗ ಚುನಾವಣೆ ದಿನಾಂಕ ಮಾತ್ರ ಘೋಷಣೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಕುವುದಿ ಎಂದು ಹೇಳಿಲ್ಲ' ಎಂದು ಚಲುವರಾಯಸ್ವಾಮಿ ಹೇಳಿದರು.
'ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ಮಂಡ್ಯ ಲೋಕಸಭೆ ಉಪ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾನು ಟಿಕೆಟ್ ಆಕಾಂಕ್ಷಿಯೂ ಅಲ್ಲ' ಎಂದು ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

ಜೆಡಿಎಸ್ ಪಕ್ಷಕ್ಕೆ ಅರಿವು ಇಲ್ಲ
'ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದೆ. 80 ಸ್ಥಾನ ಗೆದ್ದ ಕಾಂಗ್ರೆಸ್ 36 ಸ್ಥಾನ ಗೆದ್ದ ಜೆಡಿಎಸ್ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದೆ. ಈ ಅರಿವು ಜೆಡಿಎಸ್ ಮುಖಂಡರಲ್ಲಿ ಇದ್ದಂತೆ ಕಾಣುತ್ತಿಲ್ಲ' ಎಂದು ಚಲುವರಾಯಸ್ವಾಮಿ ಆರೋಪಿಸಿದರು.

ಉಪ ಚುನಾವಣೆ ಅಗತ್ಯವಿದೆಯೇ?
'ಉಪ ಚುನಾವಣೆಯಲ್ಲಿ ಗೆದ್ದವರು ಮಾರ್ಚ್ ತನಕ ಮಾತ್ರ ಅಧಿಕಾರದಲ್ಲಿರುತ್ತಾರೆ. ಆದ್ದರಿಂದ, ಚುನಾವಣಾ ಆಯೋಗ ನೈಸರ್ಗಿಕ ನ್ಯಾಯದ ಬಗ್ಗೆ ಆಲೋಚಿಸಬೇಕಿತ್ತು. ಒಂದು ವರ್ಷಕ್ಕಿಂತ ಹೆಚ್ಚಿನ ಅವಧಿ ಇದ್ದಾಗ ಮಾತ್ರ ಉಪ ಚುನಾವಣೆ ನಡೆಯಬೇಕು. ಈ ಬಗ್ಗೆ ಸಂವಿಧಾನಕ್ಕೆ ತಿದ್ದುಪಡಿ ತರುವ ಅಗತ್ಯವಿದೆ' ಎಂದರು.












Click it and Unblock the Notifications